ಪ್ರಧಾನಿ ಮೋದಿಯ ದುರಾಡಳಿತದಿಂದಾಗಿ ಬಿಜೆಪಿ ಪ್ರಭಾವ ರಾಜ್ಯಾದ್ಯಂತ ಮತ್ತಷ್ಟು ಕಡಿಮೆಯಾಗಲಿದೆ: ಸಿದ್ದರಾಮಯ್ಯ

Update: 2018-05-06 13:27 GMT

ಬೆಂಗಳೂರು, ಮೇ 6: ಕಳೆದ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 7 ಜಿಲ್ಲೆಗಳಲ್ಲಿ ಒಂದು ಸ್ಥಾನವನ್ನೂ ಗೆಲ್ಲಲಿಲ್ಲ. ಹಾಗೆಯ ಜೆಡಿಎಸ್ ಉತ್ತರ ಕರ್ನಾಟಕದ ಭಾಗದಲ್ಲಿ ಬೆರಳೆಣಿಕೆ ಸ್ಥಾನಗಳನ್ನು ಪಡೆದಿಲ್ಲ. ಈ ಬಾರಿಯ ಚುನಾವಣೆಯಲ್ಲಿಯೂ ಈ ಅಂಕಿ-ಅಂಶಗಳಲ್ಲಿ ಯಾವುದೆ ಬದಲಾವಣೆಯಾಗುವುದಿಲ್ಲ. ಹೀಗಾಗಿ ಕಾಂಗ್ರೆಸ್‌ಗೆ ಸರಳ ಬಹುಮತ ದೊರೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರವಿವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಮಾಧ್ಯಮಗಳೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಳೆದ ಚುನಾವಣೆಯಲ್ಲಿ ಬಿಜೆಪಿ ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ, ರಾಮನಗರ, ಬೆಂಗಳೂರು ಗ್ರಾ., ಕೋಲಾರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಒಂದು ಸ್ಥಾನವನ್ನೂ ಗೆಲ್ಲಲಿಲ್ಲ. ಇದು ಈ ಚುನಾವಣೆಯಲ್ಲಿಯೂ ಮುಂದುವರೆದಯಲಿದೆ ಎಂದು ಹೇಳಿದರು.

ಸಂಘ ಪರಿವಾರದ ಪ್ರಯೋಗಾಲಯವಾಗಿರುವ ದಕ್ಷಿಣ ಕನ್ನಡ ಹಾಗೂ ಉಡುಪಿಯ 19 ಕ್ಷೇತ್ರಗಳಲ್ಲಿ ನಾಲ್ಕು ಸ್ಥಾನಗಳನ್ನು ಮಾತ್ರ ಬಿಜೆಪಿ ಜಯಗಳಿಸಿತ್ತು. ಕಾಂಗ್ರೆಸ್ 13 ಸ್ಥಾನಗಳಲ್ಲಿ ಜಯ ಸಾಧಿಸಿತ್ತು. ಈ ಬಾರಿ ಪ್ರಧಾನಿ ಮೋದಿಯ ದುರಾಡಳಿತದಿಂದಾಗಿ ಬಿಜೆಪಿ ಪ್ರಭಾವ ರಾಜ್ಯಾದ್ಯಂತ ಮತ್ತಷ್ಟು ಕಡಿಮೆಯಾಗಲಿದೆ ಎಂದು ಅವರು ತಿಳಿಸಿದರು.

ಬಿಜೆಪಿ ನಾಯಕರಿಗೆ ವರ್ಚಸಿಲ್ಲ: ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಸದಾನಂದ ಗೌಡ ಸೇರಿದಂತೆ ರಾಜ್ಯದ ಯಾವ ಬಿಜೆಪಿ ನಾಯಕರಿಗೂ ಮತದಾರರನ್ನು ಓಲೈಸುವಂತಹ ವರ್ಚಸಿಲ್ಲ. ಹೀಗಾಗಿ ಪ್ರಧಾನಿ ಮೋದಿಯ ಸುಳ್ಳು ಮಾತುಗಳನ್ನು ಮಾತ್ರ ನಂಬಿಕೊಂಡು ಚುನಾವಣೆಯನ್ನು ಎದುರಿಸುತ್ತಿದ್ದಾರೆಂದು ಅವರು ಲೇವಡಿ ಮಾಡಿದರು.

ಮೋದಿ ಮಾತಿನಲ್ಲಿ ಸಂಸದೀಯ ಪದಗಳಿಲ್ಲ: ಪ್ರಧಾನಿ ಮೋದಿ ರಾಜ್ಯಕ್ಕೆ 7-8 ಬಾರಿ ಬಂದಿರಬಹುದು. ಈ ಸಂದರ್ಭದಲ್ಲಿ ಕೇಂದ್ರ ಸರಕಾರದ ಸಾಧನೆಗಳು, ಇಲ್ಲವೆ ಕಾಂಗ್ರೆಸ್ ಸರಕಾರದ ವೈಫಲ್ಯಗಳ ಬಗ್ಗೆ ಮಾತನಾಡಬಹುದಾಗಿತ್ತು. ಆದರೆ, ಕೇವಲ ಆಧಾರ ರಹಿತ ಹಾಗೂ ಅನಾಗರಿಕವಾಗಿ ಮಾತನಾಡುತ್ತಿರುವುದನ್ನು ನಾಡಿನ ಜನತೆ ಅರಿತಿದ್ದಾರೆ. ಇದಕ್ಕೆ ತಕ್ಕ ಉತ್ತರವನ್ನು ಚುನಾವಣೆಯಲ್ಲಿ ನೀಡಲಿದ್ದಾರೆ ಎಂದು ಅವರು ಎಚ್ಚರಿಸಿದರು.

ಬಿಜೆಪಿ ಕೊಡುಗೆ ಶೂನ್ಯ: ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸರಕಾರ ರಾಜ್ಯವನ್ನು ಭ್ರಷ್ಟಾಚಾರದ ಕೂಪಕ್ಕೆ ತಳ್ಳಿತು. ಈಗ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರ ಕರ್ನಾಟಕಕ್ಕೆ ಯಾವುದೆ ಅನುದಾನ ನೀಡದೆ ತಾರತಮ್ಯ ನೀತಿ ಅನುಸರಿಸಿದೆ. ಇವೆಲ್ಲವನ್ನು ಗಮನಿಸಿದಾಗ ಬಿಜೆಪಿಯಿಂದ ರಾಜ್ಯಕ್ಕೆ ನೀಡಿರುವ ಕೊಡುಗೆ ಶೂನ್ಯ ಎಂದು ಅವರು ಟೀಕಿಸಿದರು.

ಒಕ್ಕೂಟ ವ್ಯವಸ್ಥೆಯಲ್ಲಿ ನೀರಾವರಿ ಸಮಸ್ಯೆಯನ್ನು ಬಗೆ ಹರಿಸುವುದು ಪ್ರಧಾನಿಯ ಕರ್ತವ್ಯ. ಈ ಹಿಂದಿನ ಪ್ರಧಾನಿಗಳಾದ ಇಂದಿರಾ ಗಾಂಧಿ ಹಾಗೂ ವಾಜಪೇಯಿ ಸಮಸ್ಯೆಗಳನ್ನು ಬಗೆಹರಿಸಿ ಒಕ್ಕೂಟ ವ್ಯವಸ್ಥೆಯನ್ನು ಬಲಗೊಳಿಸಿದ್ದಾರೆ. ಆದರೆ, ಪ್ರಧಾನಿ ಮೋದಿ ಮಹದಾಯಿ ಸಮಸ್ಯೆ ಇತ್ಯರ್ಥಕ್ಕೆ ಕನಿಷ್ಟ ಮಟ್ಟದ ಪ್ರಯತ್ನ ಮಾಡಿಲ್ಲ. ಇಂತಹವರು ರಾಜ್ಯಕ್ಕೆ ಬಂದು ಸುಳ್ಳುಗಳನ್ನೇ ಹೇಳುತ್ತಿದ್ದಾರೆ ಎಂದು ಅವರು ಲೇವಡಿ ಮಾಡಿದರು.

-ಯಡಿಯೂರಪ್ಪ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಘೋಷಿಸಿದಾಗಲೇ ಕಾಂಗ್ರೆಸ್‌ಗೆ ಅನುಕೂಲವಾಗಿದೆ.
-ವಿಶ್ವಮಾರುಕಟ್ಟೆಯಲ್ಲಿ ತೈಲೋತ್ಪನ್ನಗಳ ಬೆಲೆ ಕಡಿಮೆಯಾಗಿದ್ದರೂ ದೇಶದಲ್ಲಿ ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಹೆಚ್ಚಳ ಮಾಡುವ ಮೂಲಕ ಕೇಂದ್ರ ಸರಕಾರ ಜನ ವಿರೋಧಿ ನೀತಿ ಅನುಸರಿಸಿದೆ.
 -ಪ್ರಧಾನಿ ನರೇಂದ್ರ ಮೋದಿ ಮಾತಿನಲ್ಲಿ ಸಂಸದೀಯ ಪದಗಳಿಲ್ಲ, ಅನಾಗರೀಕರಂತೆ ಮಾತನಾಡುತ್ತಾರೆ.
-ಕಾಂಗ್ರೆಸ್‌ಗೆ ಬಹುಮತ ಬರುವುದರಲ್ಲಿ ಯಾವುದೆ ಅನುಮಾನವಿಲ್ಲ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News