ಬೆಂಗಳೂರು : ಕ್ಷುಲ್ಲಕ ಕಾರಣಕ್ಕೆ ದಂಪತಿ ಆತ್ಮಹತ್ಯೆ

Update: 2018-06-11 14:16 GMT

ಬೆಂಗಳೂರು, ಜೂ.11: ಕ್ಷುಲ್ಲಕ ಕಾರಣಕ್ಕೆ ಜಗಳವಾಡಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಹಾಸನ ಮೂಲದ ಸೌಮ್ಯ (23) ಮತ್ತು ಅನೂಪ್ (34) ಮೃತಪಟ್ಟಿರುವ ದಂಪತಿಗಳಾಗಿದ್ದು, ನಗರದ 8ನೇ ಮೈಲಿಯ ಬಳಿ ವಾಸವಿದ್ದರು ಎನ್ನಲಾಗಿದೆ.
ಅನೂಪ್ ಫೇಸ್‌ಬುಕ್‌ನಲ್ಲಿ ಯುವತಿಯೋರ್ವಳ ಜತೆ ಆತ್ಮೀಯವಾಗಿದ್ದ ಎಂಬ ವಿಚಾರವಾಗಿ ಜಗಳವಾಗಿ, ಸೋಮವಾರ ಮಧ್ಯಾಹ್ನದ ವೇಳೆಗೆ ಇಬ್ಬರೂ ಪ್ರತ್ಯೇಕ ಕೊಠಡಿಗಳಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೊದಲು ಒಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಅದನ್ನು ನೋಡಿ ಮತ್ತೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ದಂಪತಿಗೆ ಮೂರು ವರ್ಷದ ಮಗುವಿದ್ದು, ಸೌಮ್ಯ ಅವರ ತವರು ಮನೆಯಲ್ಲಿ ಬೆಳೆಯುತ್ತಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಸಂಬಂಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News