‘ರೈತರ ಸಾಲ ಮನ್ನಾ' ವಿಚಾರದಲ್ಲಿ ಹಿಂದಕ್ಕೆ ಸರಿಯಲ್ಲ: ಮುಖ್ಯಮಂತ್ರಿ ಕುಮಾರಸ್ವಾಮಿ

Update: 2018-05-23 15:20 GMT

ಬೆಂಗಳೂರು, ಮೇ 23: ರಾಜ್ಯ ಸರಕಾರದ ಆರ್ಥಿಕ ಪರಿಸ್ಥಿತಿಯನ್ನು ಸುಸ್ಥಿತಿಯಲ್ಲಿಟ್ಟು ರೈತರ 53 ಸಾವಿರ ಕೋಟಿ ರೂ.ಸಾಲ ಮನ್ನಾ ಮಾಡಬೇಕು ಎಂಬ ವಿಚಾರದಲ್ಲಿ ಹಿಂದಕ್ಕೆ ಸರಿಯಲ್ಲ, ಪಲಾಯನ ಮಾಡುವುದಿಲ್ಲ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮುಂದುವರೆಯುತ್ತೇನೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಬುಧವಾರ ವಿಧಾನಸೌಧದಲ್ಲಿ ತಮ್ಮ ನೇತೃತ್ವದಲ್ಲಿ ನಡೆದ ಮೊದಲ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರೈತರ ಸಾಲ ಮನ್ನಾ ವಿಚಾರದಲ್ಲಿ ಕೆಲವು ಆರ್ಥಿಕ ತಜ್ಞರು ವ್ಯಕ್ತಪಡಿಸಿರುವ ಅಭಿಪ್ರಾಯವನ್ನು ಗಮನಿಸಿದ್ದೇನೆ. ಅವರ ಲೆಕ್ಕಾಚಾರವೇ ಬೇರೆ, ನಾವು ರಾಜಕೀಯವಾಗಿ ಆಲೋಚಿಸುವುದು ಬೇರೆ ಎಂದರು.

ರೈತರ ಸಾಲ ಮನ್ನಾ ಬಗ್ಗೆ ಕೆಲವು ಮಾಧ್ಯಮಗಳಲ್ಲಿ ಕುಮಾರಸ್ವಾಮಿ ಯೂಟರ್ನ್ ಎಂದು ಬಿಂಬಿಸಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ರೈತರ ಸಾಲ ಮನ್ನಾ ಮಾಡದಿದ್ದರೆ ರೈತರನ್ನು ದಂಗೆ ಎಬ್ಬಿಸಿ ಹೋರಾಟ ಮಾಡುವುದಾಗಿ ಹೇಳಿದ್ದಾರೆ. ರಾಜ್ಯದ ಯಾರೊಬ್ಬರೂ ಬೀದಿಗಿಳಿದು ಪ್ರತಿಭಟನೆ ನಡೆಸುವಂತಹ ಅಸ್ತ್ರ ನೀಡುವುದಿಲ್ಲ ಎಂದು ಕುಮಾರಸ್ವಾಮಿ ತಿಳಿಸಿದರು.

ರೈತ ಚೈತನ್ಯ ಯಾತ್ರೆ, ಪರಿವರ್ತನಾ ಯಾತ್ರೆ ಸಂದರ್ಭದಲ್ಲಿ ರೈತರು, ಜನಸಾಮಾನ್ಯರ ಸಂಕಷ್ಟಗಳ ಕುರಿತು ಯಡಿಯೂರಪ್ಪ ಸಂಗ್ರಹಿಸಿರುವ ಮಾಹಿತಿಯನ್ನು ನನಗೆ ನೀಡಿದರೆ, ಅವರ ನೋವನ್ನು ನಿವಾರಿಸುವ ಪ್ರಯತ್ನ ಮಾಡುತ್ತೇನೆ. ರೈತರ ಸಾಲವನ್ನು ಯಾವ ರೀತಿಯಲ್ಲಿ ಮನ್ನಾ ಮಾಡಬೇಕು ಎಂಬುದರ ಕುರಿತು ಒಂದು ನೀಲಿನಕ್ಷೆ ಸಿದ್ಧಮಾಡಿಕೊಂಡಿದ್ದೇನೆ ಎಂದು ಅವರು ಹೇಳಿದರು.

2018ರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಮತದಾರ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ನೀಡಿಲ್ಲ. ಇವತ್ತಿನ ರಾಜಕೀಯ ಅಸ್ಥಿರತೆಗೆ ರಾಜಕಾರಣಿಗಳಾದ ನಾವು ಕಾರಣರಲ್ಲ. ಸಮ್ಮಿಶ್ರ ಸರಕಾರ ರಚನೆ ಸಂಬಂಧ ಮಾಧ್ಯಮಗಳಲ್ಲಿ ಪ್ರಕಟವಾದ ಕೆಲವು ಸಮೀಕ್ಷೆಗಳ ವರದಿಗಳು ಜನತೆಯ ಮೇಲೆ ಪ್ರಭಾವ ಬೀರಿರಬಹುದು ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಈಗಾಗಲೆ ರಾಜ್ಯದಲ್ಲಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಬಿಜೆಪಿ ನಾಯಕರು ಸರಕಾರ ರಚನೆ ಮಾಡಲು ರಾಜ್ಯಪಾಲರಿಂದ ಅನುಮತಿ ಪಡೆದು, ವಿಶ್ವಾಸಮತ ಯಾಚನೆಯಿಂದ ಹಿಂದೆ ಸರಿದ ಘಟನೆಯೂ ನಡೆದು ಹೋಯಿತು ಎಂದು ಅವರು ತಿಳಿಸಿದರು.

ಜೆಡಿಎಸ್ ಹಾಗೂ ಬಿಎಸ್ಪಿ ಹೊಂದಾಣಿಕೆಯ ಜೊತೆಗೆ ಕಾಂಗ್ರೆಸ್ ಪಕ್ಷದ 78, ಇಬ್ಬರು ಪಕ್ಷೇತರ ಶಾಸಕರ ಬೆಂಬಲದೊಂದಿಗೆ ನನ್ನ ನಾಯಕತ್ವದಲ್ಲಿ ಸರಕಾರ ರಚನೆ ಮಾಡಲು ಬೆಂಬಲ ಸೂಚಿಸಿದ್ದಾರೆ. ಕಾಂಗ್ರೆಸ್ ಅಧಿನಾಯಕಿ ಸೋನಿಯಾಗಾಂಧಿ, ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿ, ಮುಖಂಡರಾದ ಗುಲಾಂ ನಬಿ ಆಝಾದ್, ಅಶೋಕ್ ಗೆಹ್ಲೋಟ್, ಕೆ.ಸಿ.ವೇಣುಗೋಪಾಲ್, ಮಾಜಿ ಸಿಎಂ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಪರಮೇಶ್ವರ್, ಮಲ್ಲಿಕಾರ್ಜುನ ಖರ್ಗೆ, ಡಿ.ಕೆ.ಶಿವಕುಮಾರ್ ಸೇರಿದಂತೆ ಎಲ್ಲರ ತೀರ್ಮಾನದಂತೆ ನನಗೆ ಜವಾಬ್ದಾರಿ ನೀಡಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು.

ರಾಜ್ಯದಲ್ಲಿ ವಿಚಿತ್ರ ಪರಿಸ್ಥಿತಿ ಉದ್ಭವಾಗಿದೆ. ಜನಸಾಮಾನ್ಯರಲ್ಲಿ ಈ ರಾಜಕೀಯ ಮೈತ್ರಿ ಕುರಿತು ಪರ-ವಿರೋಧ ಮಾತನಾಡುವವರು ಇದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತವಾಗುತ್ತಿರುವ ಪ್ರತಿಕ್ರಿಯೆಗಳನ್ನು ಗಮನಿಸಿದ್ದೇನೆ. ಈ ಹೊಂದಾಣಿಕೆ ಒಂದು ವರ್ಗದ ಜನರಲ್ಲಿ ಮೂಡಿಸಿರುವ ಅನುಮಾನಗಳು ತಪ್ಪು ಎಂಬುದನ್ನು ನನ್ನ ನಡವಳಿಕೆಗಳ ಮೂಲಕ ಸಾಬೀತುಪಡಿಸುತ್ತೇನೆ ಎಂದು ಅವರು ತಿಳಿಸಿದರು.

ಮೈತ್ರಿ ವಿಚಾರವನ್ನು ಪ್ರಸ್ತಾಪಿಸಿ ಬಿಜೆಪಿ ನಾಯಕರು ನೈತಿಕತೆ, ಅನೈತಿಕತೆಯ ಮಾತುಗಳನ್ನಾಡಿದ್ದಾರೆ. 2004ರಲ್ಲಿ ರಚನೆಯಾದ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರಕಾರವನ್ನು ಅತಂತ್ರಗೊಳಿಸಲು ನಾನು ಪ್ರಮುಖ ಪಾತ್ರವಹಿಸಿದ್ದೆ. ಆಗಿನ ಸಂದರ್ಭಗಳು ಬೇರೆ ಇತ್ತು ಎಂದು ಅವರು ಹೇಳಿದರು.

ಈ ಸರಕಾರ ಅತ್ಯಂತ ಸುಭದ್ರ, ಸದೃಢವಾಗಿ ನಡೆಯುತ್ತದೆ. ಯಾವುದೆ ಭಿನ್ನಾಭಿಪ್ರಾಯಗಳಿಗೆ ಅವಕಾಶ ನೀಡದೆ, ನಾಡಿನ ಜನತೆಯ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಈ ಸರಕಾರ ನಡೆಯಲಿದೆ. ನಮ್ಮ ಪಕ್ಷಕ್ಕೆ ಸ್ಪಷ್ಟ ಬಹುಮತ ಬರದಿದ್ದರೆ, ವಿರೋಧ ಪಕ್ಷದಲ್ಲಿ ಕೂರುತ್ತೇನೆ ಎಂದು ಹೇಳಿದ್ದೆ. ಸಾಂದರ್ಭಿಕ ಶಿಶು ನಾನು. ವೈಯಕ್ತಿಕ ಆಸೆ, ತೀರ್ಮಾನಗಳನ್ನು ಬದಿಗಿಡುವ ಅನಿವಾರ್ಯತೆ ನನ್ನ ಮೇಲಿದೆ ಎಂದು ಕುಮಾರಸ್ವಾಮಿ ತಿಳಿಸಿದರು.

ರೈತರನ್ನು ಆರ್ಥಿಕವಾಗಿ ಸದೃಢರನ್ನಾಗಿಸಬೇಕು, ಹಿರಿಯ ನಾಗರಿಕರು, ಶಿಕ್ಷಣ, ವಸತಿ, ವೈದ್ಯಕೀಯ ಕ್ಷೇತ್ರಕ್ಕೆ ನನ್ನದೆ ಆದ ಕಲ್ಪನೆಗಳನ್ನು ಇಟ್ಟುಕೊಂಡಿದ್ದೇನೆ. ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯೂ ನಮ್ಮ ಮುಂದಿದೆ. ಹಿಂದಿನ ಸರಕಾರದ ಜನಪ್ರಿಯ ಕಾರ್ಯಕ್ರಮಗಳನ್ನು ಮುಂದುವರೆಸಿಕೊಂಡು ಹೋಗುವುದರ ಜೊತೆಗೆ, ಹೊಸ ಕಾರ್ಯಕ್ರಮಗಳನ್ನು ಜಾರಿಗೆ ತರುವ ಜವಾಬ್ದಾರಿ ನನ್ನ ಮೇಲಿದೆ. ಮುಂದಿನ ಹೊಸ ಬಜೆಟ್‌ನಲ್ಲಿ ನನ್ನ ಕಾರ್ಯಕ್ರಮಗಳು, ಯೋಜನೆಗಳನ್ನು ಪ್ರಕಟಿಸಲಿದ್ದೇನೆ ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News