ಬಂದ್‌ಗೆ ಅವಕಾಶ ಇಲ್ಲ: ಕಮಿಷನರ್ ಟಿ.ಸುನೀಲ್‌ಕುಮಾರ್ ಎಚ್ಚರಿಕೆ

Update: 2018-05-27 14:57 GMT

ಬೆಂಗಳೂರು, ಮೇ 27: ರಾಜಧಾನಿ ಬೆಂಗಳೂರು ವ್ಯಾಪ್ತಿಯಲ್ಲಿ ಯಾವುದೇ ರೀತಿ ಬಂದ್ (ಮೇ 28) ಮಾಡಲು ಅವಕಾಶ ನೀಡುವುದಿಲ್ಲ ಎಂದು ನಗರ ಪೊಲೀಸ್ ಆಯುಕ್ತ ಟಿ.ಸುನೀಲ್‌ಕುಮಾರ್ ತಿಳಿಸಿದ್ದಾರೆ.

ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರ ವ್ಯಾಪ್ತಿಯಲ್ಲಿ ಅಂಗಡಿ-ಮುಗ್ಗಟ್ಟುಗಳನ್ನು ಮುಚ್ಚಿಸುವುದು, ರಸ್ತೆ ತಡೆ ನಡೆಸುವುದು, ವಾಹನ ಸಂಚಾರಕ್ಕೆ ಅಡ್ಡಿವುಂಟು ಮಾಡಿದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದೆಂದು ಅವರು ಹೇಳಿದರು.

ಯಾವುದೇ ರೀತಿಯ ಬಂದ್‌ಗೆ ಅವಕಾಶ ಇಲ್ಲ. ಇದನ್ನು ಮನಗಂಡು ಬಂದ್ ನಡೆಸಲು ಯಾರು ಮುಂದಾಗಬಾರದು. ಒಂದು ವೇಳೆ ಬಂದ್ ಆಚರಿಸಲು ಯತ್ನಿಸಿದರೆ, ಅಂತಹವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸುನೀಲ್ ಕುಮಾರ್ ಎಚ್ಚರಿಕೆ ನೀಡಿದರು.

ಪ್ರತಿಭಟನೆ, ಮೆರವಣಿಗೆ, ಧರಣಿಯನ್ನು ಶಾಂತಿಯುತವಾಗಿ ನಡೆಸಿದರೆ ಅಗತ್ಯ ಭದ್ರತಾ ವ್ಯವಸ್ಥೆಯನ್ನು ಕಲ್ಪಿಸಲಾಗುವುದು. ಅದನ್ನು ಬಿಟ್ಟು ಕಾನೂನನ್ನು ಕೈಗೆತ್ತಿಕೊಳ್ಳಲು ಮುಂದಾದರೆ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅವರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News