‘ಬೇಡಿಕೆ ಈಡೇರುವವರೆಗೂ ಜಾಗ ಬಿಟ್ಟು ಕದಲುವುದಿಲ್ಲ’
ಬೆಂಗಳೂರು, ಜೂ.29: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘ ನಗರದ ಸ್ವಾತಂತ್ರ ಉದ್ಯಾನದಲ್ಲಿ ನಡೆಸುತ್ತಿರುವ ಹೋರಾಟ ಮೂರನೆ ದಿನ ಪೂರೈಸಿ, ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.
ನಮಗೆ ಆಶ್ವಾಸನೆ ಬೇಡ, ಆದೇಶ ಹೊರಡಿಸಬೇಕು, ಅಲ್ಲಿಯವರೆಗೂ ರಾಜಧಾನಿ ಬೆಂಗಳೂರಿನ ಸ್ವಾತಂತ್ರ ಉದ್ಯಾನವನದಲ್ಲೇ ಇರುತ್ತೇವೆ ಎಂದು ಹೋರಾಟಗಾರರು ಪಟ್ಟು ಹಿಡಿದಿದ್ದಾರೆ. ಹೀಗಾಗಿ, ಅನಿರ್ದಿಷ್ಟಾವಧಿ ಹೋರಾಟ ಮುಂದುವರೆಸಿದ್ದಾರೆ.
ಈ ಬಗ್ಗೆ ಸಂಘದ ಅಧ್ಯಕ್ಷ ನಿತ್ಯಾನಂದಸ್ವಾಮಿ ಮಾತನಾಡಿ, ಹೋರಾಟಗಾರರನ್ನು ಕರೆಯಿಸಿ ಈಗಾಗಲೇ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ. ಹೊರಗುತ್ತಿಗೆ ನೌಕರರನ್ನು ಕೆಲಸದಿಂದ ತೆಗೆದು ಹಾಕುವುದನ್ನು ಕೂಡಲೇ ನಿಲ್ಲಿಸುವ ಕುರಿತು ಇಲಾಖೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದರು.
ಹಾಸ್ಟೆಲ್ ನೌಕರರಿಗೆ ಸಮಾಜಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಇಬ್ಬರು ಸಚಿವರಿದ್ದಾರೆ. ಮೂರು ದಿನಗಳಿಂದ ಹೋರಾಟ ಮಾಡುತ್ತಿದ್ದರೂ ಒಬ್ಬರೂ ಸಮಸ್ಯೆ ಬಗೆಹರಿಸುವ ಪ್ರಯತ್ನ ಮಾಡಿಲ್ಲ. ಆದ್ದರಿಂದ ಸರಕಾರದಿಂದ ಆದೇಶ ಹೊರಡಿಸುವವರೆಗೂ ಜಾಗ ಬಿಟ್ಟು ಕದಲುವುದಿಲ್ಲ ಎಂದು ತಿಳಿಸಿದರು.