ಉತ್ತರ ಕರ್ನಾಟಕದಲ್ಲಿ ಕೈಗಾರಿಕಾಭಿವೃದ್ಧಿಗೆ ಆದ್ಯತೆ: ಸಚಿವ ಕೆ.ಜೆ.ಜಾರ್ಜ್

Update: 2018-07-17 15:14 GMT

ಧಾರವಾಡ, ಜು.17: ರಾಜ್ಯದಲ್ಲಿ ರಾಜ್ಯದಲ್ಲಿ ಕೈಗಾರಿಕೆಗಳನ್ನು ಸ್ಥಾಪನೆ ಮಾಡಲು ಹತ್ತು ಹಲವು ಉದ್ಯಮಿಗಳು ಮುಂದೆ ಬಂದಿದ್ದಾರೆ. ಕೈಗಾರೀಕರಣದಲ್ಲಿ ಕರ್ನಾಟಕ ರಾಜ್ಯವು ದೇಶದಲ್ಲಿಯೇ ಮೊದಲ ಸ್ಥಾನದಲ್ಲಿದೆ. ಉತ್ತರ ಕರ್ನಾಟಕದ ಹುಬ್ಬಳ್ಳಿ ಸೇರಿದಂತೆ ಪ್ರಮುಖ ನಗರಗಳಲ್ಲಿ ಕೈಗಾರಿಕೆಗಳನ್ನು ಆರಂಭಿಸಲು ಆದ್ಯತೆ ನೀಡಲಾಗುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.

ಮಂಗಳವಾರ ರಾಯಾಪುರದ ಜಿಲ್ಲಾ ಕೈಗಾರಿಕಾ ಕೇಂದ್ರದಲ್ಲಿ ಜಿಲ್ಲೆಯ ಕೈಗಾರಿಕಾ ಸಂಘಟನೆಗಳ ಪದಾಧಿಕಾರಿಗಳೊಂದಿಗೆ ನಡೆದ ಚರ್ಚೆಯ ಬಳಿಕ ಸುದ್ದಿಗೋಷ್ಠಿ ಯನ್ನುದ್ದೇಶಿಸಿ ಅವರು ಮಾತನಾಡಿದರು.

ರಾಜ್ಯ ಸರಕಾರವು ಕೌಶಲ್ಯಾಭಿವೃದ್ಧಿಗೆ ಒತ್ತು ನೀಡುತ್ತಿದೆ. ಕೌಶಲ್ಯಾಭಿವೃದ್ಧಿ ವಿಶ್ವವಿದ್ಯಾಲಯವನ್ನು ಸ್ಥಾಪಿಸುವ ಚಿಂತನೆ ಇದೆ. ಉತ್ತರ ಕರ್ನಾಟಕದ ಹುಬ್ಬಳ್ಳಿಗೆ ಚಾರಿತ್ರಿಕವಾಗಿ ವಾಣಿಜ್ಯ ಕ್ಷೇತ್ರದಲ್ಲಿ ಮಹತ್ವದ ಸ್ಥಾನವಿದೆ. ಈ ಭಾಗದಲ್ಲಿ ಕೈಗಾರಿಕೆಗಳ ಸ್ಥಾಪನೆಯಿಂದ ಉತ್ತರ ಕರ್ನಾಟಕದ ಅಭಿವೃದ್ಧಿ ಮಾಡಲಾಗುವುದು. ಪ್ರತ್ಯೇಕ ರಾಜ್ಯದ ಕೂಗು ಸರಿಯಲ್ಲ. ಪ್ರತ್ಯೇಕ ರಾಜ್ಯದಿಂದ ಸಮಸ್ಯೆಗಳು ಪರಿಹಾರ ಆಗುವುದಿಲ್ಲ ಎಂದು ಅವರು ಹೇಳಿದರು.

ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯು ಕೈಗಾರಿಕೆಗಳ ಸರ್ವತೋಮುಖ ಬೆಳವಣಿಗೆಗಾಗಿ ಶ್ರಮಿಸುತ್ತಿದೆ. ಸ್ವಯಂ ಉದ್ಯೋಗ, ಕೈಗಾರಿಕಾ ವಲಯ, ಕೈಗಾರಿಕಾ ವಸಾಹತು ಬೆಳವಣಿಗೆ, ಕ್ಲಸ್ಟರ್ ಅಭಿವೃದ್ದಿ, ಇಂಡಸ್ಟ್ರಿಯಲ್ ಕಾರಿಡಾರ್, ವಿಶೇಷ ಘಟಕ ಯೋಜನೆ, ಗಿರಿಜನ ಉಪಯೋಜನೆ, 2014-19ರ ಕೈಗಾರಿಕಾ ನೀತಿಯಂತೆ ಪ್ರೋತ್ಸಾಹ ಮತ್ತು ರಿಯಾಯಿತಿಗಳು ಮತ್ತು ಕೈಗಾರಿಕೆಗಳಿಗೆ ಮೂಲಭೂತ ಸೌಕರ್ಯ ಅಭಿವೃದ್ದಿ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ಬೆಂಗಳೂರು-ಮುಂಬೈ ಆರ್ಥಿಕ ಕಾರಿಡಾರ್ ಅಭಿವೃದ್ಧಿ: ಧಾರವಾಡ ಜಿಲ್ಲೆಯಲ್ಲಿ ಕೆಐಎಡಿಬಿ ವತಿಯಿಂದ 4680 ಎಕರೆ ಜಮೀನನ್ನು ಕೈಗಾರಿಕಾ ಪ್ರದೇಶವಾಗಿ ಅಭಿವೃದ್ದಿ ಪಡಿಸಲಾಗಿದೆ. ಕೆಎಸ್‌ಎಸ್‌ಐಡಿಸಿ ವತಿಯಿಂದ 228.61 ಎಕರೆ ಜಮೀನಿನಲ್ಲಿ 547 ಮಳಿಗೆಗಳು, 792 ನಿವೇಶನಗಳನ್ನು ಅಭಿವೃದ್ಧಿ ಪಡಿಸಲಾಗಿದೆ ಎಂದು ಜಾರ್ಜ್ ಹೇಳಿದರು.

ಬೇಲೂರು-ಕೋಟೂರು ವ್ಯಾಪ್ತಿಯಲ್ಲಿ 594.36 ಎಕರೆ ಜಮೀನು, ಗಾಮನಗಟ್ಟಿ ಇಟಿಗಟ್ಟಿಯಲ್ಲಿ 590.14, ಸಿಂಗನಹಳ್ಳಿಯಲ್ಲಿ 302.27 ಎಕರೆ, ಸಿಂಗನಹಳ್ಳಿ ಕುಮಾರಕೊಪ್ಪದಲ್ಲಿ 610.14 ಎಕರೆ, ಚಿಕ್ಕಮಲ್ಲಿಗವಾಡದಲ್ಲಿ 591.09 ಎಕರೆ, ದುರ್ಗದಕೆರೆಯಲ್ಲಿ 3700 ಎಕರೆ ಜಮೀನನ್ನು ಕೈಗಾರಿಕಾ ಉದ್ದೇಶಕ್ಕಾಗಿ ವಶಪಡಿಸಿಕೊಳ್ಳಲು ಉದ್ದೇಶಿಸಲಾಗಿದೆ. ಇದರಿಂದ ಬೆಂಗಳೂರು-ಮುಂಬೈ ಆರ್ಥಿಕ ಕಾರಿಡಾರ್ ಅಭಿವೃದ್ಧಿ ಪಡಿಸಲು ಅಗತ್ಯಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ಮಹಿಳಾ ಅಭಿವೃದ್ಧಿ ಪಾರ್ಕ್: ಮಹಿಳೆಯರಿಗೆ ಕೈಗಾರಿಕೆಯನ್ನು ಸ್ಥಾಪಿಸಲು ಅನುವಾಗುವಂತೆ ಗಾಮನಗಟ್ಟಿ ಕೈಗಾರಿಕಾ ಪ್ರದೇಶದಲ್ಲಿ 30ಎಕರೆ ಜಮೀನನ್ನು ವಶಪಡಿಸಿಕೊಂಡಿದ್ದು 5 ಕೋಟಿ ರೂ.ಅಂದಾಜು ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಾರ್ಜ್ ತಿಳಿಸಿದರು.

ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳು: ಧಾರವಾಡ ಜಿಲ್ಲೆಯಲ್ಲಿ ಒಟ್ಟು 11 ಬೃಹತ್ ಕೈಗಾರಿಕೆಗಳು 3032 ಕೋಟಿ ರೂ.ಬಂಡವಾಳದಲ್ಲಿ 6710 ಜನರಿಗೆ ಉದ್ಯೋಗವನ್ನು ಕಲ್ಪಿಸಿವೆ. ಒಟ್ಟು 18 ಮಧ್ಯಮ ವರ್ಗದ ಕೈಗಾರಿಕೆಗಳು 169 ಕೋಟಿ ರೂ.ಬಂಡವಾಳದಲ್ಲಿ 1871 ಜನರಿಗೆ ಉದ್ಯೋಗವನ್ನು ಕಲ್ಪಿಸಿವೆ. ಕೆಐಎಡಿಬಿ ವತಿಯಿಂದ 6388 ಎಕರೆ ಜಮೀನನ್ನು ಸ್ವಾಧೀನ ಪಡಿಸಿಕೊಳ್ಳಲು ಉದ್ದೇಶಿಸಿದ್ದು ಇಲ್ಲಿ ಬೃಹತ್ ಕೈಗಾರಿಕೆಗಳನ್ನು ತರಲು ಸಕಲ ಪ್ರಯತ್ನಗಳನ್ನು ಸರಕಾರದ ವತಿಯಿಂದ ಮಾಡಲಾಗುವುದು ಎಂದು ಅವರು ಹೇಳಿದರು.

ಇಂಡಸ್ಟ್ರೀಯಲ್ ಟೌನ್ ಶಿಪ್: ಕೈಗಾರಿಕಾ ಪ್ರದೇಶಗಳ ಮೇಲ್ವಿಚಾರಣೆಯನ್ನು ಕೈಗಾರಿಕಾ ಸಂಘಗಳಿಗೆ ನೀಡುವ ನಿಟ್ಟಿನಲ್ಲಿ ತಾರಿಹಾಳ ಕೈಗಾರಿಕಾ ಪ್ರದೇಶವನ್ನು ಇಂಡಸ್ಟ್ರೀಯಲ್ ಟೌನ್‌ಶಿಪ್ ಎಂದು ಘೋಷಿಸಲು ಪ್ರಸ್ತಾವನೆ ತಯಾರಿಸಲಾಗಿದೆ. ಗೋಕುಲ ರಸ್ತೆ ಕೈಗಾರಿಕಾ ವಸಾಹತು ಪ್ರದೇಶ, ಬೇಲೂರು ಕೈಗಾರಿಕಾ ಪ್ರದೇಶ, ಗಾಮನಗಟ್ಟಿ ಕೈಗಾರಿಕಾ ಪ್ರದೇಶವನ್ನು ಇಂಡಸ್ಟ್ರೀಯಲ್ ಟೌನ್‌ಶಿಪ್ ಆಗಿ ಘೋಷಿಸಲು ಉದ್ದೆೀಶಿಸಲಾಗಿದೆ ಎಂದು ಜಾರ್ಜ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತಾ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಪಿ.ನಾಗೇಶ್, ಉಪನಿರ್ದೇಶಕ ಮೋಹನ್ ಭರಮಕ್ಕನವರ, ಸಹಾಯಕ ನಿರ್ದೇಶಕ ಎನ್.ಎಂ.ಭೀಮಪ್ಪ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News