×
Ad

ಪುನರ್ವಸತಿ ಕೇಂದ್ರಗಳ ಗಿರಿಜನರಿಗೆ ಅಗತ್ಯ ಸೌಲಭ್ಯ ಕಲ್ಪಿಸಿ: ಕೊಡಗು ಜಿಲ್ಲಾಧಿಕಾರಿ ಶ್ರೀವಿದ್ಯಾ ಸೂಚನೆ

Update: 2018-06-25 23:33 IST

ಮಡಿಕೇರಿ, ಜೂ.25: ಸೋಮವಾರಪೇಟೆ ತಾಲೂಕಿನ ಬಸವನಹಳ್ಳಿ ಮತ್ತು ಬ್ಯಾಡಗೊಟ್ಟ ಪುನರ್ವಸತಿ ಕೇಂದ್ರಗಳಲ್ಲಿ ವಾಸಿಸುತ್ತಿರುವ ಗಿರಿಜನ ಕುಟುಂಬಗಳಿಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಶೀಘ್ರ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ನಿರ್ದೇಶನ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬಸವನಹಳ್ಳಿ ಮತ್ತು ಬ್ಯಾಡಗೊಟ್ಟ ಪುನರ್ವಸತಿ ಕೇಂದ್ರಗಳಲ್ಲಿ ವಾಸವಿರುವ ಗಿರಿಜನರ ಕಟುಂಬಗಳಿಗೆ ಒದಗಿಸಲಾಗುತ್ತಿರುವ ಮೂಲಭೂತ ಸೌಕರ್ಯಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಬಸವನಹಳ್ಳಿ ಮತ್ತು ಬ್ಯಾಡಗೊಟ್ಟ ಪುನರ್ವಸತಿ ಕೇಂದ್ರಗಳಲ್ಲಿ ತಾತ್ಕಾಲಿಕ ಶೌಚಾಲಯಕ್ಕೆ ನಿರ್ಮಿಸಿರುವ ಪಿಟ್‍ಗುಂಡಿಗಳು ಮಳೆಯ ನೀರಿನಿಂದ ಬೇಗನೆ ತುಂಬುತ್ತಿದ್ದು, ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಮುಂಚೆಯೇ ಪ್ರತಿ 5 ದಿನಗಳಿಗೊಮ್ಮೆ ಗುಂಡಿಗಳನ್ನು ಸ್ವಚ್ಚಗೊಳಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಬಸವನಹಳ್ಳಿಯ 101 ಮತ್ತು ಬ್ಯಾಡಗೊಟ್ಟದ 99 ಮನೆಗಳ ಕಾಮಗಾರಿ ಪೂರ್ಣಗೊಳ್ಳುವ ಹಂತದಲ್ಲಿದ್ದು, ಅವುಗಳನ್ನು ಒಂದು ತಿಂಗಳ ಅವಧಿಯೊಳಗೆ ಮುಕ್ತಾಯಗೊಳಿಸುವಂತೆ ಜಿಲ್ಲಾಧಿಕಾರಿ ನಿರ್ಮಿತಿ ಕೇಂದ್ರದ ಅಧಿಕಾರಿಗಳಿಗೆ ಸೂಚಿಸಿದರು. ಪುನರ್ವಸತಿ ಕೇಂದ್ರಗಳಲ್ಲಿ ವಾಸಿಸುವ ಕುಟುಂಬಗಳಿಗೆ ಆಧಾರ್ ಕಾರ್ಡ್, ಪಡಿತರ ಚೀಟಿ, ಚುನಾವಣಾ ಗುರುತಿನ ಚೀಟಿ ಜಾತಿ ಪ್ರಮಾಣ ಪತ್ರ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ತ್ವರಿತಗತಿಯಲ್ಲಿ ಮಾಡಿಕೊಡುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.

ಜಿ.ಪಂ.ಸಿಇಒ ಪ್ರಶಾಂತಕುಮಾರ್ ಮಿಶ್ರ ಮಾತನಾಡಿ, ಕೌಶಲ್ಯ ಅಭಿವೃದ್ಧಿ ಯೋಜನೆಯಡಿ ಸ್ವ ಉದ್ಯೋಗ ಪಡೆಯುವಂತಾಗಲು ಅಲ್ಲಿ ವಾಸಿಸುವ ಕಟುಂಬ ಸದಸ್ಯರ ಹೆಸರು ನೋಂದಾಯಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಐಟಿಡಿಪಿ ಇಲಾಖೆ ಅಧಿಕಾರಿಗಳಿಗೆ ಸಲಹೆ ಮಾಡಿದರು.

ಪುನರ್ವಸತಿ ಕೇಂದ್ರಗಳ ಮೂಲ ಸೌಕರ್ಯಕ್ಕೆ ಸಂಬಂಧಿಸಿದಂತೆ ಉಪ ವಿಭಾಗಾಧಿಕಾರಿ ರಮೇಶ್ ಪಿ.ಕೋನರೆಡ್ಡಿ, ಐಟಿಡಿಪಿ ಇಲಾಖೆ ಅಧಿಕಾರಿ ಶಿವಕುಮಾರ್, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಾದ ಸಚೀನ್ ಹಲವು ಮಾಹಿತಿಯನ್ನು ನೀಡಿದರು.

ಸಭೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕರಾದ ಪುಟ್ಟಸ್ವಾಮಿ, ಸೆಸ್ಕ್ ಎಂಜಿನಿಯರ್ ಸೋಮಶೇಖರ್, ಕುಶಾಲನಗರ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಶ್ರೀಧರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಇತರರು ಹಾಜರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News