ಕಂದಾಯ ಗ್ರಾಮಗಳ ರಚನೆಯ ಪ್ರಕ್ರಿಯೆ ಬಗೆಹರಿಸಲು ಸಿಎಂ ಸೂಚನೆ

Update: 2018-07-30 15:10 GMT

ಬೆಂಗಳೂರು, ಜು.30: ಕಂದಾಯ ಗ್ರಾಮಗಳ ರಚನೆಯ ಪ್ರಕ್ರಿಯೆಯನ್ನು ಆರು ತಿಂಗಳಲ್ಲಿ ಬಗೆಹರಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಕರ್ನಾಟಕ ಭೂ ಸುಧಾರಣೆ ಕಾಯ್ದೆಯ ಕಲಂ 79 ಎ, 79 ಬಿ ಗಳಿಗೆ ಸುಧಾರಣೆ ಅಥವಾ ಬದಲಾಯಿಸುವ ಅಗತ್ಯ ಇದೆ ಎಂದು ತಿಳಿಸಿದ್ದಾರೆ.

ಸೋಮವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಅನೇಕ ಸಂದರ್ಭದಲ್ಲಿ ಇವು ನಿಜವಾದ ಭೂ ಮಾಲಕರಿಗೆ ತೊಂದರೆಯುಂಟು ಮಾಡುವ ಸಂಭವವಿದೆ. ಈ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವಂತೆ ತಿಳಿಸಿದರು.

ವಿವಿಧ ಜಿಲ್ಲೆಗಳ ಮಳೆ, ಬಿತ್ತನೆ ಪ್ರಗತಿ ಮಾಹಿತಿ ಪಡೆದ ಮುಖ್ಯಮಂತ್ರಿ, ಪರಿಹಾರ ಕ್ರಮಗಳನ್ನು ಎನ್‌ಡಿಆರ್‌ಎಫ್ ಮಾರ್ಗಸೂಚಿಗಳನ್ವಯ ಕೈಗೊಳ್ಳಬೇಕು. ಅಲ್ಲದೆ, ಕುಡಿಯುವ ನೀರಿನ ಸಮಸ್ಯೆಗೆ ಟ್ಯಾಂಕರ್ ಮೂಲಕ ಪೂರೈಕೆಗೆ ಪರ್ಯಾಯ ಯೋಜನೆಯಿದೆಯೆ ಎಂದು ಪರಿಶೀಲಿಸಿ, ಪ್ರಸ್ತಾವನೆ ಸಲ್ಲಿಸುವಂತೆ ನಿರ್ದೇಶನ ನೀಡಿದರು.

ರಾಜ್ಯದಲ್ಲಿ ಮಳೆ ಕೊರತೆ ಆಗಿರುವ 12 ಜಿಲ್ಲೆಗಳನ್ನು ಗುರುತಿಸಲಾಗಿದ್ದು, ಅಲ್ಲಿ ಬರ ಪರಿಸ್ಥಿತಿ ಎದುರಾದರೆ ಕೈಗೊಳ್ಳಬೇಕಾದ ಪರಿಹಾರ ಕ್ರಮಗಳಿಗೆ ಯೋಜನೆ ರೂಪಿಸಬೇಕು. ರೈತರಿಗೆ ಸರಕಾರ ಇಷ್ಟು ಬೆಂಬಲ ನೀಡುತ್ತಿದ್ದರೂ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಕ್ಕೆ ಕಾರಣ ಏನು? ಎಂಬ ಬಗ್ಗೆ ಮಾಹಿತಿ ನೀಡುವಂತೆ ಮುಖ್ಯಮಂತ್ರಿ ತಿಳಿಸಿದರು.

ರಾಜ್ಯದಲ್ಲಿ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳಡಿ 67 ಲಕ್ಷಕ್ಕೂ ಹೆಚ್ಚು ಜನರು ಪಿಂಚಣಿ ಪಡೆಯುತ್ತಿದ್ದು, ಈ ಎಲ್ಲ ಯೋಜನೆಗಳಡಿ ನೇರವಾಗಿ ಫಲಾನುಭವಿ ಗಳ ಖಾತೆಗೆ ಪಿಂಚಣಿ ಜಮೆ ಮಾಡಲು ಇರುವ ತಾಂತ್ರಿಕ ಅಡಚಣೆಗಳನ್ನು ನಿವಾರಿಸಿ, ಆಧಾರ್ ಲಿಂಕ್ ಮಾಡಿ, 3 ತಿಂಗಳೊಳಗೆ ಸಮಸ್ಯೆ ಬಗೆಹರಿಸಿ, ಜಿಲ್ಲಾಧಿಕಾರಿಗಳು ಪ್ರತಿ ವಾರ ಈ ಬಗ್ಗೆ ಪ್ರಗತಿ ಪರಿಶೀಲನೆ ನಡೆಸುವಂತೆ ಕುಮಾರಸ್ವಾಮಿ ಹೇಳಿದರು.

ಪರಿಶಿಷ್ಟ ಜಾತಿ, ಪಂಗಡದವರಿಗೆ ಎಲ್ಲ ಗ್ರಾಮಗಳಲ್ಲಿ ಆದ್ಯತೆಯ ಮೇರೆಗೆ ಸ್ಮಶಾನ ಸೌಲಭ್ಯ ಕಲ್ಪಿಸಿಕೊಡಬೇಕು. 94 ಸಿ ಮತ್ತು 94 ಸಿಸಿ ಪ್ರಕರಣಗಳ ಹಕ್ಕು ಪತ್ರಗಳೊಂದಿಗೆ ಖಾತಾವನ್ನೂ ವಿತರಿಸುವುದು ಕಡ್ಡಾಯ. ಮತ್ತೊಮ್ಮೆ ಜನರು ಸರಕಾರಿ ಕಚೇರಿಗಳಿಗೆ ಇದಕ್ಕಾಗಿ ಅಲೆದಾಡುವಂತಾಗಬಾರದು ಎಂದು ಮುಖ್ಯಮಂತ್ರಿ ನಿರ್ದೇಶನ ನೀಡಿದರು.

ಅರಣ್ಯ ಹಕ್ಕು ಕಾಯಿದೆಯಡಿ ಅರ್ಜಿಗಳ ವಿಲೇವಾರಿ ತ್ವರಿತಗೊಳಿಸುವ ನಿಟ್ಟಿನಲ್ಲಿ ಕಾಯಿದೆ ತಿದ್ದುಪಡಿಗೆ ಪ್ರಸ್ತಾವನೆ ಸಲ್ಲಿಸುವಂತೆ ಸಮಾಜ ಕಲ್ಯಾಣ ಇಲಾಖೆಗೆ ಸೂಚಿಸಿದರು. ಇದೇ ವೇಳೆ ಪೋಡಿ ಪ್ರಕರಣಗಳ ವಿಲೇವಾರಿಗೆ ಸರ್ವೇಯರುಗಳ ಕೊರತೆ ಕುರಿತು ಕುಮಾರಸ್ವಾಮಿ ಚರ್ಚಿಸಿದರು.

ಬೆಳೆ ಸಮೀಕ್ಷೆ ಕುರಿತು ಮೊಬೈಲ್ ಆಪ್‌ನಲ್ಲಿ ರೈತರೇ ತಾವು ಬೆಳೆದ ಮಾಹಿತಿಯನ್ನು ಅಪ್ಲೋಡ್ ಮಾಡುವುದನ್ನು ಪ್ರೋತ್ಸಾಹಿಸುವಂತೆ ಸೂಚಿಸಿದರು. ಮಂಡ್ಯ, ರಾಮನಗರ, ಬೆಳಗಾವಿ ಜಿಲ್ಲೆಗಳಲ್ಲಿ ಕಂದಾಯ ಅದಾಲತ್‌ನಲ್ಲಿ ಸ್ವೀಕರಿಸಲಾಗಿರುವ ಅರ್ಜಿಗಳ ಪೈಕಿ, ವಿಲೇ ಆಗದೆ ಬಾಕಿ ಇರುವ ಅರ್ಜಿ ಸಂಖ್ಯೆ ಹೆಚ್ಚಿದ್ದು, ಒಂದು ತಿಂಗಳೊಳಗೆ ಅರ್ಜಿಗಳನ್ನು ವಿಲೇವಾರಿ ಮಾಡಲು ಅವರು ಸೂಚಿಸಿದರು. ಕೊಪ್ಪಳ ಜಿಲ್ಲೆಯಲ್ಲಿ 2 ಬಾರಿ ಪಿಂಚಣಿ ಅದಾಲತ್ ನಡೆಸಿದ್ದರೂ ಯಾವುದೇ ಅರ್ಜಿ ಸ್ವೀಕಾರವಾಗಿಲ್ಲ ಎಂಬ ಬಗ್ಗೆ ಮಾಹಿತಿ ಪಡೆದ ಮುಖ್ಯಮಂತ್ರಿ, ಚಾಮರಾಜನಗರ, ಬೆಂಗಳೂರು ನಗರ, ಬೆಳಗಾವಿ ಜಿಲ್ಲೆಗಳಲ್ಲಿ ಬಾಕಿ ಇರುವ ಅರ್ಜಿಗಳನ್ನು ಶೀಘ್ರವಾಗಿ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ವಿದ್ಯಾರ್ಥಿನಿಲಯಗಳ ನಿವೇಶನಗಳ ಮಂಜೂರಾತಿಗೆ ಸಂಬಂಧಿಸಿದಂತೆ, ಬಾಕಿ ಇರುವ ಪ್ರಕರಣಗಳನ್ನು ಶೀಘ್ರವಾಗಿ ವಿಲೇವಾರಿ ಮಾಡುವಂತೆ ಸೂಚಿಸಿದರು. ಈ ಕೆಲಸವನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಮುಖ್ಯಮಂತ್ರಿ ತಿಳಿಸಿದರು.

14 ತಾಲೂಕುಗಳಲ್ಲಿ ಮಿನಿ ವಿಧಾನಸೌಧ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು. ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆಯಡಿ ತ್ವರಿತವಾಗಿ ಪ್ರಗತಿ ಸಾಧಿಸಬೇಕು. ನಿಗದಿಪಡಿಸಿರುವ ಅನುದಾನದ ಪೈಕಿ 30.22 ಕೋಟಿ ರೂ.ಗಳ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಕುಮಾರಸ್ವಾಮಿ ತಿಳಿಸಿದರು.
ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ರಾಜ್ಯವು ಬಯಲು ಬಹಿರ್ದೆಸೆ ಮುಕ್ತ ಎಂದು ಘೋಷಿಸಲು 10 ಜಿಲ್ಲೆಗಳು ಬಾಕಿ ಉಳಿದಿವೆ. ಅಕ್ಟೋಬರ್ 2 ರೊಳಗೆ ಎಲ್ಲ ಜಿಲ್ಲೆಗಳಲ್ಲಿ ನಿಗದಿತ ಶೌಚಾಲಯ ನಿರ್ಮಾಣ ಕಾರ್ಯವನ್ನು ಮುಕ್ತಾಯಗೊಳಿಸಬೇಕು. ಅಲ್ಲದೆ, ಶೌಚಾಲಯಗಳ ಬಳಕೆಗೂ ಉತ್ತೇಜನ ನೀಡುವಂತೆ ಮುಖ್ಯಮಂತ್ರಿ ಹೇಳಿದರು.

ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಶಾಲಾ ಕಾಂಪೌಂಡ್, ಅಂಗನವಾಡಿ ಕಟ್ಟಡ ಮುಂತಾದ ಕೆಲಸಗಳನ್ನು ಕೈಗೊಳ್ಳಲು ಅವಕಾಶವಿದ್ದು, ಮಾನವ ದಿನಗಳನ್ನು ಸೃಜಿಸುವಂತೆ ಅಧಿಕಾರಿಗಳಿಗೆ ಕುಮಾರಸ್ವಾಮಿ ಸೂಚನೆ ನೀಡಿದರು.

ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಪರಿಹಾರ ನೀಡುವಾಗ ವಿಧಿ ವಿಜ್ಞಾನ ಪ್ರಯೋಗಾಲಯ ವರದಿ ವಿಳಂಬವಾಗುತ್ತಿದ್ದಲ್ಲಿ ಕೃಷಿ ಇಲಾಖೆ ಕಾರ್ಯದರ್ಶಿಗಳ ಮುಖಾಂತರ ಶೀಘ್ರವೇ ವರದಿ ತರಿಸಿಕೊಳ್ಳಲು ಕ್ರಮ ಕೈಗೊಳ್ಳಲು ಅವಕಾಶವಿದೆ. ಆದುದರಿಂದ, ರೈತರ ಆತ್ಮಹತ್ಯೆ ಕುರಿತು ಉಪವಿಭಾಗಾಧಿಕಾರಿಗಳ ಅಧ್ಯಕ್ಷತೆಯ ಸಮಿತಿ ತೀರ್ಮಾನ ಕೈಗೊಂಡು, ವಿಧಿ ವಿಜ್ಞಾನ ಪ್ರಯೋಗಾಲಯದಿಂದ ಶೀಘ್ರವೇ ವರದಿ ತರಿಸಿಕೊಂಡು ಪರಿಹಾರ ವಿತರಿಸಬೇಕು.
-ಎಚ್.ಡಿ.ಕುಮಾರಸ್ವಾಮಿ, ಮುಖ್ಯಮಂತ್ರಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News