ಮತದಾನದ ಗುರುತಿನ ಚೀಟಿ ಪತ್ತೆ ಪ್ರಕರಣ: ಪೊಲೀಸ್ ತನಿಖೆ ಮುಂದುವರಿಕೆ; ಸಂಜೀವ್ಕುಮಾರ್
Update: 2018-05-10 15:25 GMT
ಬೆಂಗಳೂರು, ಮೇ 10: ರಾಜರಾಜೇಶ್ವರಿ ವಿಧಾನಸಭಾ ವ್ಯಾಪ್ತಿ ಪ್ರದೇಶದಲ್ಲಿ ಅಕ್ರಮವಾಗಿ ಸಂಗ್ರಹಿಸಲಾಗಿದ್ದ ಮತದಾನದ ಗುರುತಿನ ಚೀಟಿ ಪತ್ತೆ ಪ್ರಕರಣ ಸಂಬಂಧ ಪೊಲೀಸ್ ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ಕುಮಾರ್ ತಿಳಿಸಿದ್ದಾರೆ.
ಗುರುವಾರ ವಿಕಾಸಸೌಧದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಈಗಾಗಲೆ ಪ್ರಕರಣ ಸಂಬಂಧ ಶಾಸಕ ಮುನಿರತ್ನ ಸೇರಿದಂತೆ 14 ಮಂದಿಯ ವಿರುದ್ಧ ಎಫ್ಐಆರ್ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ. ಅಕ್ರಮವಾಗಿ ಸಂಗ್ರಹವಾಗಿರುವ ಪ್ರತಿಯೊಂದು ಗುರುತಿನ ಚೀಟಿ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಈಗಾಗಲೆ ಕೇಂದ್ರದ ಉಪ ಚುನಾವಣಾ ಆಯುಕ್ತ ಚಂದ್ರಭೂಷಣ್ ಕುಮಾರ್ ಪ್ರಕರಣದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಆಯೋಗಕ್ಕೆ ವರದಿಯನ್ನು ಸಲ್ಲಿಸಿದ್ದಾರೆ ಎಂದು ಅವರು ಮಾಹಿತಿ ನೀಡಿದರು.