×
Ad

ಬೆಂಗಳೂರು: ಕನಿಷ್ಠ ವೇತನ ನೀಡುವಂತೆ ಒತ್ತಾಯಿಸಿ ಧರಣಿ

Update: 2018-07-10 18:53 IST

ಬೆಂಗಳೂರು, ಜು.10: ಕನಿಷ್ಠ ವೇತನ 18 ಸಾವಿರ ರೂ. ಸೇರಿದಂತೆ ನಾನಾ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಪ್ರತಿಭಟನೆ ನಡೆಸಿದರು.

ಮಂಗಳವಾರ ನಗರದ ಪುರಭವನದ ಎದುರು ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಶನ್ ನೇತೃತ್ವದಲ್ಲಿ ಜಮಾಯಿಸಿದ ಸದಸ್ಯರು, ಸಮಾನ ಕೆಲಸಕ್ಕೆ ಸಮಾನ ವೇತನ ದೊರೆಯುವಂತೆ ಆಗಬೇಕು ಎಂದು ಮನವಿ ಮಾಡಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಫೆಡರೇಷನ್ ಅಧ್ಯಕ್ಷ ಎನ್.ಶಿವಣ್ಣ, ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿಕೊಂಡಿರುವಂತೆ ಎಲ್ಲ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರನ್ನು ಖಾಯಂಗೊಳಿಸಿ, ನಿವೃತ್ತಿ ವೇತನ ನೀಡಬೇಕು ಎಂದು ಆಗ್ರಹಿಸಿದರು.

ರಾಜ್ಯ ವ್ಯಾಪ್ತಿಯಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳು ಎಲ್‌ಕೆಜಿ ಹಾಗೂ ಯುಕೆಜಿ ಶಾಲೆಗಳನ್ನು ತೆರೆದಿದ್ದು, ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಲಿ ಜವಾಬ್ದಾರಿಯನ್ನು ವಹಿಸಿ ತರಬೇತಿ ನೀಡಬೇಕು ಎಂದ ಅವರು, ಬಹುತೇಕ ಖಾಸಗಿ ಸಂಸ್ಥೆಗಳು ನಿಯಮಗಳನ್ನು ಉಲ್ಲಂಘನೆ ಮಾಡಿದ್ದು, ಈ ಸಂಬಂಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರನ್ನು ಖಾಯಂಗೊಳಿಸಿ ಸಿ ಮತ್ತು ಡಿ ದರ್ಜೆ ನೌಕರರ ಸೌಲಭ್ಯ ನೀಡಬೇಕು. ಅಂಗನವಾಡಿ ಮಹಿಳೆಯರಿಗೆ ಸೇವಾವಧಿ ಆಧಾರದಲ್ಲಿ ಗೋವಾ ರಾಜ್ಯದ ಮಾದರಿಯಲ್ಲಿ ಗೌರವಧನ, ವೇತನ ಹೆಚ್ಚಿಸಬೇಕು. ಅದೇ ರೀತಿ, ನಿವೇಶನ ರಹಿತರಿಗೆ ವಸತಿ ಸೌಲಭ್ಯ ದೊರಕಿಸಿಕೊಡಬೇಕು ಎಂದು ಮನವಿ ಮಾಡಿದರು.

ಪ್ರಧಾನ ಕಾರ್ಯದರ್ಶಿ ಎಂ.ಜಯಮ್ಮ ಮಾತನಾಡಿ, ಸಾಮಾಜಿಕ ಭದ್ರತಾ ಯೋಜನೆಗಳಿಂದ ಇಎಸ್‌ಐ ಭವಿಷ್ಯನಿಧಿ ಗ್ರಾಚ್ಯುಟಿ ಜಾರಿಗೊಳಿಸಿ ಪ್ರತಿ ತಿಂಗಳು ಅಂಗನವಾಡಿ ಕೇಂದ್ರಗಳ ಬಾಡಿಗೆ ಮತ್ತು ಕಾರ್ಯಕರ್ತೆಯರು ಮತ್ತು ಸಹಾಯಕಿಯರ ವೇತನವನ್ನು ಪಾವತಿಸಬೇಕು. ಗೌರವ ಧನ ಹೆಚ್ಚಳ ಮಾಡಬೇಕು. ಮಿನಿ ಅಂಗನವಾಡಿ ಕೇಂದ್ರಗಳಿಗೆ ಸಹಾಯಕಿಯರನ್ನು ತುರ್ತಾಗಿ ನೇಮಿಸಿ, ಮಾತೃಪೂರ್ಣ ಯೋಜನೆ ಯಶಸ್ವಿಯಾಗಿ ಜಾರಿ ಮಾಡಬೇಕು ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News