ಒಂದೆರಡು ದಿನಗಳಲ್ಲಿ ಸಾಲ ಮನ್ನಾ ಭರವಸೆ ಈಡೇರಿಕೆ : ಬಿ ಎಸ್ ಯಡಿಯೂರಪ್ಪ
ಬೆಂಗಳೂರು, ಮೇ 17: ರಾಜ್ಯದ ರೈತರು ರಾಷ್ಟ್ರೀಕೃತ ಬ್ಯಾಂಕ್ ಹಾಗೂ ಸಹಕಾರಿ ಬ್ಯಾಂಕ್ಗಳಲ್ಲಿ ಪಡೆದ ಒಂದು ಲಕ್ಷ ರೂ.ವರೆಗಿನ ಬೆಳೆ ಸಾಲ ಹಾಗೂ ಒಂದು ಲಕ್ಷ ರೂ.ವರೆಗಿನ ನೇಕಾರರ ಸಾಲವನ್ನು ಮನ್ನಾ ಮಾಡುವ ಕುರಿತು ಚುನಾವಣಾ ಪೂರ್ವದಲ್ಲಿ ರಾಜ್ಯದ ಜನತೆಗೆ ನೀಡಿದ್ದ ಭರವಸೆಯನ್ನು ಒಂದೆರಡು ದಿನಗಳಲ್ಲಿ ಈಡೇರಿಸಲಾಗುವುದು ಎಂದು ನೂತನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ಗುರುವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದೊಡನೆಯೇ ತಮ್ಮ ಏಕ-ಸದಸ್ಯ ಸಚಿವ ಸಂಪುಟದಲ್ಲಿ ಸಾಲ ಮನ್ನಾ ಕುರಿತು ರಾಜ್ಯದ ಮುಖ್ಯ ಕಾರ್ಯದರ್ಶಿಗೆ ಕ್ರಮ ವಹಿಸಲು ಸೂಚಿಸಿದ್ದೇನೆ ಎಂದರು.
ಇಂದು ಸಂಜೆ ಅಥವಾ ನಾಳೆ ಬೆಳಗ್ಗೆಯೊಳಗೆ ಅಂಕಿ-ಅಂಶಗಳನ್ನು ಸಾದರಪಡಿಸುವುದಾಗಿ ಹೇಳಿದ್ದಾರೆ. ಮಾಹಿತಿ ಲಭ್ಯವಾದೊಡನೆಯೇ ಈ ನಿಟ್ಟಿನಲ್ಲಿ ಅಗತ್ಯ ಕ್ರಮ ವಹಿಸಲಾಗುವುದು ಎಂದು ಯಡಿಯೂರಪ್ಪ ಭರವಸೆ ನೀಡಿದರು.
ಬಹುಮತ ಸಾಬೀತುಪಡಿಸಿದ ನಂತರ ಸಂಪುಟ ವಿಸ್ತರಣೆ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಮಾಧ್ಯಮದವರು ಪ್ರಶ್ನಿಸಿದಾಗ, ಸದನದಲ್ಲಿ ಬಹುಮತ ಸಾಬೀತುಪಡಿಸಿದ ನಂತರವೇ ಸಂಪುಟ ವಿಸ್ತರಣೆ ಎಂದು ಯಡಿಯೂರಪ್ಪ ಸ್ಪಷ್ಟಪಡಿಸಿದರು.
ಅಲ್ಲದೆ, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಾಗೂ ಬಿಜೆಪಿ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಯವರನ್ನು ಆತ್ಮೀಯವಾಗಿ ಆಮಂತ್ರಿಸಿ, ಮೂರ್ನಾಲ್ಕು ಲಕ್ಷ ಜನಸ್ತೋಮದ ಸಮ್ಮುಖದಲ್ಲಿ ಸಂಪುಟ ವಿಸ್ತರಣೆಯ ಸಮಾರಂಭವನ್ನು ಅದ್ಧೂರಿಯಾಗಿ ಆಯೋಜಿಸಲು ಯೋಜಿಸಿದ್ದೇವೆ ಎಂದು ಅವರು ಹೇಳಿದರು.
ತಾವು ಮೂರನೆ ಬಾರಿಗೆ ಮುಖ್ಯಮಂತ್ರಿಯಾಗಲು ಕಾರಣರಾದ ರಾಜ್ಯದ ಜನತೆ, ಅದರಲ್ಲೂ ವಿಶೇಷವಾಗಿ ರಾಜ್ಯದ ರೈತರು, ದಲಿತರು, ಹಿಂದುಳಿದ ವರ್ಗದವರ ಬೆಂಬಲಕ್ಕೆ ಹೃದಯಪೂರ್ವಕ ಧನ್ಯವಾದಗಳನ್ನು ಅರ್ಪಿಸಿದ ಯಡಿಯೂರಪ್ಪ, ಜನಾದೇಶ ಹಾಗೂ ಜನರ ಬೆಂಬಲ ತಮ್ಮ ಹಾಗೂ ತಮ್ಮ ಪಕ್ಷದ ಪರವಾಗಿದೆ ಎಂದರು.
ಬಿಜೆಪಿಗೆ ಜನರ ಬೆಂಬಲವಿದ್ದರೂ, ಜನರಿಂದ ತಿರಸ್ಕೃತವಾದ ಕಾಂಗ್ರೆಸ್ ಮತ್ತು ಜೆಡಿಎಸ್ ಚುನಾವಣೋತ್ತರದಲ್ಲಿ ಅಪವಿತ್ರ ಮೈತ್ರಿ ಮಾಡಿಕೊಂಡು ಅಧಿಕಾರವನ್ನು ಕಬಳಿಸಲು ಯತ್ನಿಸುತ್ತಿವೆ ಎಂದು ಯಡಿಯೂರಪ್ಪ ಆರೋಪಿಸಿದರು.
ಅಂತೆಯೇ, ಅರವತ್ತರ ದಶಕದ ಉತ್ತರಾರ್ಧದಲ್ಲಿ ನಡೆದ ರಾಷ್ಟ್ರಪತಿಯವರ ಚುನಾವಣಾ ಸಂದರ್ಭದಲ್ಲಿ ಅಧಿಕೃತ ಅಭ್ಯರ್ಥಿ ಇದ್ದರೂ ಪಕ್ಷೇತರ ಅಭ್ಯರ್ಥಿಯಾಗಿದ್ದ ಗಿರಿ ಅವರಿಗೆ ಆತ್ಮಸಾಕ್ಷಿ ಮತ ನೀಡಿ ಬೆಂಬಲಿಸುವಂತೆ ಕರೆ ನೀಡಿದ್ದ ಅಂದಿನ ಪ್ರಧಾನಿ ಇಂದಿರಾಗಾಂಧಿ ಅವರ ದೂರದರ್ಶಕತ್ವದ ಕರೆಯನ್ನು ನೆನಪಿಸಿದ ಯಡಿಯೂರಪ್ಪ, ನಾಡಿನ ಜನತೆಯ ತೀರ್ಪಿಗೆ ತಲೆಬಾಗಿ ತಮ್ಮ ಪರವಾಗಿ ಆತ್ಮಸಾಕ್ಷಿಗೆ ಅನುಗುಣವಾಗಿ ಮತ ಚಲಾಯಿಸುವಂತೆ ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರಲ್ಲಿ ಕಳಕಳಿಯ ಮನವಿ ಮಾಡಿದರು.
ಬಹುಮತ ಹೇಗೆ ಸಾಬೀತುಪಡಿಸುತ್ತೀರಿ? ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ವಿಶ್ವಾಸ ಮತದ ಬಗ್ಗೆ ಈಗ ಚರ್ಚೆ ಬೇಡ. ಪ್ರಕರಣವು ಸುಪ್ರೀಂಕೋರ್ಟ್ನಲ್ಲಿದೆ. ನಾಳೆಯವರೆಗೂ ಕಾಯಿರಿ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಶಾಸಕರಾದ ಸಿ.ಎಂ.ಉದಾಸಿ, ಬಸವರಾಜ ಬೊಮ್ಮಾಯಿ, ಹರತಾಳು ಹಾಲಪ್ಪ, ಪ್ರಭು ಚವ್ಹಾಣ್, ಸಿದ್ದು ಸವದಿ, ಎಸ್.ಆರ್.ವಿಶ್ವನಾಥ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.