ಪ್ರಮಾಣ ವಚನ ಸ್ವೀಕರಿಸಿದ 24 ಗಂಟೆಯಲ್ಲೇ ವಿಶ್ವಾಸಮತ ಸಾಬೀತು: ಎಚ್.ಡಿ.ಕುಮಾರಸ್ವಾಮಿ

Update: 2018-05-20 11:47 GMT

ಬೆಂಗಳೂರು, ಮೇ 20: ತಾನು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಕೇವಲ ಇಪ್ಪತ್ತ್ನಾಲ್ಕು ಗಂಟೆಗಳಲ್ಲಿಯೇ ವಿಶ್ವಾಸಮತ ಸಾಬೀತುಪಡಿಸುತ್ತೇನೆ ಎಂದು ನಿಯೋಜಿತ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಇಂದಿಲ್ಲಿ ಘೋಷಿಸಿದ್ದಾರೆ.

ರವಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮೇ 21 ರಂದು ಹೊಸದಿಲ್ಲಿಗೆ ತೆರಳಿ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಸರಕಾರ ರಚನೆ ಹಾಗೂ ಸಚಿವ ಸಂಪುಟ ಕುರಿತು ಸಮಾಲೋಚನೆ ನಡೆಸಲಿದ್ದೇನೆ ಎಂದರು.

ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯವರಿಗೆ ಆಹ್ವಾನ ನೀಡಲಿದ್ದೇನೆ ಎಂದ ಅವರು, ಬುಧವಾರ (ಮೇ 22) ಮಧ್ಯಾಹ್ನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದೇನೆ ಎಂದು ಪ್ರಕಟಿಸಿದರು.

ಬೆಳಗ್ಗೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿ ಹೊರಬಂದ ನಂತರ ತಮಿಳುನಾಡಿನ ತಿರುಚ್ಚಿಯ ಶ್ರೀರಂಗಂ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆಯಲಿದ್ದಾರೆಂದು ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News