ವಿಶ್ವ ಜನಸಂಖ್ಯಾ ದಿನಾಚರಣೆ: ಜನಸಂಖ್ಯೆ ನಿಯಂತ್ರಣಕ್ಕೆ ಕೊಡಗು ಜಿ.ಪಂ ಅಧ್ಯಕ್ಷ ಬಿ.ಎ.ಹರೀಶ್ ಕರೆ

Update: 2018-07-11 18:33 GMT

ಮಡಿಕೇರಿ, ಜು.11: ಸಾಮಾಜಿಕ ಮತ್ತು ಆರ್ಥಿಕ ಸಮಸ್ಯೆಗಳ ನಿವಾರಣೆಗೆ ಜನಸಂಖ್ಯೆಯನ್ನು ನಿಯಂತ್ರಿಸುವುದು ಅನಿವಾರ್ಯವೆಂದು ಜಿ.ಪಂ ಅಧ್ಯಕ್ಷ ಬಿ.ಎ.ಹರೀಶ್ ಅಭಿಪ್ರಾಯಪಟ್ಟಿದ್ದಾರೆ.

ಜಿಲ್ಲಾ ಆಡಳಿತ ಮತ್ತು ಕೊಡಗು ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ವೈದ್ಯಕೀಯ ವಿಜ್ಞಾನ ಸಂಸ್ಥೆ/ ಭೋಧಕ ಆಸ್ಪತ್ರೆ, ಜಿಲ್ಲಾ ಕಾನೂನು ಮತ್ತು ಸೇವಾ ಪ್ರಾಧಿಕಾರ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಫ್.ಎಂ.ಕೆ.ಎಂ.ಸಿ ಕಾಲೇಜು, ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು, ಸರ್ಕಾರಿ ಪದವಿ ಪೂರ್ವ ಕಾಲೇಜು, ಸ್ವಯಂ ಸೇವಾ ಸಂಸ್ಥೆಗಳು, ರೋಟರಿ ಕ್ಲಬ್ ಮತ್ತು ಕಿ.ಮ.ಆ.ಸ ತರಬೇತಿ ಕೇಂದ್ರ, ನೆಹರು ಯುವಕ ಕೇಂದ್ರ, ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಮಡಿಕೇರಿ ಇವರ ಸಂಯುಕ್ತ ಆಶ್ರಯದಲ್ಲಿ 'ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮ' ವನ್ನು ಕಾವೇರಿ ಕಲಾಕ್ಷೇತ್ರದಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು. ಜನಸಂಖ್ಯೆ ಏರಿಕೆಯಿಂದಾಗಿ ದೇಶದ ಅಭಿವೃದ್ಧಿ ಕುಂಟಿತವಾಗುವ ಕಾರಣ ಈ  ಬಗ್ಗೆ ಹೆಚ್ಚು ಜಾಗೃತಿ ಮೂಡಿಸಬೇಕೆಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಸುರಗೀಹಳ್ಳಿ ಭಾರತದ ಪ್ರಸ್ತುತ ಜನಸಂಖ್ಯೆ 135.42 ಕೋಟಿ ಯಾಗಿದ್ದು ವಿಶ್ವದ ಜನಸಂಖ್ಯೆಯಲ್ಲಿ ಎರಡನೇ ಸ್ಥಾನದಲ್ಲಿದೆ. ವಿಶ್ವದ ಜನಸಂಖ್ಯೆಯ ಶೇ.17.74 ರಷ್ಟು ಜನಸಂಖ್ಯೆ ಭಾರತದಲ್ಲಿದೆ. ಇದೇ ರೀತಿ ಜನಸಂಖ್ಯೆ ಏರಿಕೆಯಾಗುತ್ತಾ ಹೋದರೆ 2050 ಕ್ಕೆ ಜನಸಂಖ್ಯೆಯಲ್ಲಿ ಚೀನಾವನ್ನು ಮೀರಿಸುತ್ತದೆ. ಆದ್ದರಿಂದ ಜನಸಂಖ್ಯಾ ನಿಯಂತ್ರಣಕ್ಕೆ ಕುಟುಂಬ ಕಲ್ಯಾಣ ಯೋಜನೆಗಳ ಸುರಕ್ಷಿತ ವಿಧಾನಗಳನ್ನು ಅನುಸರಿಸಿ ಜನಸಂಖ್ಯೆಯನ್ನು ನಿಯಂತ್ರಿಸಲು ಮುಂದಾಗಬೇಕಿದೆ ಎಂದು ಸಲಹೆ ನೀಡಿದರು. 

ಕೊಡಗು ಜಿಲ್ಲೆಯಲ್ಲಿ ಸಮತೋಲಿತ ಜನಸಂಖ್ಯೆಯಿದ್ದು ಕುಟುಂಬ ಕಲ್ಯಾಣ ಯೋಜನೆಗಳು ಉತ್ತಮವಾಗಿ ಅನುಷ್ಠಾನಗೊಂಡಿರುವುದಕ್ಕೆ ನಿದರ್ಶನವಾಗಿದೆ ಎಂದು ತಿಳಿಸಿದರು. 

ನಗರಸಭೆ ಅಧ್ಯಕ್ಷರಾದ ಕಾವೇರಿ ಸೋಮಣ್ಣ ಮಾತನಾಡಿ ಏರುತ್ತಿರುವ ಜನಸಂಖ್ಯೆ ಯಿಂದ ಜಗತ್ತು ನಲುಗುತ್ತಿದೆ. ಹಿಂದಿನ ಕಾಲದಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಸಂಪನ್ಮೂಲವಿರುತ್ತಿತ್ತು. ಅವರಿಗೆ ಯಾವುದೇ ತೊಂದರೆ ಇರುತ್ತಿರಲಿಲ್ಲ. ಆದರೆ ಇಂದಿನ ದಿನಗಳಲ್ಲಿ ಏರುತ್ತಿರುವ ಜನಸಂಖ್ಯೆಯಿಂದ ಸಂಪನ್ಮೂಲದ ಕೊರತೆ ಉಂಟಾಗುತ್ತಿದ್ದು ಜನಸಂಖ್ಯಾ ನಿಯಂತ್ರಣ ಇಂದಿನ ಅವಶ್ಯವಾಗಿದೆ ಎಂದು ಅವರು ತಿಳಿಸಿ, ಹೆಣ್ಣಿರಲಿ, ಗಂಡಿರಲಿ ಮಕ್ಕಳೆರಡಿರಲಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ಮಾತನಾಡಿ ಭಾರತದ ಜನಸಂಖ್ಯೆಯು ವಿಶ್ವದಲ್ಲಿ ಎರಡನೇ ಸ್ಥಾನದಲ್ಲಿದೆ. ಏರುತ್ತಿರುವ ಜನಸಂಖ್ಯೆಯಿಂದ ಸಂಪನ್ಮೂಲದ ಕೊರತೆಯಾಗುತ್ತಿದ್ದು, ಇದರಿಂದ ಅಭಿವೃದ್ಧಿ ಕುಂಟಿತವಾಗುತ್ತಿದೆ. ಆರೋಗ್ಯ ಇಲಾಖೆಯ ನವೀನ ಮಾದರಿಯ ಜನಸಂಖ್ಯಾ ನಿಯಂತ್ರಣ ಕಾರ್ಯಕ್ರಮಗಳ ಬಗ್ಗೆ ಜನರಲ್ಲಿ ಹೆಚ್ಚಿನ ಅರಿವು ಮೂಡಿಸುತ್ತಿದ್ದು, ಈ ಬೆಳವಣಿಗೆಯಿಂದ ಜನಸಂಖ್ಯಾ ನಿಯಂತ್ರಣಕ್ಕೆ ಸಹಕಾರಿಯಾಗಿದೆ. ಇದೇ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರ ಮತ್ತು ಅಂಗನವಾಡಿ ಕಾರ್ಯಕರ್ತೆಯೆ ಸೇವೆಯನ್ನು ಪ್ರಶಂಶಿಸಿದರು. 

ಕಾರ್ಯಕ್ರಮದಲ್ಲಿ ಜನಸಂಖ್ಯಾ ನಿಯಂತ್ರಣಾ ಯೋಜನೆಯ ಕಾರ್ಯಕ್ರಮದ ಅನುಷ್ಠಾನದಲ್ಲಿ ಉತ್ತಮ ಕಾರ್ಯರ್ವಹಿಸಿದ ವೈದ್ಯರಾದ ಡಾ. ಚೇತನ್, ಶುಶ್ರೂಷಕಿಯರಾದ ಆಶಾ, ಸುಶಿಲಾ ಡಿ.ಎಂ, ವನಿತಾ ಹಾಗೂ ಆಶಾ ಕಾರ್ಯಕರ್ತರಾದ ರಮ್ಯ ಮತ್ತು ವಿಶ್ವ ಜನಸಂಖ್ಯಾ ದಿನಾಚರಣೆ ಪ್ರಯುಕ್ತ ಪದವಿ ಕಾಲೇಜುಗಳಲ್ಲಿ ನಡೆಸಿದ ಪ್ರಬಂಧ ಸ್ಪರ್ಧೆ ಹಾಗೂ ಚರ್ಚಾ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಾದ ಅನ್‍ಸೀರ, ಅಮರ್‍ಜಿತ್ ಎಚ್.ಜಿ, ಗಗನಾ ಬಿ.ಬಿ, ದೇವಯ್ಯ, ಸಭಾಸಂರಿನ್ ಇವರುಗಳಿಗೆ ಜಿ.ಪಂ.ಸಿಇಒ ಪ್ರಶಾಂತ್ ಕುಮಾರ್ ಮಿಶ್ರ ಪ್ರಶಸ್ತಿ ಪ್ರಧಾನ ಮಾಡಿದರು.  

ಕಾರ್ಯಕ್ರಮದಲ್ಲಿ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಆನಂದ್, ಆರ್.ಸಿ.ಹೆಚ್ ಅಧಿಕಾರಿ ಡಾ.ನೀಲೇಶ್ ಮಡಿಕೇರಿ ತಾಲೂಕು ಆರೋಗ್ಯಾಧಿಕಾರಿ ಡಾ.ಪಾರ್ವತಿ, ವೈದ್ಯರಾದ ಡಾ.ಮಂಜುನಾಥ್, ಆರೋಗ್ಯ ಇಲಾಖಾ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಇತರರು ಇದ್ದರು. 

ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಆನಂದ್ ಸ್ವಾಗತಿಸಿದರು. ಜಿಲ್ಲಾ ಕುಟುಂಬ ಕಲ್ಯಾಣ ಇಲಾಖೆಯ ರಮೇಶ್ ಕಾರ್ಯಕ್ರಮದ ನಿರೂಪಣೆ ಮತ್ತು ವಂದನಾರ್ಪಣೆ ಮಾಡಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News