ಬೆಂಗಳೂರು ವ್ಯಾಪ್ತಿಯ ಕ್ಷೇತ್ರಗಳಲ್ಲಿ ನ್ಯಾಯಸಮ್ಮತ ಚುನಾವಣೆಗೆ ಸಿದ್ಧತೆ: ಜಿಲ್ಲಾ ಚುನಾವಣಾಧಿಕಾರಿ ಎಂ.ಮಹೇಶ್ವರ ರಾವ್

Update: 2018-05-10 12:34 GMT

ಬೆಂಗಳೂರು, ಮೇ 10: ಜಯನಗರ ವಿಧಾನಸಭಾ ಕ್ಷೇತ್ರ ಹೊರತುಪಡಿಸಿ ಬಿಬಿಎಂಪಿ ವ್ಯಾಪ್ತಿಯ 27 ಕ್ಷೇತ್ರಗಳಲ್ಲಿ ನ್ಯಾಯಸಮ್ಮತ ಚುನಾವಣೆ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಅಕ್ರಮ ಹಣ, ಮದ್ಯ ಸಾಗಾಟವನ್ನು ತಡೆಯಲು ನಗರದಾದ್ಯಂತ 81ಚೆಕ್ ಪೋಸ್ಟ್‌ಗಳನ್ನು ಹಾಕಲಾಗಿದೆ ಎಂದು ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ಮಹೇಶ್ವರ ರಾವ್ ತಿಳಿಸಿದರು.

ಗುರುವಾರ ನಗರದ ಮಲ್ಲೇಶ್ವರಂನ ಐಪಿಪಿ ಕೇಂದ್ರದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಗುರುವಾರ ಸಂಜೆ 5ರಿಂದಲೆ ಬಹಿರಂಗ ಚುನಾವಣಾ ಪ್ರಚಾರ ಅಂತ್ಯಗೊಂಡಿದ್ದು, 5ಕ್ಕೂ ಹೆಚ್ಚು ಮಂದಿ ಗುಂಪುಗೂಡುವಂತಿಲ್ಲ. ಮೇ 10ರ ರಾತ್ರಿಯಿಂದ ಮೇ 12ರ ಮಧ್ಯರಾತ್ರಿವರೆಗೆ ಹಾಗೂ ಮತ ಎಣಿಕೆ ದಿನವಾದ ಮೇ 15ರಂದು ಬೆಳಗ್ಗೆ 7ರಿಂದ ಮಧ್ಯರಾತ್ರಿ 12ರ ವರೆಗೆ ಮದ್ಯ ಮಾರಾಟ ನಿಷೇಧ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಮಾಹಿತಿ ನೀಡಿದರು.

ಮತದಾರರಲ್ಲದವರು ಇಂದು ಸಂಜೆ 7 ಗಂಟೆ ನಂತರ ಕ್ಷೇತ್ರ ಬಿಟ್ಟು ತೆರಳಬೇಕು. ಮತಗಟ್ಟೆಯ 100 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ಪಕ್ಷದ ಅಭ್ಯರ್ಥಿ ಪ್ರಚಾರ ಮಾಡುವುದನ್ನು ನಿರ್ಬಂಧಿಸಲಾಗಿದೆ. ಮೇ12ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮತ ಚಲಾಯಿಸುವ ಮತದಾರರ ಎಡಗೈ ತೋರು ಬೆರಳಿಗೆ ಶಾಯಿ ಬಳಸಲು ಅನುಮತಿ ನೀಡಲಾಗಿದೆ ಎಂದು ಅವರು ಹೇಳಿದರು.

ಸ್ಥಳದಲ್ಲೇ ಗುರುತಿನ ಚೀಟಿ: ಚುನಾವಣೆಯಲ್ಲಿ ಮತ ಚಲಾಯಿಸುವ ಹಕ್ಕು ಹೊಂದಿರುವ ಮತದಾರರಿಗೆ ಈಗಾಗಲೇ ಭಾವಚಿತ್ರವುಳ್ಳ ಮತದಾನ ಚೀಟಿಯನ್ನು ವಿತರಿಸಲಾಗಿದೆ. ಒಂದು ವೇಳೆ ಮತದಾನ ಚೀಟಿ ದೊರೆಯದಿರುವವರು ಮತಗಟ್ಟೆ ಸಮೀಪ ಆಯೋಗದಿಂದ ಸ್ಥಾಪಿಸಲ್ಪಟ್ಟಿರುವ ವೋಟರ್ ಅಸಿಸ್ಟೆಂಟ್ ಬೂತ್‌ಗಳಲ್ಲಿ ವೋಟರ್ ಐಡಿ ಇಲ್ಲವೆ 11 ದಾಖಲಾತಿಗಳನ್ನು ತೋರಿಸಿ ಸ್ಥಳದಲ್ಲೇ ಮತದಾನ ಚೀಟಿ ಪಡೆಯಲು ಅವಕಾಶ ಕಲ್ಪಿಸಿಕೊಡಲಾಗಿದ್ದು, ಚೀಟಿ ದೊರೆಯದಿರುವ ಮತದಾರರು ಯಾವುದೇ ಆತಂಕಕ್ಕೊಳಗಾಗುವ ಅವಶ್ಯಕತೆ ಇಲ್ಲ ಎಂದು ಅವರು ಅಭಯ ನೀಡಿದರು.

ಕ್ರಿಮಿನಲ್ ಕೇಸ್: ನಾಳೆ ಮಧ್ಯಾಹ್ನ 1.30ರೊಳಗೆ ಮಸ್ಟರಿಂಗ್ ಮತ್ತು ಡಿ ಮಸ್ಟರಿಂಗ್ ಕೆಲಸ ಪೂರ್ಣಗೊಳಿಸಲಾಗುವುದು. ಚುನಾವಣಾ ಕಾರ್ಯಕ್ಕೆ ನಿಯೋಜಿಸಲಾಗಿರುವ ಅಧಿಕಾರಿಗಳು 1.35ರೊಳಗೆ ಕರ್ತವ್ಯಕ್ಕೆ ಹಾಜರಾಗಲೇಬೇಕು. ತಡವಾಗಿ ಕರ್ತವ್ಯಕ್ಕೆ ಹಾಜರಾದ ಸಿಬ್ಬಂದಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಮಹೇಶ್ವರರಾವ್ ಎಚ್ಚರಿಸಿದರು.

ಪ್ರಕರಣ ದಾಖಲು: ಚುನಾವಣೆ ನೀತಿ ಸಂಹಿತೆ ಜಾರಿಯಾದ ನಂತರ ಇದುವರೆಗೂ 6.8 ಕೋಟಿ ನಗದು ವಶ, 5.29 ಕೋಟಿ ಮೌಲ್ಯದ 11,699 ಲೀಟರ್ ಮದ್ಯ ವಶ, 39,540 ಪ್ರಕರಣಗಳಲ್ಲಿ 17.43 ಕೋಟಿ ಸೇರಿದಂತೆ ಇದುವರೆಗೂ 31.55 ಕೋಟಿ ರೂ.ಗಳನ್ನು ಎಂಸಿಸಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ ಎಂದು ಅವರು ತಿಳಿಸಿದರು.

ನಿರ್ಬಂಧ: ಮತದಾನದ ದಿನ ಅಭ್ಯರ್ಥಿಗಳ ಪರ ದೂರದರ್ಶನ ಇಲ್ಲವೆ ಮುದ್ರಣ ಮಾಧ್ಯಮಗಳಲ್ಲಿ ಬೈಟ್ ಪ್ರಸಾರ ಮಾಡುವುದಕ್ಕೂ ನಿರ್ಬಂಧ ವಿಧಿಸಲಾಗಿದೆ. ಕಾನೂನು ಉಲ್ಲಂಘಿಸುವ ಮಾಧ್ಯಮಗಳ ಮೇಲೆ ಕೇಸು ದಾಖಲಿಸಲಾಗುವುದು ಎಂದು ಅವರು ಎಚ್ಚರಿಸಿದರು.

ಮತದಾನದ ದಿನ ಅಭ್ಯರ್ಥಿ, ಎಜೆಂಟರು ಸೇರಿ ಕೇವಲ ಮೂರು ವಾಹನಗಳಿಗೆ ಮಾತ್ರ ಅನುಮತಿ ನೀಡಲಾಗಿದೆ. ಅನುಮತಿ ನೀಡಿರುವ ಕಾರಿನಲ್ಲಿ ಬೇರೆಯವರ ವೋಟರ್ ಐಡಿ ಕಾರ್ಡ್ ತೆಗೆದುಕೊಂಡು ಹೋಗುವಂತಿಲ್ಲ. ಮತ ಕೇಂದ್ರದಲ್ಲಿ ಚುನಾವಣಾಧಿಕಾರಿಗಳಿಗೆ ಮಾತ್ರ ಮೊಬೈಲ್ ಬಳಸಲು ಅವಕಾಶ ನೀಡಲಾಗಿದೆ. ಆಯಾ ವಿಧಾನಸಭಾ ಕ್ಷೇತ್ರಗಳಿಗೆ ಹೊರಗಿನಿಂದ ಬರುವ ವಾಹನಗಳ ಮೇಲೆ ಹದ್ದಿನ ಕಣ್ಣಿಡಲು 81 ಚೆಕ್ ಪೋಸ್ಟ್‌ಗಳನ್ನು ನಿರ್ಮಾಣ ಮಾಡಲಾಗಿದೆ ಎಂದು ಅವರು ವಿವರಿಸಿದರು.

ಮಹಿಳೆಯರಿಗಾಗಿ 100 ಪಿಂಕ್ ಮತಗಟ್ಟೆ
ಮಹಿಳೆಯರು ತಮ್ಮ ಹಕ್ಕು ಚಲಾಯಿಸಲು ಮುಂದೆ ಬರಬೇಕೆಂಬ ಉದ್ದೇಶದಿಂದ ನಗರದಲ್ಲಿ 100 ಪಿಂಕ್ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ವಿಕಲಚೇತನರು ಮತ ಚಲಾಯಿಸಲು ಅನುಕೂಲವಾಗುವಂತೆ ವೀಲ್‌ಚೇರ್, ಬ್ರೈಲ್ ಲಿಪಿ ಮತ್ತು ವಾಹನ ವ್ಯವಸ್ಥೆ ಮಾಡಲು ಸಕಲ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಮಹೇಶ್ವರ ರಾವ್ ಮಾಹಿತಿ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News