ಮಡಿಕೇರಿ: ಪೆರುಂಬಾಡಿ-ಮಾಕುಟ್ಟ ರಸ್ತೆ ಕಾಮಗಾರಿ ಶೀಘ್ರ ಆರಂಭಕ್ಕೆ ಸಚಿವ ಎಚ್.ಡಿ.ರೇವಣ್ಣ ಸೂಚನೆ
ಮಡಿಕೇರಿ, ಜೂ.20: ಕರ್ನಾಟಕ ಮತ್ತು ಕೇರಳ ರಾಜ್ಯ ಸಂಪರ್ಕ ಕಲ್ಪಿಸುವ ಅಂತರಾಜ್ಯ ಪೆರುಂಬಾಡಿ-ಮಾಕುಟ್ಟ ಹೆದ್ದಾರಿಯು ಅತಿವೃಷ್ಟಿಯಿಂದ ಹದಗೆಟ್ಟಿದ್ದು, ಈ ರಸ್ತೆ ಕಾಮಗಾರಿಯನ್ನು ತಕ್ಷಣ ಆರಂಭಿಸುವಂತೆ ಸಂಬಂಧಪಟ್ಟ ಇಂಜಿನಿಯರ್ ಗಳಿಗೆ ಲೋಕೋಪಯೋಗಿ ಸಚಿವರಾದ ಎಚ್.ಡಿ.ರೇವಣ್ಣ ಅವರು ಸೂಚನೆ ನೀಡಿದ್ದಾರೆ.
ಕಳೆದ ವಾರ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಹದಗೆಟ್ಟಿರುವ ರಸ್ತೆ ಸಂಬಂಧಿಸಿದಂತೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾಹಿತಿ ಪಡೆದು ಸಚಿವರು ಮಾತನಾಡಿದರು. ‘ಪೆರುಂಬಾಡಿ-ಮಾಕುಟ್ಟ ಅಂತರಾಜ್ಯ ಹೆದ್ದಾರಿ ಸರಿಪಡಿಸುವ ನಿಟ್ಟಿನಲ್ಲಿ ಅನುಮತಿ ನೀಡುವುದು ನನ್ನ ಜವಾಬ್ದಾರಿ. ಇಂದಿನಿಂದಲೇ ಕಾಮಗಾರಿ ಆರಂಭಿಸುವುದು ಇಂಜಿನಿಯರ್ ಗಳ ಕರ್ತವ್ಯವಾಗಿದೆ. ಆ ನಿಟ್ಟಿನಲ್ಲಿ ರಸ್ತೆ ಕಾಮಗಾರಿ ಕೈಗೆತ್ತಿಕೊಳ್ಳಲು ವಿಶೇಷ ವಿನಾಯ್ತಿ ನೀಡಲಾಗುವುದು ಎಂದು ಸ್ಪಷ್ಟಪಡಿಸಿದರು.’
ಪೆರುಂಬಾಡಿ-ಮಾಕುಟ್ಟ ಮಾರ್ಗ ರಸ್ತೆ ಬದಿಯಲ್ಲಿರುವ ಮರಗಳನ್ನು ನಾಳೆಯಿಂದಲೇ ಕಡಿಯಬೇಕು ಎಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ ಸಚಿವರು ಮಧ್ಯದಲ್ಲಿ ಜಿಲ್ಲೆಗೆ ಆಗಮಿಸಿ ಈ ಮಾರ್ಗದ ರಸ್ತೆ ವೀಕ್ಷಣೆ ಮಾಡುತ್ತೇನೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.
ಮಡಿಕೇರಿ-ಮಾಣಿ-ಮಂಗಳೂರು ಮಾರ್ಗದಲ್ಲಿ ಗುಂಡಿ ಬಿದ್ದಿದ್ದು, ತಕ್ಷಣವೇ ಗುಂಡಿ ಮುಚ್ಚುವ ಕಾರ್ಯ ಮಾಡಲಾಗುವುದು. ಹಾಗೆಯೇ ರಸ್ತೆಯಲ್ಲಿಯೇ ನೀರು ಹೋಗುತ್ತಿದೆ. ಆದ್ದರಿಂದ ಚರಂಡಿ ಸರಿಪಡಿಸುವ ಕಾರ್ಯ ಕೈಗೆತ್ತಿಕೊಳ್ಳಲಾವುದು. ಮಳೆ ನೀರು ಚರಂಡಿಯಲ್ಲಿ ಹೋಗುವಂತಾಗಲು ಚರಂಡಿ ಸರಿಪಡಿಸುವ ಕಾರ್ಯವನ್ನು ಜುಲೈ ಮೊದಲ ವಾರದಲ್ಲಿ ಮಾಡಲಾಗುವುದು ಎಂದು ಲೋಕೋಪಯೋಗಿ ಸಚಿವರಾದ ಎಚ್.ಡಿ.ರೇವಣ್ಣ ಅವರು ತಿಳಿಸಿದರು. ಚೆನ್ನರಾಯಪಟ್ಟಣ, ಅರಕಲಗೂಡು, ಕೊಡ್ಲಿಪೇಟೆ, ಶನಿವಾರಸಂತೆ, ಸೋಮವಾರಪೇಟೆ, ಮಡಿಕೇರಿ ಮತ್ತು ವೀರಾಜಪೇಟೆ ಮಾರ್ಗದ ದ್ವಿಪಥ ರಸ್ತೆ ನಿರ್ಮಾಣಕ್ಕೆ ಟೆಂಡರ್ ಆಹ್ವಾನಿಸಲಾಗುವುದು ಎಂದು ಸಚಿವರು ತಿಳಿಸಿದರು.
ಶಿರಾಡಿ ಘಾಟ್ ರಸ್ತೆ ಜುಲೈ ಮೊದಲ ವಾರದಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದ್ದು, ಸಾರಿಗೆ -ಸಂಪರ್ಕಕ್ಕೆ ಅನುಕೂಲ ಮಾಡಲಾಗುವುದು. ಹಾಗೆಯೇ ಸೋಮವಾರಪೇಟೆ-ಸುಬ್ರಮಣ್ಯ ಮಾರ್ಗದ ರಸ್ತೆಯನ್ನು ಕೈಗೆತ್ತಿಕೊಳ್ಳಲಾಗುವುದು. ಲೋಕೋಪಯೋಗಿ ಇಲಾಖಾ ವ್ಯಾಪ್ತಿಯ ರಸ್ತೆ ಕಾಮಗಾರಿಗಳನ್ನು ಆದ್ಯತೆ ಮೇಲೆ ಕೈಗೆತ್ತಿಕೊಂಡು ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ಅವರು ಹೇಳಿದರು.
ಶಾಸಕರಾದ ಕೆ.ಜಿ.ಬೋಪಯ್ಯ ಅವರು ಮಾತನಾಡಿ, ಕಳೆದ 25 ವರ್ಷಗಳಲ್ಲಿಯೇ ಈ ಬಾರಿ ಒಂದು ವಾರದಲ್ಲಿ ತುಂಬಾ ಮಳೆಯಾಗಿದೆ. ಇದರಿಂದಾಗಿ ರಸ್ತೆಗಳು, ಸೇತುವೆಗಳು, ಮನೆಗಳು ಕುಸಿದಿವೆ, ಬೆಳೆ ಹಾನಿಯಾಗಿದೆ ಎಂದು ಅವರು ವಿವರಿಸಿದರು.
ಪೆರುಂಬಾಡಿ-ಮಾಕುಟ್ಟ ರಸ್ತೆ ಮಾರ್ಗ ಸುಮಾರು 60 ಕಡೆಗಳಲ್ಲಿ ಬರೆ ಕುಸಿದಿದೆ. ರಸ್ತೆ ಹದಗೆಟ್ಟಿದೆ. ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಗಳು 4 ಕೋಟಿ ರೂ ನಷ್ಟ ಉಂಟಾಗಿದೆ ಎಂದು ಅಂದಾಜು ಮಾಡಿದ್ದಾರೆ. ನಷ್ಟವಾಗಿರುವುದು ಇಷ್ಟೆಯೇ ಎಂದು ಕೆ.ಜಿ.ಬೋಪಯ್ಯ ಅವರು ಪ್ರಶ್ನಿಸಿದರು.
ಪೆರುಂಬಾಡಿ-ಮಾಕುಟ್ಟ ರಸ್ತೆಯನ್ನು ಮೇಲ್ದರ್ಜೆಗೇರಿಸಬೇಕು. ಸುಮಾರು 40 ಕೋಟಿ ರೂ ಪೆರುಂಬಾಡಿ-ಮಾಕುಟ್ಟ ರಸ್ತೆಗೆ ಬೇಕಿದೆ ಎಂದ ಶಾಸಕರು, ಮಡಿಕೇರಿ-ಸಂಪಾಜೆ ರಸ್ತೆಯ ಎರಡು ಬದಿ ಕಾಡು ಕಡಿಯಬೇಕು. ಸಂಪಾಜೆ ಮಾರ್ಗ ರಸ್ತೆಯೇ ಕಾಣುವುದಿಲ್ಲ, ಇದನ್ನು ಸರಿಪಡಿಸುವ ಕಾರ್ಯ ಮಾಡಬೇಕು ಎಂದು ಕೆ.ಜಿ.ಬೋಪಯ್ಯ ಅವರು ಸಚಿವರ ಗಮನಕ್ಕೆ ತಂದರು.
ಕೊಡಗು ಜಿಲ್ಲೆಯಲ್ಲಿ ಪ್ರತಿ ವರ್ಷ ಮಳೆಯಿಂದ ರಸ್ತೆಗಳು ಹದಗೆಡುವುದರಿಂದ ರಸ್ತೆಗಳ ಅಭಿವೃದ್ಧಿಗಾಗಿ ‘ವಿಶೇಷ ಪ್ಯಾಕೇಜ್’ ಪ್ರಕಟಿಸಬೇಕು ಎಂದು ಕೆ.ಜಿ.ಬೋಪಯ್ಯ ಅವರು ಇದೇ ಸಂದರ್ಭದಲ್ಲಿ ಸಚಿವರಲ್ಲಿ ಮನವಿ ಮಾಡಿದರು.
ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್ ಅವರು ಮಾತನಾಡಿ, ಕಳೆದ ವಾರ ಸುರಿದ ಧಾರಾಕಾರ ಮಳೆಗೆ ಜಿಲ್ಲೆಯ ರಸ್ತೆಗಳು ಹದಗೆಟ್ಟಿದ್ದು, ಸರಿಪಡಿಸಲು ಹೆಚ್ಚಿನ ಅನುದಾನ ಬಿಡುಗಡೆ ಮಾಡಬೇಕು ಎಂದು ಮನವಿ ಮಾಡಿದರು. ಚೆನ್ನರಾಯಪಟ್ಟಣ, ಅರಕಲಗೂಡು, ಕೊಡ್ಲಿಪೇಟೆ, ಶನಿವಾರಸಂತೆ, ಸೋಮವಾರಪೇಟೆ, ಮಡಿಕೇರಿ ಮತ್ತು ವಿರಾಜಪೇಟೆ ಮಾರ್ಗದ ದ್ವಿಪಥ ರಸ್ತೆ ನಿರ್ಮಾಣಕ್ಕೆ ಈ ಹಿಂದೆಯೇ ಸರ್ಕಾರದಿಂದ ಅನುಮೋದನೆ ದೊರೆತಿದ್ದು, ಈ ಕಾಮಗಾರಿಯನ್ನು ತ್ವರಿತವಾಗಿ ಆರಂಭಿಸಬೇಕಿದೆ ಎಂದು ಎಂ.ಪಿ.ಅಪ್ಪಚ್ಚುರಂಜನ್ ಅವರು ಸಚಿವರ ಗಮನಕ್ಕೆ ತಂದರು.
ವಿಧಾನ ಪರಿಷತ್ ಸದಸ್ಯರಾದ ಸುನಿಲ್ ಸುಬ್ರಮಣಿ ಅವರು ಮಾತನಾಡಿ ಅತಿವೃಷ್ಟಿಯಿಂದ ಪೆರುಂಬಾಡಿ-ಮಾಕುಟ್ಟ ರಸ್ತೆ ಕುಸಿದಿರುವುದನ್ನು ನೇರವಾಗಿ ವೀಕ್ಷಣೆ ಮಾಡಿದಾಗ ಮಾತ್ರ ಪರಿಸ್ಥಿತಿ ತಿಳಿಯಲಿದೆ. ಒಂದು ಬಾರಿ ಸ್ಥಳಕ್ಕೆ ಭೇಟಿ ನೀಡಬೇಕಾಗಿ ಲೋಕೋಪಯೋಗಿ ಸಚಿವರಲ್ಲಿ ಮನವಿ ಮಾಡಿದರು.
ಸದಸ್ಯರಾದ ವೀಣಾ ಅಚ್ಚಯ್ಯ ಅವರು ಜಿಲ್ಲೆಯಲ್ಲಿ ವ್ಯಾಪಕ ಮಳೆಯಿಂದಾಗಿ ನದಿ, ಕಾಲುವೆ, ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಇದರಿಂದ ಸಂಪರ್ಕಕ್ಕೆ ತುಂಬಾ ತೊಂದರೆಯಾಗಿದೆ. ಜಿಲ್ಲೆಯ ನಾನಾ ಕಡೆಗಳಲ್ಲಿ ಮರಗಳನ್ನು ಕಟ್ಟಿಕೊಂಡು ನದಿ ದಾಟುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಕಡೆಗಳಲ್ಲಿ ತೂಗು ಸೇತುವೆ ನಿರ್ಮಾಣ ಮಾಡಬೇಕು ಎಂದು ಸಚಿವರ ಗಮನಕ್ಕೆ ತಂದರು. ಜಿ.ಪಂ.ಅಧ್ಯಕ್ಷರಾದ ಬಿ.ಎ.ಹರೀಶ್, ಉಪಾಧ್ಯಕ್ಷರಾದ ಲೋಕೇಶ್ವರಿ ಗೋಪಾಲ್ ರಸ್ತೆಗಳನ್ನು ಸರಿಪಡಿಸಲು ಹೆಚ್ಚಿನ ಅನುದಾನ ಬಿಡುಗಡೆ ಮಾಡಬೇಕು ಎಂದು ಅವರು ಮನವಿ ಮಾಡಿದರು.
ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉಂಟಾಗಿರುವ ಹಾನಿ ಬಗ್ಗೆ ಮಾಹಿತಿ ನೀಡಿದರು. ಲೋಕೋಪಯೋಗಿ ಇಂಜಿನಿಯರ್ ವಿನಯ ಕುಮಾರ್ ಅವರು ಪೆರುಂಬಾಡಿ-ಮಾಕುಟ್ಟ ರಸ್ತೆ ದುರಸ್ತಿ ಬಗ್ಗೆ ಮಾಹಿತಿ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್, ಜಿ.ಪಂ.ಸಿಇಒ ಪ್ರಶಾಂತ್ ಕುಮಾರ್ ಮಿಶ್ರ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಗಳು, ವಿವಿಧ ಇಲಾಖಾ ಅಧಿಕಾರಿಗಳು ಹಾಜರಿದ್ದರು.