ಜಾನುವಾರು ಕಳ್ಳತನದ ಶಂಕೆ: ಇಬ್ಬರನ್ನು ಥಳಿಸಿ ಹತ್ಯೆಗೈದ ಗುಂಪು
Update: 2018-06-13 15:30 GMT
ಪಾಟ್ನಾ, ಜೂ.13: ಜಾನುವಾರು ಕಳ್ಳರೆಂಬ ಶಂಕೆಯಲ್ಲಿ ಇಬ್ಬರು ವ್ಯಕ್ತಿಗಳನ್ನು ಗುಂಪೊಂದು ಥಳಿಸಿ ಕೊಂದಿರುವ ಘಟನೆ ಜಾರ್ಖಂಡ್ ನ ಗೊಡ್ಡಾ ಜಿಲ್ಲೆಯಲ್ಲಿ ನಡೆದಿದೆ. ಜಾನುವಾರು ಕಳ್ಳತನ ಮಾಡುತ್ತಿದ್ದ ಐವರ ಗುಂಪಿನಲ್ಲಿ ಈ ಇಬ್ಬರಿದ್ದರು. ಈ ಬಗ್ಗೆ ಮಾಹಿತಿ ದೊರೆತ ನಂತರ ಗುಂಪೊಂದು ಈ ಇಬ್ಬರನ್ನು ಹಿಡಿದು ಥಳಿಸಿ ಹತ್ಯೆಗೈದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮೃತರನ್ನು ಸಿರಾಜುದ್ದೀನ್ ಅನ್ಸಾರಿ ಹಾಗು ಮುರ್ತಝಾ ಅನ್ಸಾರಿ ಎಂದು ಗುರುತಿಸಲಾಗಿದೆ.
“ಇಬ್ಬರನ್ನು ಹಿಡಿದ ಪೊಲೀಸರು ಹಿಗ್ಗಾಮುಗ್ಗಾ ಥಳಿಸಿದ್ದು, ಪರಿಣಾಮ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ” ಎಂದು ಗೊಡ್ಡಾ ಸುಪರಿಂಟೆಂಡೆಂಟ್ ಆಫ್ ಪೊಲೀಸ್ ರಾಜೀವ್ ರಂಜನ್ ಸಿಂಗ್ ಹೇಳಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ನಾಲ್ವರನ್ನು ಬಂಧಿಸಲಾಗಿದೆ.
ಈ ಪ್ರದೇಶದಲ್ಲಿ ಈ ಹಿಂದೆ ಜಾನುವಾರು ಕಳ್ಳತನ ಘಟನೆಗಳು ನಡೆದಿತ್ತು. ಇಬ್ಬರ ಮೇಲೆ ಹಲ್ಲೆಗೈಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.