ಬೆಳಕು ಮೀನುಗಾರಿಕೆ ಕಡ್ಡಾಯ ನಿಷೇಧ: ಸಚಿವ ನಾಡಗೌಡ

Update: 2018-07-18 17:46 GMT

ಉಡುಪಿ, ಜು.18: ಸಮುದ್ರದಲ್ಲಿ ಬೆಳಕು ಮೀನುಗಾರಿಕೆಯನ್ನು ಸಂಪೂರ್ಣ ವಾಗಿ ನಿಷೇಧಿಸುವ ಕುರಿತಂತೆ ಕಾರ್ಯದರ್ಶಿಗಳ ಮೂಲಕ ಏಕರೂಪದ ಆದೇಶ ಜಾರಿಗೊಳಿಸಲಾಗುವುದು ಎಂದು ರಾಜ್ಯ ಪಶುಸಂಗೋಪನಾ ಮತ್ತು ಮೀನುಗಾರಿಕಾ ಸಚಿವ ವೆಂಕಟರಾವ್ ನಾಡಗೌಡ ಹೇಳಿದ್ದಾರೆ.

ಬುಧವಾರ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮೀನುಗಾರಿಕಾ, ಬಂದರು ಹಾಗೂ ಪಶುಪಾಲನ ಇಲಾಖೆಗಳ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ರಾಜ್ಯದ ಸಮುದ್ರ ವ್ಯಾಪ್ತಿಯಲ್ಲಿ ಬೆಳಕು ಮೀನುಗಾರಿಕೆ ನಿಷೇಧವಿದ್ದರೂ ಸಹ ಕರಾವಳಿಯ ಕೆಲವೆಡೆ ಬೆಳಕು ಮೀನುಗಾರಿಕೆ ನಡೆಯುತ್ತಿರುವ ಬಗ್ಗೆ ದೂರುಗಳು ಬರುತ್ತಿದ್ದು, ಈ ಕುರಿತಂತೆ ಮುಖ್ಯ ಕಾರ್ಯದರ್ಶಿಗಳ ಮೂಲಕ ಜಿಲ್ಲಾಧಿಕಾರಿಗಳಿಗೆ ಆದೇಶ ತಲುಪಿಸಲಾಗುವುದು. ಮುಂದಿನ ತಿಂಗಳು ಆರಂಭಗೊಳ್ಳುವ ಮೀನುಗಾರಿಕಾ ಋತುವಿನಿಂದ ಇದನ್ನು ಕಡ್ಡಾಯವಾಗಿ ಕರಾವಳಿ ವ್ಯಾಪ್ತಿಯ ಎಲ್ಲಾ ಜಿಲ್ಲೆಯಲ್ಲಿ ಅನುಷ್ಠಾನಕ್ಕೆ ತರಲಾಗುವುದು ಎಂದು ಸಚಿವರು ಸ್ಪಷ್ಟ ಭರವಸೆ ನೀಡಿದರು.

ಈ ಕುರಿತಂತೆ ಅಧಿಕಾರಿಗಳು ಎಚ್ಚರದಿಂದ ಕಾರ್ಯ ನಿರ್ವಹಿಸುವಂತೆ ಸೂಚಿಸಿದ ಅವರು, ಕರಾವಳಿ ಪೊಲೀಸ್ ಪಡೆ ಮತ್ತು ಕೋಸ್ಟ್ ಗಾರ್ಡ್‌ಗೆ ಈ ಕುರಿತು ಸೂಕ್ತ ಸೂಚನೆ ನೀಡಲು ಪ್ರತ್ಯೇಕ ಸಭೆ ಕರೆಯುವಂತೆ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನಿ್ಸಸ್‌ಗೆ ಸೂಚನೆಗಳನ್ನು ನೀಡಿದರು.

ಮತ್ಯಾಶ್ರಯ ಯೋಜನೆಯಡಿ ನಿರ್ಮಿಸಲಾಗುವ ಮನೆಗಳನ್ನು ರಾಜೀವ ಗಾಂಧೀ ಅಭಿವೃದ್ದಿ ನಿಗಮದ ಮೂಲಕ ಅನುಷ್ಠಾನಗೊಳಿಸದೇ ಮೀನುಗಾರಿಕೆ ಇಲಾಖೆಯಿಂದಲೇ ಅನುಷ್ಠಾನಗೊಳಿಸುವ ಕುರಿತಂತೆ ಪರಿಶೀಲಿಸಿ, ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದರು. ಸಮುದ್ರದಲ್ಲಿ ತೇಲುವ ಜೆಟ್ಟಿ ನಿರ್ಮಾಣ ಮಾಡುವ ಕುರಿತಂತೆ ಮಾತನಾಡಿದ ಸಚಿವರು, ಈಗಾಗಲೇ ಗೋವಾ ರಾಜ್ಯದಲ್ಲಿ ಈ ಮಾದರಿಯ ಜೆಟ್ಟಿಗಳ ನಿರ್ಮಾಣ ನಡೆದಿದ್ದು ಸಮರ್ಪಕವಾಗಿ ಬಳಕೆಯಾಗುತ್ತಿವೆ. ರಾಜ್ಯದ ಅಧಿಕಾರಿಗಳ ತಂಡವನ್ನು ಅಲ್ಲಿಗೆ ಕಳುಹಿಸಿ ಅಲ್ಲಿ ನಿರ್ಮಣಗೊಂಡಿರುವ ಜೆಟ್ಟಿಗಳ ಗುಣಮಟ್ಟ ಮತ್ತು ರಾಜ್ಯದಲ್ಲಿ ಇದರ ನಿರ್ಮಾಣ ಸಾದ್ಯತೆಯ ಬಗ್ಗೆ ವರದಿ ಪಡೆದು ರಾಜ್ಯದಲ್ಲಿಯೂ ಅನುಷ್ಠಾನ ಮಾಡಲಾಗುವುದು ಎಂದರು.

ಜಿಲ್ಲೆಯಲ್ಲಿ ಪ್ರಗತಿ ಹಂತದಲ್ಲಿರುವ ಮತ್ತು ಪೂರ್ಣಗೊಂಡಿರುವ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು, ಕೆಲವಡೆಗಳಲ್ಲಿ ನಿಯಮ ಮೀರಿ ಕೈಗೊಂಡಿರುವ ಕಾಮಗಾರಿಗಳ ಕುರಿತು ಸಂಪೂರ್ಣ ವಿವರಗಳನ್ನು ಸಲ್ಲಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಿದರು. ಯಾವುದೇ ಕಾರಣಕ್ಕೂ ಯೋಜನೆಗಳನ್ನು ಅನುಮತಿ ಪಡೆಯದೇ ಬದಲಾಯಿಸದಂತೆ ಅರು ಸ್ಪಷ್ಟ ಸೂಚನೆ ನೀಡಿದರು.

ಮಲ್ಪೆ ಬಂದರಿನಲ್ಲಿ 50 ಕೋಟಿ ರೂ. ವೆಚ್ಚದ 3ನೇ ಹಂತದ ಕಾಮಗಾರಿ ಪೂರ್ಣಗೊಂಡಿದೆ.ಗಂಗೊಳ್ಳಿಯಲ್ಲಿ 102 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣ ಗೊಳ್ಳುತ್ತಿರುವ ಬ್ರೇಕ್‌ವಾಟರ್ ಕಾಮಗಾರಿ ಮುಕ್ತಾಯದ ಹಂತದಲ್ಲಿದ್ದು, ಈ ತಿಂಗಳು ಪೂರ್ಣಗೊಳ್ಳಲಿದೆ. ಕೋಡಿ ಕನ್ಯಾನದಲ್ಲಿ 6.48 ಕೋಟಿ ರೂ ವೆಚ್ಚದ ಡ್ರಜ್ಜಿಂಗ್ ಕಾಮಗಾರಿ ಪ್ರಗತಿಯಲ್ಲಿದೆ. ಹೆಜಮಾಡಿಯಲ್ಲಿ 139 ಕೋಟಿ ರೂ ಅಂದಾಜು ವೆಚ್ಚದಲ್ಲಿ ನಿರ್ಮಾಣಗೊಳ್ಳುವ ಬಂದರುಕಾಮಗಾರಿ ಮಂಜೂರಾತಿ ಹಂತದಲ್ಲಿದೆ ಎಂದು ಬಂದರು ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು.

ಕೇಂದ್ರ ಸರಕಾರದಿಂದ ಮಂಜೂರಾತಿಗೆ ಬಾಕಿ ಇರುವ ಕಾಮಗಾರಿಗಳ ಮತ್ತು ಹಣ ಬಿಡುಗಡೆಯ ಕುರಿತಂತೆ ವಿವರಗಳನ್ನು ಸಲ್ಲಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಉಡುಪಿ ಶಾಸಕ ರಘುಪತಿ ಭಟ್, ಕಾಪು ಶಾಸಕ ಲಾಲಾಜಿ ಆರ್ ಮೆಂಡನ್, ಜಿಪಂ ಅಧ್ಯಕ್ಷ ದಿನಕರ ಬಾಬು, ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶಿವಾನಂದ ಕಾಪಶಿ, ಅಪರ ಜಿಲ್ಲಾಧಿಕಾರಿ ಅನುರಾಧ, ಮೀನುಗಾರಿಕಾ ಇಲಾಖೆಯ ನಿರ್ದೇಶಕ ಎಚ್.ಎಸ್. ವೀರಪ್ಪಗೌಡ, ಜಂಟಿ ನಿರ್ದೇಶಕ ದೊಡ್ಡಮನಿ, ಉಡುಪಿ ಜಿಲ್ಲಾ ಮೀನುಗಾರಿಕಾ ಇಲಾಖೆ ಉಪ ನಿರ್ದೇಶಕಪಾರ್ಶ್ವನಾಥ್, ಸಚಿವರ ಆಪ್ತ ಕಾರ್ಯದರ್ಶಿ ವಿರೂಪಾಕ್ಷ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News