ಸಂಪುಟ ರಚನೆಯ ಹೊಣೆಗಾರಿಕೆ ಅಝಾದ್ ಹೆಗಲಿಗೆ
ಹೊಸದಿಲ್ಲಿ, ಮೇ 28: ಕರ್ನಾಟಕದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ನೇತೃತ್ವದ ಸಮ್ಮಿಶ್ರ ಸರಕಾರದ ಸಚಿವ ಸಂಪುಟ ವಿಸ್ತರಣೆಯ ಕಸರತ್ತನ್ನು ಪೂರ್ಣಗೊಳಿಸುವ ಹೊಣೆಗಾರಿಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಗುಲಾಂ ನಬಿ ಅಝಾದ್ ಹೆಗಲಿಗೆ ರವಾನೆಯಾಗಿದೆ.
ಅಮೆರಿಕ ಪ್ರವಾಸದಲ್ಲಿರುವ ಅಧ್ಯಕ್ಷ ರಾಹುಲ್ ಗಾಂಧಿ ಅವರು ಅಝಾದ್ ರಿಗೆ ಸಂಪುಟ ವಿಸ್ತರಣೆಯ ನಿಟ್ಟಿನಲ್ಲಿ ಜೆಡಿಎಸ್ ನಾಯಕರ ಜೊತೆ ಮಾತುಕತೆಯ ಜವಾಬ್ದಾರಿಯನ್ನು ವಹಿಸಿಕೊಟ್ಟಿದ್ದಾರೆ. ಆ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ಸಂಪುಟ ವಿಸ್ತರಣೆ ಪ್ರಕ್ರಿಯೆ ಫೂರ್ಣಗೊಳ್ಳುವ ಲಕ್ಷಣ ಕಾಣಿಸಿಕೊಂಡಿದೆ.
ಹೊಸದಿಲ್ಲಿಗೆ ತೆರಳಿರುವ ಮುಖ್ಯ ಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಗುಲಾಂ ನಬಿ ಅಝಾದ್ ರನ್ನು ಸೋಮವಾರ ಬೆಳಗ್ಗೆ ಭೇಟಿಯಾಗಿದ್ದಾರೆ. ಹೊಸದಿಲ್ಲಿಯ ಅವೆನ್ಯೂ ರಸ್ತೆಯಲ್ಲಿರುವ ನಿವಾಸದಲ್ಲಿ ಅಝಾದ್ ರನ್ನು ಭೇಟಿಯಾದ ಸಿಎಂ ಕುಮಾರಸ್ವಾಮಿ ಸಂಪುಟ ವಿಸ್ತರಣೆಗೆ ಸಂಬಂಧಿಸಿ ಚರ್ಚೆ ನಡೆಸಿದರು. ಈ ವೇಳೆ ಮುಖ್ಯ ಮಂತ್ರಿ ಕುಮಾರಸ್ವಾಮಿ ಜೊತೆ ಅವರ ಸಹೋದರ ಎಚ್ ಡಿ ರೇವಣ್ಣ ಇದ್ದರು ಎಂದು ತಿಳಿದು ಬಂದಿದೆ.