ಅಪಘಾತ: ಎಂಬಿಎ ವಿದ್ಯಾರ್ಥಿ ಮೃತ್ಯು
Update: 2018-04-26 12:35 GMT
ಬೆಂಗಳೂರು, ಎ.26: ವೇಗವಾಗಿ ವಾಹನ ಚಲಾಯಿಸುತ್ತಿದ್ದ ಎಂಬಿಎ ವಿದ್ಯಾರ್ಥಿಯೊಬ್ಬ ಅಪರಿಚಿತ ವಾಹನಕ್ಕೆ ಢಿಕ್ಕಿ ಹೊಡೆದು ಮೃತಪಟ್ಟಿರುವ ಘಟನೆ ಚಿಕ್ಕಜಾಲದ ಗೋಪಾಲಪುರದ ಬಳಿ ನಡೆದಿದೆ ಎನ್ನಲಾಗಿದೆ.
ಬೈಲಹಳ್ಳಿಯ ಜೆಮ್ಸ್ ಬ್ಯುಸಿನೆಸ್ ಕಾಲೇಜಿನಲ್ಲಿ ಎಂಬಿಎ ಓದುತ್ತಿದ್ದ ಹುಬ್ಬಳ್ಳಿ ಮೂಲದ ಆಕಾಶ್ (24) ಮೃತಪಟ್ಟವರು ಎಂದು ಪೊಲೀಸರು ತಿಳಿಸಿದರು.
ಕಾಲೇಜಿನ ವಿದ್ಯಾರ್ಥಿ ನಿಲಯದಲ್ಲಿ ಉಳಿದುಕೊಂಡಿದ್ದ ಆಕಾಶ್, ಬುಧವಾರ ರಾತ್ರಿ 9:20ರ ಸುಮಾರಿಗೆ ಬಾಗಲೂರು ಬೂದಿಗೆರೆ ರಸ್ತೆಯಲ್ಲಿ ವೇಗವಾಗಿ ಬೈಕ್ನಲ್ಲಿ ಹೋಗುತ್ತಿದ್ದರು. ಮಾರ್ಗ ಮಧ್ಯೆ ಗೋಪಾಲಪುರದ ಬಳಿ ಅಪರಿಚಿತ ವಾಹನಕ್ಕೆ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಅಪಘಾತವೆಸಗಿದ ವಾಹನದ ಚಾಲಕ ಪರಾರಿಯಾಗಿದ್ದು, ಪ್ರಕರಣ ದಾಖಲಿಸಿರುವ ಚಿಕ್ಕಜಾಲ ಸಂಚಾರ ಪೊಲೀಸರು, ತನಿಖೆ ಕೈಗೊಂಡಿದ್ದಾರೆ.