ಐದು ಕ್ಷೇತ್ರಗಳ ಗೆಲುವು ಮುಂದಿನ ಚುನಾವಣೆಗೆ ದಿಕ್ಸೂಚಿ: ಮಟ್ಟಾರ್

Update: 2018-06-18 17:29 GMT

ಉಡುಪಿ, ಜೂ.18: ವಿಧಾನಸಭಾ ಚುನಾವಣೆಯಲ್ಲಿ ಎಲ್ಲರ ಸಂಘಟಿತ ಪ್ರಯತ್ನದಿಂದ ಉಡುಪಿ ಜಿಲ್ಲೆಯಲ್ಲಿ ಬಿಜೆಪಿ ಪಡೆದ ಭರ್ಜರಿ ಗೆಲುವು ಮುಂಬರುವ ಎಲ್ಲಾ ಚುನಾವಣೆಗಳಿಗೆ ದಿಕ್ಸೂಚಿಯಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಅಭಿಪ್ರಾಯಪಟ್ಟಿದ್ದಾರೆ.

ಕಡಿಯಾಳಿಯ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಮತ್ತು ಚುನಾವಣಾ ಅವಲೋಕನ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾ ಪದಾಧಿಕಾರಿಗಳನ್ನು ಅಭಿನಂದಿಸಿ ಅವರು ಮಾತನಾಡುತಿದ್ದರು.

ರಾಜ್ಯದಾದ್ಯಂತ ಬಿಜೆಪಿ ಉತ್ತಮ ಸಾಧನೆಮಾಡಿದೆ. ಕೇವಲ 8 ಸ್ಥಾನಗಳ ಕೊರತೆಯಿಂದ ಸದ್ಯದ ಪರಿಸ್ಥಿತಿಯಲ್ಲಿ ರಾಜ್ಯದ ಆಡಳಿತ ಕೈತಪ್ಪಿದರೂ ಮುಂದಿನ ದಿನಗಳಲ್ಲಿ ಬಿ.ಎಸ್. ಯಡಿಯೂರಪ್ಪನೇತೃತ್ವದಲ್ಲಿ ಬಿಜೆಪಿ ರಾಜ್ಯದಲ್ಲೂ ಆಡಳಿತದ ಚುಕ್ಕಾಣಿ ಹಿಡಿಯುವ ಕಾಲ ಶೀಘ್ರವೇ ಬರಲಿದೆ ಎಂದವರು ಆಶಾವಾದ ವ್ಯಕ್ತಪಡಿಸಿದರು.

ಮುಂಬರುವ ನಗರಸಭೆ, ಪುರಸಭೆ, ಪಟ್ಟಣಪಂಚಾಯತ್, ಸಹಕಾರಿ ಕ್ಷೇತ್ರಗಳ ಚುನಾವಣೆಯ ಜೊತೆಗೆ ಲೋಕಸಭಾ ಚುನಾವಣೆಯು ನಮ್ಮ ಮುಂದಿದೆ. ವಾತಾವರಣ ಬಿಜೆಪಿಯ ಪರವಾಗಿದೆ. ವಿಧಾನಸಭಾ ಚುನಾವಣಾ ಗೆಲುವಿನ ಸ್ಪೂರ್ತಿ ಮುಂದಿನ ಎಲ್ಲಾ ಚುನಾವಣೆಗಳ ವಿಜಯಕ್ಕೆ ಪ್ರೇರಣೆ ಯಾಗಬೇಕು. ಸಂಘಟಿತ ಪ್ರಯತ್ನ ಹಾಗೂ ಅವಿತರ ಶ್ರಮದೊಂದಿಗೆ ಕಾರ್ಯಪ್ರವೃತ್ತರಾಗಿ ಎಲ್ಲ ಚುನಾವಣೆಗಳಲ್ಲಿ ವಿಜಯ ಪತಾಕೆ ಹಾರಿಸೋಣ ಎಂದು ಹೆಗ್ಡೆ ಹೇಳಿದರು.

ಸಂಸದೆ ಶೋಭಾ ಕರಂದ್ಲಾಜೆ ಮಾತನಾಡಿ, ಕೇಂದ್ರ ಸರಕಾರ ಅನುಷ್ಟಾನಗೊಳಿಸಿರುವ ವಿವಿಧ ಜನಪರ ಯೋಜನೆಗಳ ವಿವರಗಳನ್ನು ಜನತೆಗೆ ತಲುಪಿಸುವ ಜೊತೆಗೆ ಪಕ್ಷದ ಮುಂದಿನ ಸಂಘಟನಾತ್ಮಕ ಚಟುವಟಿಕೆಗಳಲ್ಲಿ ಪಕ್ಷದ ಮುಖಂಡರು, ಪದಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕಿದೆ ಎಂದರು.

ಪಕ್ಷದ ಮುಂದಿನ ಸಂಘಟನಾತ್ಮಕ ಕಾರ್ಯಕ್ರಮಗಳ ಬಗ್ಗೆ ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕುಮಾರ್ ಮಂಗಳೂರು ವಿಸ್ತ್ರತ ವಿವರ ನೀಡಿದರು. ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ವಿಸ್ತಾರಕರಾಗಿ ಉತ್ತಮ ಕಾರ್ಯನಿರ್ವಹಿಸಿದ ನವೀನ್‌ರಾಜ್, ದಿನೇಶ್, ಪ್ರಕಾಶ್, ಸುಜಿತ್, ಸುಹಾಸ್‌ರನ್ನು ಪಕ್ಷದ ವತಿಯಿಂದ ಗೌರವಿಸಲಾಯಿತು.

ಮಾಜಿ ಸಚಿವ, ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ವಿಧಾನಸಭೆಯ ವಿಪಕ್ಷದ ಮುಖ್ಯ ಸಚೇತಕ ಸುನೀಲ್ ಕುಮಾರ್, ಶಾಸಕರಾದ ಕೆ.ರಘುಪತಿ ಭಟ್, ಲಾಲಾಜಿ ಮೆಂಡನ್, ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಜಿಪಂ ಅಧ್ಯಕ್ಷ ದಿನಕರ ಬಾಬು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, ಕುಯಿಲಾಡಿ ಸುರೇಶ್ ನಾಯಕ್, ಯಶ್ಪಾಲ್ ಸುವರ್ಣ, ಸಂಧ್ಯಾ ರಮೇಶ್, ರಾಜ್ಯ ಮಹಿಳಾ ಮೋರ್ಚಾ ಕಾರ್ಯದರ್ಶಿ ಗೀರ್ತಾಂಜಲಿ ಸುವರ್ಣ, ರಾಜ್ಯ ಕಾರ್ಯಕಾರಿಣಿ ಸದಸ್ಯೆ ಶ್ಯಾಮಲಾ ಕುಂದರ್, ಜಿಪಂ ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News