ಬೆಂಗಳೂರು: ಮಾನಸಿಕ ಅಸ್ವಸ್ಥೆಗೆ ಥಳಿತ
ಬೆಂಗಳೂರು, ಮೇ 24: ಮಕ್ಕಳ ಕಳ್ಳ ಎಂದು ಶಂಕಿಸಿ ವ್ಯಕ್ತಿಯೊಬ್ಬನನ್ನು ಥಳಿಸಿ ಆತನ ಸಾವಿಗೆ ಕಾರಣವಾದ ಘಟನೆ ನಡೆದ ಬೆನ್ನಲ್ಲೇ ಮಹಿಳೆಯೊಬ್ಬಾಕೆಯನ್ನು ಸಾರ್ವಜನಿಕರು ಥಳಿಸಿ ಶ್ರೀರಾಂಪುರ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ.
ಮಕ್ಕಳಿಗೆ ಚಾಕಲೇಟ್ ಕೊಟ್ಟು ಅವರನ್ನು ಅಪಹರಿಸಲು ಮಹಿಳೆ ಬಂದಿದ್ದಳು ಎಂದು ಅನುಮಾನಿಸಿ ಶ್ರೀರಾಂಪುರದ ಜನ ಆಕೆಯ ಮೇಲೆ ಹಲ್ಲೆ ನಡೆಸಿದ್ದಾರೆ. ಘಟನೆ ಬಗ್ಗೆ ಮಾಹಿತಿ ಪಡೆದ ಪೊಲೀಸರು ಕೂಡಲೇ ಸ್ಥಳಕ್ಕೆ ಆಗಮಿಸಿ ಮಹಿಳೆಯನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದಾರೆ.
ಆದರೆ ವಿಚಾರಣೆ ವೇಳೆ ಮಹಿಳೆ ಮಾನಸಿಕ ಅಸ್ವಸ್ಥೆ ಎಂದು ಗೊತ್ತಾಗಿದ್ದು, ಮಕ್ಕಳ ಕದಿಯಲು ಬಂದಿರಲಿಲ್ಲ ಎನ್ನಲಾಗಿದೆ. ಹಲ್ಲೆಯಿಂದ ಗಾಯಗೊಂಡಿರುವ ಮಹಿಳೆಯನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸುಳ್ಳು ಸುದ್ದಿ, ವದಂತಿಗಳಿಗೆ ಕಿವಿಗೊಟ್ಟ ಸಾರ್ವಜನಿಕರು ಮಹಿಳೆ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಘಟನೆ ನಡೆಯುತ್ತಿದ್ದಂತೆ ಶ್ರೀರಾಂಪುರದಲ್ಲಿ ನೂರಾರು ಜನ ಜಮಾಯಿಸಿ ಪೊಲೀಸರ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು. ಬಳಿಕ ಸಾರ್ವಜನಿಕರ ಮನವೊಲಿಸಿದರು.