ಕೆಸಿ ವ್ಯಾಲಿ ಮೂಲಕ ಕೆರೆಗಳಿಗೆ ಆ.1 ರವರೆಗೆ ನೀರು ಹರಿಸದಂತೆ ಹೈಕೋರ್ಟ್ ಆದೇಶ

Update: 2018-07-24 16:48 GMT

ಬೆಂಗಳೂರು, ಜು.21: ತ್ಯಾಜ್ಯ ನೀರನ್ನು ಸಂಸ್ಕರಿಸಿ ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ 163 ಕೆರೆಗಳಿಗೆ ಹರಿಸದಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.

ಈ ಕುರಿತಂತೆ ಚಿಕ್ಕಬಳ್ಳಾಪುರ ತಾಲೂಕಿನ ಪಟ್ರೇನಹಳ್ಳಿಯ ಆರ್.ಆಂಜನೇಯ ರೆಡ್ಡಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಮತ್ತು ನ್ಯಾಯಮೂರ್ತಿ ಆರ್.ದೇವದಾಸ್ ಅವರಿದ್ದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು. ಸಂಸ್ಕರಿಸಿದ ನೀರಿನ ಗುಣಮಟ್ಟ ಖಾತ್ರಿ ಆಗುವತನಕ ಕೆರೆಗಳಿಗೆ ನೀರು ಹರಿಸಬಾರದು ಎಂದು ನ್ಯಾಯಪೀಠ ಮಧ್ಯಂತರ ಆದೇಶ ನೀಡಿದೆ.

ಬೆಳ್ಳಂದೂರು ಕೆರೆಯಿಂದ ಕೋರಮಂಗಲ ಚಲ್ಲಘಟ್ಟ(ಕೆ.ಸಿ ವ್ಯಾಲಿ) ಯೋಜನೆಯ ಮೂಲಕ ಕೋಲಾರದ ಕೆರೆಗಳಿಗೆ ಹರಿಸುತ್ತಿದ್ದ ನೀರಿನಲ್ಲಿ ನೊರೆ ಕಾಣಿಸಿಕೊಂಡಿತ್ತು. ಯೋಜನೆ ಕಾಮಗಾರಿ ಮುಗಿದ ಬಳಿಕ ಕೋಲಾರ ಜಿಲ್ಲೆಗೆ ಪ್ರತಿನಿತ್ಯ 100 ಎಂಎಲ್‌ಡಿ ನೀರು ಹರಿದು ಬರುತ್ತಿತ್ತು. ನೀರಿನ ಪ್ರಮಾಣವನ್ನು 180 ಎಂಎಲ್‌ಡಿಗೆ ಹೆಚ್ಚಿಸಿದ ನಂತರ ನೀರಿನಲ್ಲಿ ನೊರೆ ಕಾಣಿಸಿಕೊಂಡಿತ್ತು. ಇದರಿಂದ ಲಕ್ಷ್ಮೀಸಾಗರ, ಉದ್ದಪ್ಪನಹಳ್ಳಿ, ಜೋಡಿ ಕೃಷ್ಣಾಪುರ, ನರಸಾಪುರ ಹಾಗೂ ದೊಡ್ಡವಲ್ಲಭಿ ಕೆರೆಯ ನೀರು ಕಲುಷಿತಗೊಂಡಿತ್ತು.

ರಾಸಾಯನಿಕ ಕೈಗಾರಿಕೆಗಳು ಹೊರ ಬಿಡುವ ವಿಷಕಾರಿ ನೀರು ಹಾಗೂ ಅಪಾರ್ಟ್‌ಮೆಂಟ್‌ಗಳ ಕೊಳಚೆ ನೀರು ಬೆಂಗಳೂರಿನ ಬೆಳ್ಳಂದೂರು ಕೆರೆ ಸೇರುತ್ತಿದೆ. ಆ ನೀರನ್ನು ಎರಡು ಹಂತದಲ್ಲಿ ಸಂಸ್ಕರಿಸಿ ಜಿಲ್ಲೆಗೆ ಹರಿಸಲಾಗುತ್ತಿದೆ. ಮೂರನೇ ಹಂತದಲ್ಲಿ ಸಂಸ್ಕರಿಸಿದ ನಂತರವಷ್ಟೇ ನೀರು ಬಳಕೆಗೆ ಯೋಗ್ಯವೆಂದು ಭಾರತೀಯ ವಿಜ್ಞಾನ ಸಂಸ್ಥೆ ವರದಿ ನೀಡಿತ್ತು. ಕೆ.ಸಿ ವ್ಯಾಲಿ ಯೋಜನೆ ನೀರನ್ನು 3 ಹಂತದಲ್ಲಿ ಸಂಸ್ಕರಿಸಿ ಜಿಲ್ಲೆಯ ಕೆರೆಗಳಿಗೆ ಹರಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆಗಳು ನಡೆದಿದ್ದವು.

ಹಿಂದಿನ ಕಾಂಗ್ರೆಸ್ ಸರಕಾರವು 1,280 ಕೋಟಿ ಅಂದಾಜು ವೆಚ್ಚದ ಕೆ.ಸಿ ವ್ಯಾಲಿ ಯೋಜನೆ ಕೈಗೆತ್ತಿಕೊಂಡಿತ್ತು. 2016ರ ಮೇ 30ರಂದು ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಾಗಿತ್ತು. ಹಲವು ಅಡೆತಡೆಗಳ ನಡುವೆ ಎರಡು ವರ್ಷದಲ್ಲಿ ಕಾಮಗಾರಿ ಪೂರ್ಣಗೊಂಡಿತ್ತು. ಜಿಲ್ಲೆಯ 121 ಕೆರೆಗಳು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ 5 ಕೆರೆಗಳನ್ನು ತುಂಬಿಸಿ ಅಂತರ್ಜಲ ವೃದ್ಧಿಸುವುದು ಈ ಯೋಜನೆಯ ಉದ್ದೇಶ. ಜೂನ್ 2ರಿಂದ ಜಿಲ್ಲೆಗೆ ಪ್ರತಿನಿತ್ಯ ಸುಮಾರು 10 ಕೋಟಿ ಲೀಟರ್ ನೀರು ಹರಿದು ಬರುತ್ತಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News