ಸಿದ್ದರಾಮಯ್ಯ ಕಾಂಗ್ರೆಸ್ ನ ಆಮದು ರಾಜಕಾರಣಿ: ಕೇಂದ್ರ ಸಚಿವ ಅನಂತಕುಮಾರ್

Update: 2018-04-30 14:53 GMT

ಬೆಂಗಳೂರು, ಎ. 30: ಮುಖ್ಯಮಂತ್ರಿ ಸಿದ್ದರಾಮಯ್ಯ, ಸೋನಿಯಾ ಗಾಂಧಿ ಕಾಂಗ್ರೆಸ್‌ನ ಆಮದು ರಾಜಕಾರಣಿ ಎಂಬುದನ್ನು ಮರೆತಿದ್ದಾರೆ. ಯಾರು ಈ ನೆಲದ ಮಕ್ಕಳು ಎಂಬುದನ್ನು ಅವರು ನೆನಪಿಸಿಕೊಳ್ಳಬೇಕು ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಟೀಕಿಸಿದ್ದಾರೆ.

ಸೋಮವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ, ಅಮಿತ್ ಶಾ, ಯಡಿಯೂರಪ್ಪ ನಾವೆಲ್ಲಾ ಈ ನೆಲದ ಮಕ್ಕಳು. ಇದನ್ನು ತಿಳಿಯದ ಸಿದ್ದರಾಮಯ್ಯ ಸುಮ್ಮನೆ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ನಮ್ಮದೊಂದು ರಾಜ್ಯ ಇದೆ, ನಮ್ಮದೊಂದು ದೇಶ ಇದೆ. ಸೋನಿಯಾ ಮತ್ತು ರಾಹುಲ್ ಗಾಂಧಿ ಯಾವ ರಾಜ್ಯಕ್ಕೆ ಸೇರಿದವರು ಎಂದು ಪ್ರಶ್ನಿಸಿದ ಅವರು, ಕಾಂಗ್ರೆಸ್ ಮತ್ತು ಜೆಡಿಎಸ್ ಒಳ ಒಪ್ಪಂದಕ್ಕೆ ಬಿಬಿಎಂಪಿ ಮೈತ್ರಿ ಆಡಳಿತವೇ ಸಾಕ್ಷಿ ಎಂದು ಉದಾಹರಣೆ ನೀಡಿದರು.

ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದನ್ನ ಯಾವುದೇ ಕಾರಣಕ್ಕೂ ತಪ್ಪಿಸಲು ಸಾಧ್ಯವಿಲ್ಲ. ಬೆಂಗಳೂರು ನಗರದಲ್ಲಿ ಪ್ರಚಾರ ನಡೆಸುತ್ತಿದ್ದು, ಜನರಿಂದ ಉತ್ತಮ ಪ್ರತಿಕ್ರಿಯೆ ದೊರೆಯುತ್ತಿದೆ. ಇದನ್ನು ನೋಡಿದರೆ ಬಿಜೆಪಿ ಬೆಂಗಳೂರು ನಗರದಲ್ಲಿ ಅತ್ಯಂತ ಹೆಚ್ಚು ಸ್ಥಾನ ಗೆಲ್ಲಲಿದೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News