ತುಮಕೂರು: ವಿಶ್ವ ತಂಬಾಕು ರಹಿತ ದಿನ ಆಚರಣೆ
ತುಮಕೂರು,ಮೇ.31: ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಮಕ್ಕಳಿಗೆ ಫ್ರೌಢಾವಸ್ಥೆಯಲ್ಲಿರುವಾಗಲೇ ಅರಿವು ಮೂಡಿಸಿದಲ್ಲಿ ಮಾರಕ ರೋಗಗಳಿಂದ ದೂರವಿರಬಹುದೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ದಿವ್ಯಾ ವಿ.ಗೋಪಿನಾಥ್ ಅವರು ಅಭಿಪ್ರಾಯಪಟ್ಟಿದ್ದಾರೆ.
ನಗರದ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾಸ್ಪತ್ರೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಶ್ರೀ ಸಿದ್ಧಾರ್ಥ ವೈದ್ಯಕೀಯ ಮಹಾವಿದ್ಯಾಲಯ, ನರ್ಸಿಂಗ್ ಕಾಲೇಜುಗಳು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ, ಪೊಲೀಸ್ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಭಾರತೀಯ ವೈದ್ಯಕೀಯ ಸಂಘ, ಹಾಲು ಒಕ್ಕೂಟ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಹಯೋಗದಲ್ಲಿಂದು ಆಯೋಜಿಸಿದ್ದ 'ವಿಶ್ವ ತಂಬಾಕು ರಹಿತ ದಿನ ಹಾಗೂ ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ-2018'ನ್ನು ಉದ್ಘಾಟಿಸಿ ಮಾತನಾಡುತ್ತಿದ್ದ ಅವರು, ಚಿತ್ರ ಮಂದಿರದ ಸಿನಿಮಾ ಪ್ರದರ್ಶನ, ದೂರದರ್ಶನ ಕಾರ್ಯಕ್ರಮಗಳಲ್ಲಿ ತಂಬಾಕು, ಧೂಮಪಾನದಿಂದಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುತ್ತಿದ್ದರೂ ಸಹ ಜನರು ಇನ್ನೂ ಎಚ್ಚೆತ್ತುಕೊಳ್ಳದಿರುವುದು ವಿಷಾದದ ಸಂಗತಿ. ಮಹಿಳೆಯರು ಮಕ್ಕಳೆನ್ನದೆ ತಂಬಾಕು ಉತ್ಪನ್ನಗಳಿಗೆ ಬಲಿಯಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಶಾಲಾ ಮಕ್ಕಳಿಗೆ ಚಿಕ್ಕವಯಸ್ಸಿನಲ್ಲಿಯೇ ತಂಬಾಕು ಉತ್ಪನ್ನಗಳಿಂದಾಗುವ ಅಡ್ಡ ಪರಿಣಾಮಗಳ ಬಗ್ಗೆ ತಿಳುವಳಿಕೆ ಮೂಡಿಸಿದರೆ ಮುಂದಾಗುವ ಆರೋಗ್ಯ ಸಮಸ್ಯೆಗಳನ್ನು ನಿಯಂತ್ರಿಸಬಹುದು ಎಂದು ತಿಳಿಸಿದರು.
ಪ್ರತಿಜ್ಞಾ ವಿಧಿ ಬೋಧಿಸಿದ ತುಮಕೂರು ವಿವಿ ಕುಲಪತಿ ಪ್ರೊ.ವೈ.ಎಸ್.ಸಿದ್ದೇಗೌಡ,ಧೂಮಪಾನ, ಮದ್ಯಪಾನ, ತಂಬಾಕು ಸೇವನೆಗಳು ಸಾಮಾಜಿಕ ಪಿಡುಗುಗಳಾಗಿ ಪರಿಣಮಿಸಿವೆ. ಈ ದಿಸೆಯಲ್ಲಿ ಜನರು ತಮ್ಮಲ್ಲಿರುವ ದುಶ್ಚಟಗಳನ್ನು ದೂರಮಾಡಿ ಉತ್ತಮ ಹವ್ಯಾಸಗಳನ್ನು ರೂಢಿಸಿಕೊಳ್ಳಬೇಕು. ನಮ್ಮ ನಡೆ ಬದುಕಿನ ಗುರಿ ಸಾಧನೆಯತ್ತ ಸಾಗಬೇಕು. ತಂಬಾಕು ಉತ್ಪನ್ನಗಳ ಸೇವನೆಯಿಂದ ಮುಕ್ತರಾದಲ್ಲಿ ದೇಶದ ಅಭಿವೃದ್ಧಿ ಕಾಣಲು ಸಾಧ್ಯ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಡಾ:ವಿಶಾಲ್,ಆರ್. ಮಾತನಾಡಿ, ತಂಬಾಕು ಸೇವನೆ ಧೂಮಪಾನದಿಂದ ಹಲವಾರು ಬಗೆಯ ಕ್ಯಾನ್ಸರ್ ರೋಗ ಬರುವ ಸಾಧ್ಯತೆ ಇದೆ. ರೋಗಿಗಳಿಗೆ ಅರಿವು ಮೂಡಿಸಬೇಕಾದ ವೈದ್ಯರು ತಂಬಾಕು ಸೇವನೆಗೆ ದಾಸರಾಗದೆ ತಂಬಾಕು ಉತ್ಪನ್ನಗಳಿಂದ ದೂರವಿರುವ ಬಗ್ಗೆ ಜನ ಸಾಮಾನ್ಯರಿಗೆ ತಿಳುವಳಿಕೆ ನೀಡುವ ನೈತಿಕ ಜವಾಬ್ದಾರಿ ರೂಢಿಸಿಕೊಳ್ಳಬೇಕು ಎಂದು ತಿಳಿಸಿದರು.
ತಂಬಾಕಿನಿಂದಾಗುವ ದುಷ್ಪರಿಣಾಮಗಳು ಕುರಿತು ಉಪನ್ಯಾಸ ನೀಡಿದ ಡಾ: ಟಿ.ಎನ್.ಪುರುಷೋತ್ತಮ್, ವಿಶ್ವಸಂಸ್ಥೆಯ ಕರೆಯಂತೆ ಪ್ರತಿವರ್ಷ ಮೇ 31ರಂದು ವಿಶ್ವ ತಂಬಾಕು ರಹಿತ ದಿನವನ್ನು ಆಚರಿಸಲಾಗುತ್ತಿದೆ. ಅಲ್ಲದೆ ವಿಧಾನಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದರಿಂದ ಮೇ 16ರಂದು ಆಯೋಜಿಸಬೇಕಿದ್ದ ರಾಷ್ಟ್ರೀಯ ಡೆಂಗ್ಯೂ ದಿನವನ್ನೂ ಸಹ ಇಂದು ಹಮ್ಮಿಕೊಳ್ಳಲಾಗಿದೆ ಎಂದರು.
ತಂಬಾಕು ವರ್ಜಿಸುವುದರಿಂದ ಶೇ.22 ರಷ್ಟು ಕ್ಯಾನ್ಸರ್ ಕಾಯಿಲೆಗಳಿಂದ ದೂರವಿರಬಹುದು. ಸುಮಾರು 7 ಸಾವಿರ ಅಪಾಯಕಾರಿ ರಾಸಾಯನಿಕ ವಸ್ತುಗಳನ್ನು ಹೊಂದಿರುವ ತಂಬಾಕಿನಿಂದ ಪಾರ್ಶ್ವವಾಯು, ಶ್ವಾಸಕೋಶ ಸಂಬಂಧಿ ಕಾಯಿಲೆ, ಅಸ್ತಮ, ಮಧುಮೇಹ, ಹೃದಯ, ಮೂಳೆಗೆ ಸಂಬಂಧಿಸಿದ ಹಲವಾರು ಆರೋಗ್ಯ ಸಮಸ್ಯೆಗಳಿಗೆ ತುತ್ತಾಗುವ ಸಂಭವವಿರುತ್ತದೆ. ತಂಬಾಕು ಸೇವನೆಯಿಂದ ದೇಹದ ಆರೋಗ್ಯ ಹಾನಿಯಾಗುವುದಲ್ಲದೆ ಸಮಾಜ ಹಾಗೂ ಕುಟುಂಬಕ್ಕೆ ಹೊರೆಯಾಗಬೇಕಾಗುತ್ತದೆ. ಈ ನಿಟ್ಟಿನಲ್ಲಿ ಜನರು ಎಚ್ಚರಿಕೆ ವಹಿಸುವುದು ಅಗತ್ಯವೆಂದು ತಿಳಿಸಿದರು.
ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಾಬಾ ಸಾಹೇಬ್ ಜಿನರಾಳ್ಕರ್ ಮಾತನಾಡಿ, ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು 2013ರಲ್ಲಿ ಕೋಟ್ಪಾ ಕಾಯ್ದೆಯನ್ನು ದೇಶದಲ್ಲಿ ಜಾರಿಗೆ ತರಲಾಯಿತು. ಈ ಕಾಯ್ದೆಯನ್ವಯ ತಂಬಾಕು ಉತ್ಪನ್ನಗಳನ್ನು 18 ವರ್ಷದೊಳಗಿನ ಮಕ್ಕಳಿಗೆ ಮಾರಾಟ ಮಾಡುವುದು, ಶಾಲಾ ಕಾಲೇಜಿನಿಂದ 100 ಯಾರ್ಡ್ ಒಳಗಡೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಮಾರಾಟ ಮಾಡುವುದು ಅಪರಾಧವಾಗಿದೆ ಎಂದರಲ್ಲದೆ, ತಂಬಾಕಿನಿಂದ 25ಕ್ಕೂ ಹೆಚ್ಚು ರೋಗಗಳು ಬರುವ ಸಾಧ್ಯತೆ ಇದ್ದು, ದೇಶದಲ್ಲಿ ತಂಬಾಕು ಸೇವನೆಯಿಂದ ಪ್ರತಿ ದಿನ 2500 ಜನರು ಸಾವನ್ನಪ್ಪುತ್ತಿದ್ದಾರೆ. ಇನ್ನಾದರೂ ತಂಬಾಕು ಉತ್ಪನ್ನಗಳ ಸೇವನೆಯಿಂದ ದೂರವಿದ್ದು, ಆರೋಗ್ಯವಂತ ಸಮಾಜ ಕಟ್ಟೋಣ ಎಂದು ತಿಳಿಸಿದರು.
ವಿಶ್ವವಿದ್ಯಾನಿಲಯದಿಂದ ಏರ್ಪಡಿಸಿದ್ದ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಚಾಲನೆ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ: ಹೆಚ್.ವಿ.ರಂಗಸ್ವಾಮಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ:ವೀರಭದ್ರಯ್ಯ, ಭಾರತೀಯ ವೈದ್ಯಕೀಯ ಸಂಘದ ಮಹೇಶ್, ಜಿಲ್ಲಾ ಕಾರ್ಮಿಕ ಅಧಿಕಾರಿ ಚಂದ್ರಶೇಖರ್ ಮತ್ತಿತರರು ಹಾಜರಿದ್ದರು.