ನಿಪಾಹ್ ಹಾವಳಿ: ರಾಜ್ಯದಲ್ಲಿ ಸೂಕ್ತ ಮುನ್ನೆಚ್ಚರಿಕಾ ಕ್ರಮಕ್ಕೆ ನಿಯೋಜಿತ ಸಿಎಂ ಆದೇಶ
Update: 2018-05-23 06:08 GMT
ಬೆಂಗಳೂರು, ಮೇ 23: ನೆರೆಯ ಕೇರಳ ರಾಜ್ಯದಲ್ಲಿ ಮಾರಕ ನಿಪಾಹ್ ವೈರಾಣು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲೂ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ನಿಯೋಜಿತ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆದೇಶಿಸಿದ್ದಾರೆ.
''ಮಾರಕ ನಿಪಾಹ್ ವೈರಾಣು ಕೇರಳದಾದ್ಯಂತ ವ್ಯಾಪಕವಾಗಿ ಹರಡುತ್ತಿದ್ದು, ಈಗಾಗಲೇ ಹತ್ತು ಮಂದಿ ಅದಕ್ಕೆ ಬಲಿಯಾಗಿದ್ದಾರೆ. ಕೇರಳಕ್ಕೆ ಹೊಂದಿಕೊಂಡಿರುವ ನಮ್ಮ ಮಂಗಳೂರು, ಕೊಡಗು, ಚಾಮರಾಜನಗರ, ಮೈಸೂರು ಜಿಲ್ಲೆಗಳಿಗೂ ಈ ವೈರಾಣು ವ್ಯಾಪಿಸುವ ಸಾಧ್ಯತೆಗಳಿವೆ. ಆದ್ದರಿಂದ ವೈರಾಣು ಸೋಂಕು ತಡೆಯಲು ಅಗತ್ಯ, ಸೂಕ್ತ ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ನಾನು ಈಗಾಗಲೇ ಆದೇಶಿಸಿದ್ದೇನೆ'' ಎಂದು ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಈ ನಡುವೆ ಮಂಗಳೂರಿನಲ್ಲಿ ಇಬ್ಬರು ಶಂಕಿತ ನಿಪಾಹ್ ರೋಗದಿಂದ ಬಳಲುತ್ತಿರುವುದಾಗಿ ದ.ಕ. ಜಿಲ್ಲಾ ಆರೋಗ್ಯಾಧಿಕಾರಿ ಮಂಗಳವಾರ ತಿಳಿಸಿದ್ದಾರೆ.