ಮಹಾರಾಷ್ಟ್ರದಲ್ಲಿ ಭಾರೀ ಮಳೆ: ಚಿಕ್ಕೋಡಿ, ರಾಯಭಾಗದಲ್ಲಿ ಪ್ರವಾಹ ಭೀತಿ
ಬೆಳಗಾವಿ, ಜು. 20: ಮಹಾರಾಷ್ಟ್ರದಲ್ಲಿ ಭಾರಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣಾ ನದಿಗೆ ಒಳ ಹರಿವು ಹೆಚ್ಚಾಗಿದೆ. ಹೀಗಾಗಿ ನದಿಯಿಂದ ಹೆಚ್ಚುವರಿ ನೀರು ಬಿಡುಗಡೆ ಮಾಡುತ್ತಿರುವ ಪರಿಣಾಮ ಜಿಲ್ಲೆಯ ಚಿಕ್ಕೋಡಿ, ರಾಯಭಾಗ, ಅಥಣಿ ತಾಲೂಕಿನ ನದಿ ಪಾತ್ರದ ಗ್ರಾಮಗಳಲ್ಲಿ ಪ್ರವಾಹ ಭೀತಿ ಸೃಷ್ಟಿಯಾಗಿದೆ.
ಕೃಷ್ಣಾ ನದಿ ನೀರಿನ ಒಳ ಹರಿವು 2ಲಕ್ಷ ಕ್ಯೂಸೆಕ್ ದಾಟಿದ್ದು, ನದಿ ತೀರದ ಗ್ರಾಮಗಳು ಸೇರಿದಂತೆ ತೋಟದ ವಸತಿಗಳು ಅಕ್ಷರಶಃ ನಡುಗಡ್ಡೆಗಳಾಗಿವೆ. ವಸತಿ ಪ್ರದೇಶಗಳು ಜಲಾವೃತವಾಗಿದ್ದು, ಬೋಟ್ ವ್ಯವಸ್ಥೆ ಕಲ್ಪಿಸಬೇಕೆಂದು ಸ್ಥಳೀಯರ ಆಗ್ರಹಿಸುತ್ತಿದ್ದಾರೆ.
ಮಹಾರಾಷ್ಟ್ರದಿಂದ ಕೃಷ್ಣಾ ನದಿಗೆ ಹೆಚ್ಚುವರಿ ನೀರು ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ ಚಿಕ್ಕೋಡಿ ತಾಲೂಕಿನ ಯಡೂರು, ಕಲ್ಲೋಳ, ಇಂಗಳಿ ಗ್ರಾಮಗಳಿಗೆ ಪ್ರವಾಹ ಭೀತಿ ಆವರಿಸಿದೆ. ನದಿ ತೀರದ ಗ್ರಾಮಗಳಿಗೆ ಜಿಲ್ಲಾಧಿಕಾರಿ, ಜಿಪಂ ಸಿಇಓ, ಎಸ್ಪಿ ಸೇರಿದಂತೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಗತ್ಯ ಮುನ್ನಚ್ಚರಿಕೆ ಕೈಗೊಳ್ಳಲು ಸೂಚಿದ್ದಾರೆಂದು ಗೊತ್ತಾಗಿದೆ.