ಜನಸಂಖ್ಯಾ ನಿಯಂತ್ರಣದ ಬಗ್ಗೆ ಅರಿವು ಅತ್ಯಗತ್ಯ: ಚಿಕ್ಕಮಗಳೂರು ಜಿಪಂ ಅಧ್ಯಕ್ಷೆ ಸುಜಾತಾ ಕೃಷ್ಣಪ್ಪ

Update: 2018-07-11 18:21 GMT

ಚಿಕ್ಕಮಗಳೂರು, ಜು.11: ವಿಶ್ವದಲ್ಲಿಯೇ ಭಾರತ ಹೆಚ್ಚು ಜನಸಂಖ್ಯೆ ಹೊಂದಿದೆ. ಇದರ ನಿಯಂತ್ರಣಕ್ಕೆ ಜನಸಾಮಾನ್ಯರಲ್ಲಿ ಅರಿವು ಮೂಡಿಸುವುದು ಅತ್ಯಗತ್ಯ ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸುಜಾತಾ ಕೃಷ್ಣಪ್ಪ ಅಭಿಪ್ರಾಯಿಸಿದರು.

ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿವಿಧ ನರ್ಸಿಂಗ್ ಶಾಲೆಗಳು ಹಾಗೂ ಪ್ಯಾರಾಮೆಡಿಕಲ್ ಕಾಲೇಜುಗಳು ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ವಿಶ್ವಜನಸಂಖ್ಯಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜನಸಂಖ್ಯೆ ಹೆಚ್ಚಳದಿಂದಾಗಿ ದೇಶದ ಅಭಿವೃದ್ಧಿ ಕುಠಿತವಾಗುವುದರ ಜೊತೆಗೆ ಬಡತನ, ಆರ್ಥಿಕ ಸಮಸ್ಯೆ ಸೇರಿದಂತೆ ಮತ್ತಿತರ ತೊಂದರೆಗಳು ಎದುರಾಗುತ್ತಿವೆ. ಈ ಹಿನ್ನೆಲೆಯಲ್ಲಿ ಜನಸಂಖ್ಯೆ ನಿಯಂತ್ರಣಕ್ಕೆ ಕಡಿವಾಣ ಹಾಕಬೇಕಾಗಿದೆ ಎಂದ ಅವರು, ಮೂಡನಂಬಿಕೆ, ಬಾಲ್ಯವಿವಾಹ, ಮತ್ತಿತರ ಮೌಢ್ಯಾಚರಣೆಗಳು ಜನಸಂಖ್ಯೆ ಹೆಚ್ಚಳಕ್ಕೆ ಕಾರಣವಾಗಿದ್ದು, ಜನಸಂಖ್ಯ ನಿಯಂತ್ರಣಕ್ಕೆ ಕುಟುಂಬ ಕಲ್ಯಾಣ ಯೋಜನೆ ಬಗ್ಗೆ ಆರೋಗ್ಯ ಇಲಾಖೆ ಜನರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ. ಗ್ರಾಮೀಣ ಪ್ರದೇಶದಲ್ಲಿ ಜನಸಂಖ್ಯೆ ನಿಯಂತ್ರಣದ ಬಗ್ಗೆ ಆಶಾ ಕಾರ್ಯಕರ್ತರು ಮತ್ತು ಆರೋಗ್ಯ ಇಲಾಖೆ ಹೆಚ್ಚಿನ ಒತ್ತುನೀಡಿ ಜಾಗ್ರತಿ ಮೂಡಿಸಲು ಮುಂದಾಗಬೇಕೆಂದರು.

ಶಿಕ್ಷಣ ಹಾಗೂ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಆರ್.ಜೆಸಿಂತಾ ಅನಿಲ್ ಕುಮಾರ್ ಮಾತನಾಡಿ, ಶಿಕ್ಷಣದಿಂದ ಸಮಾಜದಲ್ಲಿ ಬದಲಾವಣೆ ಕಾಣಲು ಸಾಧ್ಯ. ಇದರ ಜೊತೆಗೆ ಜನಸಂಖ್ಯೆ ನಿಯಂತ್ರಣವಾಗಲಿದೆ ಎಂದ ಅವರು, ಜನಸಂಖ್ಯಾ ನಿಯಂತ್ರಣದ ಅರಿವು ಮೂಡಿಸುವ ಕಾರ್ಯ ಒಂದು ದಿನಕ್ಕೆ ಸೀಮಿತವಾಗದೆ ನಿರಂತರವಾಗಿರಬೇಕು ಎಂದರು.

ಜಿಲ್ಲಾ ಪಂಚಾಯತ್ ಸದಸ್ಯ ರವೀಂದ್ರ ಬೆಳವಾಡಿ ಮಾತನಾಡಿ, ಜನಸಂಖ್ಯೆ ಸ್ಪೋಟದಿಂದ ಆಗುವ ಅನಾನುಕೂಲವನ್ನು ಮುಂದಿಟ್ಟುಕೊಂಡು ವಿಶ್ವ ಜನಸಂಖ್ಯೆ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಆಚರಣೆಯ ಹಿಂದಿರುವ ಉದ್ದೇಶ ಮನದಟ್ಟು ಮಾಡಿಕೊಂಡು ಅದರಂತೆ ನಡೆದದ್ದೆ ಆದರೆ ಜನಸಂಖ್ಯೆ ನಿಯಂತ್ರಣಕ್ಕೆ ತರಲು ಸಾಧ್ಯ ಎಂದರು.

ತಾಲೂಕು ಪಂಚಾಯತ್ ಅಧ್ಯಕ್ಷ ಜಯಣ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ನಗರದ ಎಸ್.ಟಿ.ಜೆ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಭಾರತಿ ಜೆ.ಕೆ. ಜನಸಂಖ್ಯೆ ಸ್ಪೋಟ ವಿಷಯದ ಬಗ್ಗೆ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಸರ್ಜನ್ ಡಾ.ದೊಡ್ಡಮಲ್ಲಪ್ಪ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ಅಶ್ವತ್‍ಬಾಬು, ಡಾ.ಎಸ್.ಜಿ. ಕಿರಣ್ ಸೇರಿದಂತೆ ಇತ್ತರರು ಇದ್ದರು.

ಕಾರ್ಯಕ್ರಮಕ್ಕೂ ಮುನ್ನ ನಗರ ತಾಲೂಕು ಕಚೇರಿ ಆವರಣದಿಂದ ಡಾ.ಬಿ.ಆರ್ ಅಂಬೇಡ್ಕರ್ ಭವನದವರೆಗೂ  ವಿಶ್ವಜನಸಂಖ್ಯಾ ದಿನಾಚರಣೆ ಬಗ್ಗೆ  ಜನರಲ್ಲಿ ಜಾಗೃತಿ ಮೂಡಿಸಲು ಜಾಥಾಕ್ಕೆ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸುಜಾತಾ ಕೃಷ್ಟಪ್ಪ ಚಾಲನೆ ನೀಡಿದರು. ಆರೋಗ್ಯ ಶಿಕ್ಷಣಾಧಿಕಾರಿ ಜಲಜಾಕ್ಷಿ ಕಾರ್ಯಕ್ರಮವನ್ನು ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News