ಕಾಂಗ್ರೆಸ್-ಜೆಡಿಎಸ್ ಒಪ್ಪಂದ ಸತ್ಯಕ್ಕೆ ದೂರ: ಬ್ಲಾಕ್ ಕಾಂಗ್ರೆಸ್ ಸಮಿತಿ ಸ್ಪಷ್ಟಣೆ

Update: 2018-05-22 12:48 GMT

ಬೆಂಗಳೂರು, ಮೇ 22: ರಾಜರಾಜೇಶ್ವರಿನಗರ ಕ್ಷೇತ್ರ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಒಳ ಒಪ್ಪಂದ ಮಾಡಿಕೊಂಡು, ಜೆಡಿಎಸ್ ಗೆಲುವಿಗೆ ಕಾಂಗ್ರೆಸ್ ಸಹಕಾರ ನೀಡಲಿದೆ ಎಂಬುದು ಸತ್ಯಕ್ಕೆ ದೂರವಾದುದು ಎಂದು ಬ್ಲಾಕ್ ಕಾಂಗ್ರೆಸ್ ಸಮಿತಿ ಸ್ಪಷ್ಟಣೆ ನೀಡಿದೆ.

ಚುನಾವಣೆ ಎಂದಾಗ ಎಲ್ಲರೂ ಪ್ರತ್ಯೇಕವಾಗಿಯೇ ಸ್ಪರ್ಧಿಸಿ ಜಯ ಗಳಿಸಲು ಇಚ್ಛಿಸುತ್ತಾರೆ. ನಿಯೋಜಿತ ಮುಖ್ಯಮಂತ್ರಿ ಕುಮಾರಸ್ವಾಮಿ ಮೈತ್ರಿ ಸುಳ್ಳು ಎಂದು ಸ್ಪಷ್ಟಪಡಿಸಿದ್ದಾರೆ. ಮಾಧ್ಯಮಗಳ ಇಂತಹ ಊಹಾಪೋಹಕ್ಕೆ ಜನತೆ ಕಿವಿಗೊಡಬಾರದು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೇಲು ನಾಯ್ಕರ್ ತಿಳಿಸಿದ್ದಾರೆ.

ಹಾಲಿ ಶಾಸಕ ಮತ್ತು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮುನಿರತ್ನ ಅವರಿಗೆ ಬೆಂಬಲವನ್ನು ನೀಡುತ್ತಿದ್ದೇವೆ. ಒಂದು ವೇಳೆ ಜೆಡಿಎಸ್‌ಗೆ ನಮ್ಮ ಬೆಂಬಲ ನೀಡುವ ಪರಿಸ್ಥಿತಿ ಬಂದಲ್ಲಿ ಇದನ್ನು ಕಾಂಗ್ರೆಸಿನ ಹಿರಿಯ ಮುಖಂಡರು ಹಾಗೂ ಜೆಡಿಎಸ್ ಪಕ್ಷದ ವರಿಷ್ಠರ ತೀರ್ಮಾನ ಮಾಡಲಿದ್ದಾರೆ.

ಬಿಜೆಪಿ ಈ ರೀತಿ ಸುಳ್ಳು ಸುದ್ದಿಯನ್ನು ಹಬ್ಬಿಸುವ ಮೂಲಕ ಇದರ ಲಾಭ ಪಡೆಯುವ ಹುನ್ನಾರ ನಡೆಸಿದೆ. ಆದರೆ, ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ ಗೆಲ್ಲುವುದು ಖಚಿತ. 25ರಿಂದ 30 ಸಾವಿರ ಮತಗಳ ಅಂತರದಲ್ಲಿ ಜಯ ಗಳಿಸಲಿದ್ದಾರೆ ಎಂದು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News