×
Ad

ಸಾರ್ವಜನಿಕರಿಗೆ ಅನುಕೂಲವಾಗುವಂತೆ ಸಾರಿಗೆ ಇಲಾಖೆ ಅಭಿವೃದ್ಧಿಯಾಗಲಿದೆ: ಸಚಿವ ತಮ್ಮಣ್ಣ

Update: 2018-07-16 23:16 IST

ಕೋಲಾರ,ಜು.16: ರಾಜ್ಯಾದ್ಯಂತ ಬಸ್ ನಿಲ್ದಾಣಗಳಲ್ಲಿನ ಸಮಸ್ಯೆಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗಿದೆ. ಈ ಹಿನ್ನಲೆಯಲ್ಲಿ ವಸ್ತುಸ್ಥಿತಿ ಪರಿಶೀಲನೆ ನಡೆಸಲು ರಾಜ್ಯಾದ್ಯಂತ ಪ್ರವಾಸ ಮಾಡಿ ಇಲಾಖೆಗಳ ಮುಖ್ಯಸ್ಥರೊಂದಿಗೆ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಸಾರ್ವಜನಿಕರಿಗೆ ಅನುಕೂಲವಾಗುವಂತೆ ರಾಜ್ಯ ರಸ್ತೆ ಸಾರಿಗೆ ಇಲಾಖೆಯನ್ನು ಅಭಿವೃದ್ಧಿಪಡಿಸಲಾಗುವುದು ಎಂದು ರಾಜ್ಯ ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ ತಿಳಿಸಿದರು. 

ಕೋಲಾರ ವಿಭಾಗದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಶ್ರೀನಿವಾಸಪುರ ಹಾಗೂ ಕೋಲಾರ ಘಟಕಕ್ಕೆ ಭೇಟಿ ನೀಡಿದ ಸಚಿವರು, ಡಿಪೋಗಳು, ಬಸ್‍ ನಿಲ್ದಾಣಗಳ ಪರಿಶೀಲನೆ ಮಾಡಿ ಅಲ್ಲಿ ಅಗತ್ಯವಿರುವ ಸಿಬ್ಬಂದಿ ಹಾಗೂ ಬಸ್‍ಗಳ ಕೊರತೆ ಬಗ್ಗೆ ಮಾಹಿತಿ ಪಡೆದುಕೊಂಡರು. ಶ್ರೀನಿವಾಸಪುರದ ಬಸ್‍ ಡಿಪೋ ಹಾಗೂ ಬಸ್‍ ನಿಲ್ದಾಣಗಳ ಪರಿಶೀಲನೆ ನಡೆಸಿದ ಸಚಿವರು ವ್ಯರ್ಥವಾಗಿ ನಿಂತಿರುವ ಬಸ್‍ಗಳ ಬಗ್ಗೆ ಮಾಹಿತಿ ಪಡೆದುಕೊಂಡರಲ್ಲದೆ, ಬಸ್‍ ನಿಲ್ದಾಣದ ಹಿಂದೆ ಇರುವ ಅಪೂರ್ಣಗೊಂಡಿರುವ ಕಟ್ಟಡದ ಬಗ್ಗೆ ಮಾಹಿತಿ ಪಡೆದು, ಆ ಕಟ್ಟಡವನ್ನು ಸರ್ಕಾರಿ ಇಲಾಖೆಗಳಿಗೆ ಬಳಸಿಕೊಳ್ಳಲು ಸಾಧ್ಯವೇ ಎಂಬುದನ್ನು ಪರಿಶೀಲಿಸುವುದಾಗಿ ತಿಳಿಸಿದರು.

ಅನುದಾನದ ಕೊರತೆಯಿಂದ ಶಿಥಿಲವಾಗಿರುವ ತರಬೇತಿ ಕಟ್ಟಡವನ್ನು ಸ್ಥಳೀಯವಾಗಿ ಉಪಯೋಗಿಸಿಕೊಳ್ಳಲು ಉದ್ದೇಶಿಸಲಾಗಿತ್ತು. ಇದನ್ನು ಮತ್ತೆ ಏಕೆ ಬಳಸಿಕೊಳ್ಳಬಾರದು ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಇದರ ಬಗ್ಗೆ ನನಗೆ ಮಾಹಿತಿ ಇಲ್ಲ. ಕಡತಗಳ ಪರಿಶೀಲನೆ ನಂತರ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದರು. ಎಲ್ಲಾ ಬಸ್‍ ನಿಲ್ದಾಣಗಳಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಆರ್.ಓ. ಪ್ಲಾಂಟ್‍ಗಳನ್ನು ಹಾಗೂ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗುವುದು ಎಂದರು. 

ನಂತರ ಕೋಲಾರ ಜಿಲ್ಲಾ ವಿಭಾಗೀಯ ಕೇಂದ್ರಕ್ಕೆ ಬೇಟಿ ನೀಡಿದ ಸಚಿವರಿಗೆ ವಿದ್ಯಾರ್ಥಿಗಳು ಹಾಗೂ ಕೆಲವು ಸಂಘಟನೆಗಳ ಪ್ರತಿಭಟನೆಯ ಬಿಸಿ ತಟ್ಟಿತು. ರಾಜ್ಯಾದ್ಯಂತ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಮಾಡಬೇಕೆಂದು ಆಗ್ರಹಿಸಿ ಎಸ್.ಎಫ್.ಐ ವಿದ್ಯಾರ್ಥಿ ಸಂಘಟನೆ ಹಾಗೂ ಎಬಿವಿಪಿ ವಿದ್ಯಾರ್ಥಿ ಸಂಘಟನೆಗಳಿಂದ ಸಚಿವರಿಗೆ ಮುತ್ತಿಗೆ ಹಾಕಲಾಯಿತು. ಈ ವೇಳೆ ಮಾತನಾಡಿದ ಸಚಿವರು, ಈಗಾಗಲೇ ಶೇ. 75ರಷ್ಟು ರಿಯಾಯಿತಿ ದರದಲ್ಲಿ ವಿದ್ಯಾರ್ಥಿಗಳಿಗೆ ಪಾಸ್ ನೀಡಲಾಗುತ್ತಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡಗಳ ವಿದ್ಯಾರ್ಥಿಗಳಿಗೆ ಕಾನೂನು ರೀತಿಯಲ್ಲಿ ಒದಗಿಸಿರುವ ಮೀಸಲಾತಿ ಅನುದಾನದಲ್ಲಿ ಬಸ್ ಪಾಸ್ ಉಚಿತವಾಗಿ ನೀಡಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು. ಇನ್ನು ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಪಾಸ್ ನೀಡುವ ಪ್ರಸ್ತಾವನೆ ಬಗ್ಗೆ ಚರ್ಚೆ ನಡೆಸಿ ತೀರ್ಮಾನ ತೆಗೆದುಕೊಳ್ಳಬೇಕಾಗುತ್ತೆ. ಅದಕ್ಕೆ ಕಾಲಾವಕಾಶ ಬೇಕು ಎಂದರು. 

ಇದೇ ವೇಳೆ ಪರಿಶಿಷ್ಠ ಜಾತಿಗೆ ಸೇರಿದ ಕೆ.ಎಸ್.ಆರ್.ಟಿ.ಸಿ ನೌಕರರೊಬ್ಬರಿಗೆ ಜಾತಿಯ ಕಾರಣಕ್ಕಾಗಿ ಇಲಾಖೆಯ ಅಧಿಕಾರಿಯೊಬ್ಬರಿಂದ ಕಿರುಕುಳ ನೀಡಲಾಗಿದೆ. ಹಾಗಾಗಿ ಆ ಅಧಿಕಾರಿಯ ಮೇಲೆ ಸೂಕ್ತ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿ ದಲಿತ ಸಿಂಹ ಸೇನೆ ಕಾರ್ಯಕರ್ತರು ಸಚಿವರಿಗೆ ಘೆರಾವ್ ಹಾಕಿ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರ ಅಹವಾಲನ್ನು ಸ್ವೀಕರಿಸಿದ ಸಚಿವರು ಅಧಿಕಾರಿಗಳೊಂದಿಗೆ ಮಾತನಾಡಿ ಕ್ರಮ ಜರುಗಿಸುವುದಾಗಿ ಭರವಸೆ ನೀಡಿದ ನಂತರ ಪ್ರತಿಭಟನೆ ಕೈಬಿಡಲಾಯಿತು. 

ನಂತರ ಜಿಲ್ಲಾ ಮಟ್ಟದ ಹಾಗೂ ವಿಭಾಗೀಯ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು ಇಲಾಖೆಯಲ್ಲಿನ ಕುಂದು ಕೊರತೆಗಳನ್ನು ಹಂತಹಂತವಾಗಿ ನೀಗಿಸಿ ಅಭಿವೃದ್ದಿ ಪಡಿಸಲಾಗುವುದು ಎಂದರು. 

ಈ ಸಂದರ್ಭದಲ್ಲಿ ಉಪಸಭಾಪತಿ ಜೆ.ಕೆ.ಕೃಷ್ಣಾರೆಡ್ಡಿ, ವಿಧಾನ ಪರಿಷತ್ ಸದಸ್ಯ ತೂಪಲ್ಲಿ ಆರ್.ಚೌಡರೆಡ್ಡಿ, ಇಲಾಖೆಯ ನಿರ್ದೇಶಕ ಶ್ರೀನಿವಾಸ್, ಕೋಲಾರದ ವಿಭಾಗೀಯ ನಿಯಂತ್ರಣಾಧಿಕಾರಿ ಮಂಜುನಾಥ್, ಶ್ರೀನಿವಾಸಪುರ ತಹಸೀಲ್ದಾರ್ ಶ್ರೀ ರವಿ ಮತ್ತಿತರರು ಇದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News