ಎನ್ಎಂಸಿ ಕಾಯ್ದೆಗೆ ವಿರೋಧ: ಶನಿವಾರ ಖಾಸಗಿ ವೈದ್ಯರ ಮುಷ್ಕರ
ಬೆಂಗಳೂರು, ಜು.27: ಕೇಂದ್ರ ಸರಕಾರ ಜಾರಿ ಮಾಡಲು ಉದ್ದೇಶಿಸಿರುವ ನ್ಯಾಷನಲ್ ಮೆಡಿಕಲ್ ಕಮೀಷನ್ ಕಾಯ್ದೆ(ಎನ್ಎಂಸಿ)ವಿರೋಧಿಸಿ ಜು.28 ರಂದು ಎಲ್ಲ ಖಾಸಗಿ ವೈದ್ಯರು ಒಪಿಡಿ ಬಂದ್ ಮಾಡಿ ಮುಷ್ಕರಕ್ಕೆ ಕರೆ ನೀಡಿದ್ದಾರೆ.
ಈ ಸಂಬಂಧ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿರುವ ಸಂಘದ ಅಧ್ಯಕ್ಷ ಎಚ್.ಎನ್.ರವೀಂದ್ರ, ಕೇಂದ್ರ ಸರಕಾರವು ರಾಷ್ಟ್ರೀಯ ವೈದ್ಯಕೀಯ ಆಯೋಗದ ಶಿಫಾರಸ್ಸಿನ ಮಸೂದೆಯನ್ನು ಜಾರಿ ಮಾಡಲು ಮುಂದಾಗಿದೆ. ಇದನ್ನು ಖಂಡಿಸಿ ಭಾರತೀಯ ವೈದ್ಯಕೀಯ ಸಂಘದ ವತಿಯಿಂದ ಒಂದು ದಿನದ ಸಾಂಕೇತಿಕ ಮುಷ್ಕರಕ್ಕೆ ಕರೆ ನೀಡಲಾಗಿದೆ. ಹೀಗಾಗಿ, ಇಂದು ತುರ್ತು ಸೇವೆ ಹೊರತುಪಡಿಸಿ, ಬೇರೆ ಯಾವುದೇ ಹೊರರೋಗಿ ಚಿಕಿತ್ಸೆ ನಡೆಯುವುದಿಲ್ಲ ಎಂದು ಹೇಳಿದರು.
ಕೇಂದ್ರ ಸರಕಾರದ ನಡೆಯನ್ನು ಖಂಡಿಸಿ ಹಲವಾರು ಬಾರಿ ಹೋರಾಟ ನಡೆಸಿ, ಮನವಿ ಸಲ್ಲಿಸಿದ್ದರೂ ಸರಕಾರ ಮಸೂದೆಯನ್ನು ಜಾರಿ ಮಾಡಲು ಮುಂದಾಗಿದೆ. ವೈದ್ಯಕೀಯ ಶಿಕ್ಷಣ ಹಾಗೂ ವೈದ್ಯ ವೃತ್ತಿಯಲ್ಲಿ ಪಾರದರ್ಶಕತೆ ತರುವ ನೆಪದಲ್ಲಿ ಭಾರತೀಯ ವೈದ್ಯಕೀಯ ಪರಿಷತ್ತು(ಎಂಸಿಐ) ಅನ್ನು ವಿಸರ್ಜಿಸಿ, ಅದರ ಸ್ಥಾನಕ್ಕೆ ರಾಷ್ಟ್ರೀಯ ವೈದ್ಯಕೀಯ ಆಯೋಗ ರಚನೆ ಮಾಡಲು ಮುಂದಾಗಿದ್ದಾರೆ. ಆಯೋಗದ ಮೂಲಕ ಪಾರದರ್ಶಕತೆಯನ್ನು ಕಾಪಾಡಿಕೊಳ್ಳಲು ಯಾವುದೇ ಕಾರಣಕ್ಕೂ ಸಾಧ್ಯವಾಗುವುದಿಲ್ಲ ಎಂದು ಹೇಳಿದರು.
ನಾಳೆ ಬೆಳಗ್ಗೆ ರಾಜ್ಯಾದ್ಯಂತ ಎಲ್ಲ ಕಡೆಗಳಲ್ಲಿ ಬೆ.6 ರಿಂದ ಸಂಜೆ 6 ರವರೆಗೂ ಎಲ್ಲ ಒಪಿಡಿ ಸೇವೆ ನಿಲ್ಲಿಸಲಾಗುತ್ತದೆ. ಆದರೆ, ಸಾರ್ವಜನಿಕರಿಗೆ ತೊಂದರೆಯಾಗದಂತೆ ತುರ್ತು ಚಿಕಿತ್ಸೆ ವೇಳೆ ಸ್ಪಂದಿಸಲಾಗುತ್ತದೆ. ವೈದ್ಯರ ಮುಷ್ಕರದಿಂದಾಗಿ, ಸರಕಾರಿ ಆಸ್ಪತ್ರೆಯಲ್ಲಿ ಹೆಚ್ಚಿನ ರೋಗಿಗಳು ಹಾಜರಾಗುವ ಸಾಧ್ಯತೆಯಿದ್ದು, ಹೆಚ್ಚಿನ ವೈದ್ಯರನ್ನು ಕರ್ತವ್ಯಕ್ಕೆ ಹಾಜರು ಪಡಿಸಲು ಸರಕಾರ ಮುಂದಾಗಿದೆ.
ಸರಕಾರಿ ವೈದ್ಯರು-ಸಿಬ್ಬಂದಿಗೆ ರಜೆ ಇಲ್ಲ:ಆರೋಗ್ಯ ಇಲಾಖೆ ಸುತ್ತೋಲೆ
ಖಾಸಗಿ ಆಸ್ಪತ್ರೆಗಳ ಮುಷ್ಕರ ಹಿನ್ನೆಲೆಯಲ್ಲಿ ಸರಕಾರಿ ವೈದ್ಯರು ಮತ್ತು ವೈದ್ಯೇತರ ಸಿಬ್ಬಂದಿ ರಜೆಯ ಮೇಲೆ ತೆರಳದೆ ಕರ್ತವ್ಯ ನಿರ್ವಹಿಸಬೇಕು. ಇಲ್ಲವಾದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ.
ಎಲ್ಲ ಜಿಲ್ಲೆಗಳ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು, ಜಿಲ್ಲಾ ಶಸ್ತ್ರ ಚಿಕಿತ್ಸಕರು ತಮ್ಮ ಜಿಲ್ಲೆಯಲ್ಲಿನ ಎಲ್ಲ ಸರಕಾರಿ ಆಸ್ಪತ್ರೆಗಳು ಪೂರ್ಣಪ್ರಮಾಣದಲ್ಲಿ ಕಾರ್ಯ ನಿರ್ವಹಿಸುವಂತೆ ನಿರ್ದೇಶನ ನೀಡಲಾಗಿದೆ. ಅಲ್ಲದೆ, ಆಸ್ಪತ್ರೆಗೆ ಬರುವ ಎಲ್ಲ ಸಾರ್ವಜನಿಕರಿಗೆ ಸೂಕ್ತ ಚಿಕಿತ್ಸೆ ದೊರಕಿಸಿಕೊಡಬೇಕೆಂದು ಸುತ್ತೋಲೆಯಲ್ಲಿ ಸೂಚಿಸಲಾಗಿದೆ.