ಮೈಸೂರು: ಉಚಿತ ಬಸ್ ಪಾಸ್ ಗೆ ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಪ್ರತಿಭಟನೆ
Update: 2018-07-20 16:59 GMT
ಮೈಸೂರು,ಜು.20: ರಾಜ್ಯದ ಎಲ್ಲಾ ವರ್ಗಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಬೇಕೆಂದು ಒತ್ತಾಯಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ವತಿಯಿಂದ ಪ್ರತಿಭಟನೆ ನಡೆಯಿತು.
ನಗರದ ಪುರಭವನದ ಮುಂಭಾಗ ಶುಕ್ರವಾರ ಜಮಾಯಿಸಿದ ಪ್ರತಿಭಟನಾಕಾರರು, ಉಚಿತ ಬಸ್ ಪಾಸ್ ನೀಡುವುದಾಗಿ ಹಿಂದಿನ ಸರಕಾರ ಹೇಳಿದ್ದರೂ ಈಗಿನ ಸಮ್ಮಿಶ್ರ ಸರಕಾರ ಜಾರಿಗೊಳಿಸದೆ ವಂಚಿಸುತ್ತಿದೆ. ಶಾಲಾ ಕಾಲೇಜುಗಳು ಪ್ರಾರಂಭವಾಗಿ ತಿಂಗಳುಗಳೇ ಕಳೆದಿವೆ. ಆದರೂ ಬಸ್ ಪಾಸ್ ನೀಡದಿರುವುದು ಖಂಡನೀಯ ಎಂದು ಹೇಳಿದರು. ಕೂಡಲೇ ರಾಜ್ಯ ಸರಕಾರ ವಿದ್ಯಾರ್ಥಿಗಳ ಜೀವನದ ಜೊತೆ ಚಲ್ಲಾಟವಾಡದೆ ಎಲ್ಲಾ ವರ್ಗಗಳ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ನೀಡಬೇಕು ಎಂದು ಆಗ್ರಹಿಸಿದರು. ಇದೇ ವೇಳೆ ಜಿಲ್ಲಾಧಿಕಾರಿಗಳ ಕಚೇರಿ ತಲುಪಿ ಮನವಿ ಪತ್ರ ಸಲ್ಲಿಸಿದರು.
ಕ್ಯಾಂಪಸ್ ಫ್ರಂಟ್ ಮೈಸೂರು ಜಿಲ್ಲಾ ಕಾರ್ಯದರ್ಶಿ ತನ್ವೀಜ್ ಅಹಮದ್, ಸದಸ್ಯರಾದ ಸಗೀರ್, ದಾವುದ್, ಅಫ್ತಾಬ್, ಅಮೀನ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.