×
Ad

ಸೈಂಟ್ ಮೇರಿಸ್ ದ್ವೀಪದಲ್ಲಿ ಪ್ಲೋಟಿಂಗ್ ಜೆಟ್ಟಿ: ಉಡುಪಿ ಜಿಲ್ಲಾಧಿಕಾರಿ

Update: 2018-07-03 22:57 IST

ಉಡುಪಿ, ಜು.3: ಮಲ್ಪೆಯಿಂದ ಸೈಂಟ್ ಮೇರಿಸ್ ದ್ವೀಪಕ್ಕೆ ತೆರಳುವ ಪ್ರವಾಸಿಗರಿಗೆ, ದ್ವೀಪದಲ್ಲಿ ಇಳಿಯಲು ಅನುಕೂಲವಾಗುವಂತೆ 2.26 ಕೋಟಿ ರೂ. ವೆಚ್ಚದಲ್ಲಿ ಸಮುದ್ರದಲ್ಲಿ ಪ್ಲೋಟಿಂಗ್ (ತೇಲುವ) ಜೆಟ್ಟಿಯೊಂದನ್ನು ನಿರ್ಮಾಣ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಹೇಳಿದ್ದಾರೆ.

ಮಂಗಳವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಪ್ರಸ್ತುತ ಮಲ್ಪೆ ಜೆಟ್ಟಿಯಿಂದ ಹೊರಡುವ ದೊಡ್ಡ ಬೋಟ್‌ನಲ್ಲಿ ಸೈಂಟ್ ಮೇರಿಸ್ ದ್ವೀಪದಿಂದ ಸುಮಾರು 150 ಮೀ. ಹಿಂದೆಯೇ ದೊಡ್ಡ ಬೋಟ್ ನಿಂದ ಸಣ್ಣ ದೋಣಿಗಳಿಗೆ ಪ್ರಯಾಣಿಕರನ್ನು ಇಳಿಸಿ ದ್ವೀಪ ತಲುಪಿಸಲಾಗುತ್ತಿದೆ. ಮಕ್ಕಳು, ವೃದ್ದರೂ ಸೇರಿದಂತೆ ಪ್ರಯಾಣಿಕರನ್ನು ಹೀಗೆ ಸಮುದ್ರ ಮಧ್ಯೆಯೇ ಬೋಟ್‌ನಿಂದ ವರ್ಗಾಯಿಸುವುದು ಅಪಾಯಕಾರಿಯಾಗಿದ್ದು, ಈ ನಿಟ್ಟಿನಲ್ಲಿ ದ್ವೀಪದ ಬಳಿ 2.26 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಪ್ಲೋಟಿಂಗ್ ಜೆಟ್ಟಿ ನಿರ್ಮಿಸಲು ಪ್ರಸ್ತಾವನೆ ತಯಾರಿಸಲಾಗಿದೆ. ಮಳೆಗಾಲದ ಸಮಯದಲ್ಲಿ ಈ ಜೆಟ್ಟಿಯನ್ನು ಸುಲಭವಾಗಿ ಬಿಚ್ಚಿಡಲು ಸಾಧ್ಯವಾಗುವಂತೆ ಜೆಟ್ಟಿ ನಿರ್ಮಾಣ ಕಾಮಗಾರಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ವಿವರಿಸಿದರು.

ಮಲ್ಪೆ ಬೀಚ್‌ನಲ್ಲಿ ಈಗಾಗಲೇ ಪೊಲೀಸ್ ಇಲಾಖೆಯಿಂದ ನಿಗದಿ ಪಡಿಸಲಾಗಿರುವ ಸ್ಥಳದಲ್ಲಿ ಸಿಸಿಟಿವಿ ಅಳವಡಿಸುವಂತೆ ಹಾಗೂ ಶೆಲ್ಟರ್ ಹಾಗೂ ವಾಚ್ ಟವರ್ ನಿರ್ಮಿಸುವಂತೆ ಕೆಆರ್‌ಐಡಿಎಲ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆಗಳನ್ನು ನೀಡಿದರು.

ತ್ರಾಸಿ-ಮರವಂತೆಯಲ್ಲಿ ಸಮುದ್ರಕ್ಕೆ ತಾಗಿ ರಸ್ತೆ ಬದಿಯಲ್ಲಿದ್ದ ಗೂಡಂಗಡಿ ಗಳನ್ನು ಈಗಾಗಲೇ ತೆರವುಗೊಳಿಸಲಾಗಿದ್ದು ಈ ಪ್ರದೇಶದಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ ಸುಮಾರು 20 ಅಂಗಡಿಗಳನ್ನು ನಿರ್ಮಿಸಿ, ಹಿಂದೆ ಅಂಗಡಿ ತೆರವುಗೊಳಿಸಿರುವವರಿಗೆ ನೀಡುವಂತೆ ಜಿಲ್ಲಾಧಿಕಾರಿ ಸೂಚಿಸಿದರು. ತ್ರಾಸಿ ಯಲ್ಲಿರುವ ಪ್ರವಾಸೋದ್ಯಮ ಇಲಾಖೆಯ ವಸತಿಗೃಹವನ್ನು ಪಾರಂಪರಿಕ ರೀತಿಯಲ್ಲಿ ಆಕರ್ಷಕವಾಗಿ ನವೀಕರಣಗೊಳಿಸುವ ಕುರಿತಂತೆ ಪ್ರಸ್ತಾವನೆ ಸಲ್ಲಿಸುವಂತೆ ನಿರ್ಮಿತಿ ಕೇಂದ್ರದ ಅಧಿಕಾರಿಗಳಿಗೆ ಹಾಗೂ ತ್ರಾಸಿ ಸಮುದ್ರ ತೀರದಲ್ಲಿ ವಾಚ್ ಟವರ್ ನಿರ್ಮಿಸುವಂತೆ ಹಾಗೂ ಲೈಟಿಂಗ್ ವ್ಯವಸ್ಥೆ ಕುರಿತು ಪರಿಶೀಲಿಸುವಂತೆ ಕೆಆರ್‌ಐಡಿಎಲ್ ಅಧಿಕಾರಿಗಳಿಗೆ ಸೂಚಿಸಿದರು.

ತ್ರಾಸಿ ಮರವಂತೆಯಲ್ಲಿ ಪ್ರವಾಸೋದ್ಯಮ ಇಲಾಖೆಯ ಜಾಗವನ್ನು ಗುರುತಿಸಿ ಬೇಲಿ ಅಳವಡಿಸುವಂತೆ ಹಾಗೂ ಯಾತ್ರಿ ನಿವಾಸ ನಿರ್ಮಿಸುವ ಕುರಿತು ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ತಿಳಿಸಿದರು.

ಜಿಲ್ಲೆಯಲ್ಲಿ ಈಗಾಗಲೇ 2 ಹೌಸ್ ಬೋಟ್‌ಗಳಿಗೆ ಅನುಮೋದನೆ ನೀಡಲಾಗಿದ್ದು, ಹೊಸದಾಗಿ 5 ಹೌಸ್ ಬೋಟ್‌ಗಳಿಗೆ ಅನುಮತಿ ಕೋರಿರುವ ಕುರಿತಂತೆ ಚರ್ಚೆ ನಡೆಯಿತು. ಹೌಸ್ ಬೋಟ್‌ಗಳ ಸಂಖ್ಯೆ ನದಿಯಲ್ಲಿ ಹೆಚ್ಚಾಗದಂತೆ ಪರಿಶೀಲಿಸಿ ಅನುಮತಿ ನೀಡುವಂತೆ ಹಾಗೂ ಹೌಸ್ ಬೋಟ್ ಗಳ ನಿರ್ವಹಣೆ ಕುರಿತಂತೆ ಪ್ರತ್ಯೇಕ ನಿಯಮಗಳನ್ನು ರೂಪಿಸುವಂತೆ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಪಡುಬಿದ್ರೆ ಬೀಚ್‌ಗೆ ಬ್ಲೂ ಫ್ಲಾಗ್ ಸರ್ಟಿಫಿಕೇಷನ್ ನೀಡುವ ಕುರಿತಂತೆ ಕೈಗೊಳ್ಳಬೇಕಾದ ಕ್ರಮಗಳ ಕುರಿತಂತೆ ಕಾರ್ಯ ನಿರ್ವಹಿಸಲು ಉಪ ಸಮಿತಿ ಯನ್ನು ಜಿಲ್ಲಾಧಿಕಾರಿ ರಚಿಸಿದರು. ಕಾರ್ಕಳದ ಕೋಟಿ ಚೆನ್ನಯ್ಯ ಥೀಂ ಪಾರ್ಕ್ ನಲ್ಲಿ ಜಿಲ್ಲೆಯ ಪ್ರವಾಸೋದ್ಯಮವನ್ನು ಬಿಂಬಿಸುವಂಥ ಆಕರ್ಷಕ ಉದ್ಯಾನವನ ನಿರ್ಮಿಸುವ ಕುರಿತಂತೆ ಸಭೆಯಲ್ಲಿ ಚರ್ಚೆ ನಡೆಯಿತು.

ಜಿಲ್ಲೆಯಲ್ಲಿ ಸರ್ಫಿಂಗ್ ಕ್ರೀಡೆಗೆ ಉತ್ತೇಜನ ನೀಡುವ ಕುರಿತಂತೆ, ಸೆ.29 ಮತ್ತು 30ರಂದು ಪಡುಕೆರೆಯಲ್ಲಿ ರಾಜ್ಯಮಟ್ಟದ ಸರ್ಫಿಂಗ್ ಸ್ಪರ್ಧೆ ನಡೆಸುವ ಕುರಿತು ಸಭೆಯಲ್ಲಿ ತೀರ್ಮಾನಿಸಲಾಯಿತು. ಸೋಷಿಯಲ್ ಮೀಡಿಯಾಗಳಲ್ಲಿ ಜಿಲ್ಲೆಯ ಪ್ರವಾಸೋದ್ಯಮವನ್ನು ಉತ್ತೇಜಿಸುವ ಕುರಿತಂತೆಯೂ ಚರ್ಚೆ ನಡೆಯಿತು.

ಜಿಲ್ಲೆಯಲ್ಲಿ ಪ್ರವಾಸೋದ್ಯಮವನ್ನು ವ್ಯವಸ್ಥಿತ ರೀತಿಯಲ್ಲಿ ಅಭಿವೃದ್ದಿ ಪಡಿಸುವ ಕುರಿತಂತೆ, ಹೋಂ ಸ್ಟೇ ಮಾಲಕರು, ಹೌಸ್ ಬೋಟ್ ಮಾಲಕರು, ಬೀಚ್ ಟೆಂಡರ್‌ದಾರರು ಹಾಗೂ ಪ್ರವಾಸೋದ್ಯಮದಲ್ಲಿ ತೊಡಗಿರುವ ಎಲ್ಲರಿಗೂ ತರಬೇತಿ ನೀಡುವ ಕುರಿತೂ ಜಿಲ್ಲಾಧಿಕಾರಿ ಸೂಚನೆಗಳನ್ನು ನೀಡಿದರು.

ಸಭೆಯಲ್ಲಿ ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶಿವಾನಂದ ಕಾಪಶಿ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕಿ ಅನಿತಾ, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಪ್ರವಾಸೋದ್ಯಮ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News