ಬೆಂಗಳೂರು: ಸಚಿವರ ಪುತ್ರನ ಮನೆಯಲ್ಲಿ ಕಳವು
Update: 2018-07-31 13:16 GMT
ಬೆಂಗಳೂರು, ಜು.31: ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಪುತ್ರನ ಮನೆಯಲ್ಲಿ ಕಳ್ಳತನ ನಡೆದಿರುವ ಪ್ರಕರಣ ಇಲ್ಲಿನ ಸದಾಶಿವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.
ಸದಾಶಿವನಗರದ 10ನೇ ಮುಖ್ಯ ರಸ್ತೆಯಲ್ಲಿ ಬಾಡಿಗೆ ಮನೆಯಲ್ಲಿದ್ದ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಅವರ ಪುತ್ರ ಪ್ರಶಾಂತ್ ದೇಶಪಾಂಡೆ ಮನೆಯಲ್ಲಿ ಕಳ್ಳತನ ನಡೆದಿದೆ ಎಂದು ತಿಳಿದುಬಂದಿದೆ.
ದುಷ್ಕರ್ಮಿಗಳು ಮನೆಯೊಳಗೆ ನುಗ್ಗಿ ಲ್ಯಾಪ್ಟಾಪ್, 500 ಗ್ರಾಂ ತೂಕದ ಬೆಳ್ಳಿಯ ವಿಗ್ರಹ, ಎರಡು ಮೊಬೈಲ್ ಕಳವು ಮಾಡಿ ಮನೆಯ ಹಿಂಬಾಗಿಲಿನಿಂದ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಘಟನೆ ಸಂಬಂಧ ಪ್ರಶಾಂತ್, ಸದಾಶಿವನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಮನೆ ಮುಂದಿನ ಸಿಸಿಟಿವಿ ದೃಶ್ಯಗಳನ್ನು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.