ಬಿಜೆಪಿ ವಿರುದ್ಧ ಕ್ರಮ ಕೈಗೊಳ್ಳಲು ಕೇಂದ್ರ ಚುನಾವಣಾ ಆಯೋಗಕ್ಕೆ ವಿ.ಎಸ್.ಉಗ್ರಪ್ಪ ಆಗ್ರಹ
ಬೆಂಗಳೂರು, ಎ.30: ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಟಿವಿ ಮತ್ತು ಮುದ್ರಣ ಮಾಧ್ಯಮಗಳಿಗೆ ನೀಡಿರುವ ಪ್ರಚಾರ ಜಾಹೀರಾತಿನಲ್ಲಿ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಆಯುಕ್ತರು ವರದಿ ನೀಡಿದ್ದು, ಇದನ್ನು ಆಧರಿಸಿ ಕೇಂದ್ರ ಚುನಾವಣಾ ಆಯೋಗ ಬಿಜೆಪಿ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ವಿಧಾನ ಪರಿಷತ್ ಸದಸ್ಯ ವಿ.ಎಸ್.ಉಗ್ರಪ್ಪ ಒತ್ತಾಯಿಸಿದ್ದಾರೆ.
ಸೋಮವಾರ ನಗರದ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸಿದ್ಧ ಸರಕಾರ ಎಂಬ ಹೆಸರಿನಲ್ಲಿ ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮದಲ್ಲಿ ಪ್ರಕಟಿಸಲಾಗಿರುವ ಜಾಹೀರಾತು ನೀತಿ ಸಂಹಿತೆ ಉಲ್ಲಂಘನೆಯಾಗಿದೆ. ಈ ಜಾಹೀರಾತುಗಳು ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಗೆ ಒಳಪಡುತ್ತಿವೆ. ಬಿಜೆಪಿ ಪಾರ್ಟಿ ರಾಜ್ಯ ಮಟ್ಟದಲ್ಲಿ ಈ ಜಾಹೀರಾತುಗಳನ್ನು ನೀಡಿದೆ. ಹೀಗಾಗಿ, ಮುಖ್ಯ ಚುನಾವಣಾ ಅಧಿಕಾರಿಗಳ ಕಚೇರಿಗೆ ನೀತಿ ಸಂಹಿತೆಯ ನೋಡಲ್ ಅಧಿಕಾರಿ ಜಾಹೀರಾತುಗಳ ವಿರುದ್ಧ ಕ್ರಮ ಕೈಗೊಳ್ಳಬಹುದು ಎಂದು ಮಂಜುನಾಥ್ ಪ್ರಸಾದ್ ಮುಖ್ಯ ಚುನಾವಣಾಧಿಕಾರಿಗೆ ಪತ್ರ ಬರೆದಿದ್ದಾರೆ.
ಜಾಹೀರಾತಿನಲ್ಲಿ ಆಕ್ಷೇಪಾರ್ಹ ವಿಷಯಗಳನ್ನು ಪ್ರಸ್ತಾಪಿಸಿ ನಿಯಮ ಬಾಹಿರವಾಗಿ ಬಿಜೆಪಿ ನಡೆದುಕೊಂಡಿದೆ. ಸುಳ್ಳು ಪ್ರಚಾರ ಮಾಡಿದ್ದಕ್ಕಾಗಿ ಬಿಜೆಪಿ ನಾಯಕರಾದ ಅಮಿತ್ ಶಾ, ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರು ಬಹಿರಂಗ ಕ್ಷವೆುಯಾಚಿಸಬೇಕು ಎಂದು ಆಗ್ರಹಿಸಿದರು.
ಬಿಜೆಪಿ ಸರಕಾರದ ಅವಧಿಯಲ್ಲಿ ಮಾಡಿದ ಯಾವ ಸಾಧನೆಗಳು ಹೇಳಿಕೊಳ್ಳುವಂತಿಲ್ಲ. ಜೈಲಿಗೆ ಹೋಗಿ ಬಂದಿದ್ದು, ನಾಡಿನ ಸಂಪತ್ತನ್ನೆ ಲೂಟಿ ಮಾಡಿದ್ದೇ ಆಗಿದೆ. ಕೇಂದ್ರ ಸರಕಾರದ ಸಾಧನೆ ಕೂಡ ಹೇಳಿಕೊಳ್ಳುವಂತಹುದು ಯಾವುದೂ ಇಲ್ಲ. ಹೀಗಾಗಿ, ಆಕ್ಷೇಪಾರ್ಹ ವಿಷಯಗಳನ್ನು ಜಾಹೀರಾತು ಮೂಲಕ ನೀಡಿ ಜನರನ್ನು ಮರಳು ಮಾಡುವ ಪ್ರಯತ್ನ ಮಾಡುತ್ತಿದ್ದಾರೆ ಎಂದರು.
ಕೂಡಲೇ ಚುನಾವಣಾ ಆಯೋಗ ಬಿಜೆಪಿ ವಿರುದ್ಧ ಕ್ರಮ ಜರುಗಿಸಬೇಕೆಂದು ಉಗ್ರಪ್ಪ ಆಗ್ರಹಿಸಿದರು. ಕೇಂದ್ರ ಸಚಿವ ಅನಂತಕುಮಾರ್ ಸೇರಿ ಬಿಜೆಪಿ ನಾಯಕರಿಗೆ ಬುದ್ಧಿ ಭ್ರಮಣೆಯಾಗಿದೆ. ಹೀಗಾಗಿ, ಬಾಯಿಗೆ ಬಂದಂತೆ ಮಾತನಾಡಿ ಶಾಂತಿ ಕದಡುವ ಪ್ರಯತ್ನ ಮಾುತ್ತಿದ್ದಾರೆ ಎಂದು ಆರೋಪಿಸಿದರು.