ಬೆಂಗಳೂರು: ಪತ್ನಿಯ ಉಸಿರುಗಟ್ಟಿಸಿ ಕೊಲೆಗೈದ ಪತಿ

Update: 2018-06-20 13:57 GMT

ಬೆಂಗಳೂರು, ಜೂ.20: ಕ್ಷುಲ್ಲಕ ಕಾರಣಕ್ಕೆ ದಂಪತಿ ನಡುವಿನ ಜಗಳ ವಿಕೋಪಕ್ಕೆ ತಿರುಗಿ ಪತ್ನಿಯನ್ನು ಪತಿ ಉಸಿರುಗಟ್ಟಿಸಿ ಕೊಲೆಗೈದು ಪರಾರಿಯಾಗಿರುವ ಘಟನೆ ಇಲ್ಲಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಓರಿಸ್ಸಾ ಮೂಲದ ಮಾಲತಿ(38) ಕೊಲೆಯಾದ ಮಹಿಳೆ ಎಂದು ಪೊಲೀಸರು ತಿಳಿಸಿದ್ದು, ಕೃತ್ಯವೆಸಗಿ ಪರಾರಿಯಾಗಿರುವ ಪತಿ ಬಾಪಿ ಎಂಬಾತನ ಪತ್ತೆಗಾಗಿ ತನಿಖೆ ಕೈಗೊಳ್ಳಲಾಗಿದೆ.

ಬಾಪಿ ಮತ್ತು ಮಾಲತಿ ದಂಪತಿ ಕೆಲ ವರ್ಷಗಳಿಂದ ಕಾವೇರಿಪುರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ದಂಪತಿ ನಡುವೆ ಕ್ಷುಲ್ಲಕ ಕಾರಣಕ್ಕೆ ಆಗಾಗ ಜಗಳ ನಡೆಯುತ್ತಿತ್ತು, ಇದನ್ನು ನೋಡಿದ ಮನೆ ಮಾಲಕರು ಮನೆ ಖಾಲಿ ಮಾಡಲು ಸೂಚಿಸಿದ್ದರು. ಈ ವಿಚಾರಕ್ಕೆ ಉಂಟಾದ ಇಬ್ಬರ ನಡುವಿನ ಜಗಳ ತಾರಕಕ್ಕೇರಿದ ಹಿನ್ನೆಲೆಯಲ್ಲಿ ಪತ್ನಿ ಮಾಲತಿಯನ್ನು ಬಾಪಿ ಉಸಿರುಗಟ್ಟಿಸಿ ಹತ್ಯೆಗೈದಿದ್ದಾನೆ ಎನ್ನಲಾಗಿದೆ.

ಬಳಿಕ ಆಕೆ ಮಲಗಿದ್ದಾರೆ ಎನ್ನುವಂತೆ ಆಕೆಯ ಮೇಲೆ ಬಟ್ಟೆ ಹೊದಿಸಿ, ಮನೆಗೆ ಬೀಗ ಹಾಕಿಕೊಂಡು ಪರಾರಿಯಾಗಿದ್ದಾನೆ. ಸ್ಥಳೀಯ ವ್ಯಕ್ತಿಯೊಬ್ಬರು ಆರೋಪಿ ಬಾಪಿ ಮನೆ ಬಳಿ ಹೋದಾಗ ಈ ವಿಚಾರ ಬೆಳಕಿಗೆ ಬಂದಿದೆ.

ಘಟನೆ ಬಳಿಕ ಕಾಮಾಕ್ಷಿಪಾಳ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ತಲೆಮರೆಸಿಕೊಂಡಿರುವ ಆರೋಪಿ ಪತ್ತೆಗೆ ವಿಶೇಷ ತಂಡ ರಚನೆ ಮಾಡಲಾಗಿದ್ದು, ಶೋಧಕಾರ್ಯ ಮುಂದುವರೆದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News