ಉ.ಕರ್ನಾಟಕದ ಅಭಿವೃದ್ಧಿಗೆ ಸುವರ್ಣಸೌಧದ ಸಮರ್ಥ ಬಳಕೆ: ಡಿ.ಕೆ.ಶಿವಕುಮಾರ್

Update: 2018-08-01 13:10 GMT

ಬೆಂಗಳೂರು, ಆ.1: ಉತ್ತರ ಕರ್ನಾಟಕವನ್ನು ಸರ್ವತೋಮುಖವಾಗಿ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಬೆಳಗಾವಿಯಲ್ಲಿರುವ ಸುವರ್ಣ ಸೌಧವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲಾಗುವುದು ಎಂದು ವೈದ್ಯಕೀಯ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದರು.

ಬುಧವಾರ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಮಾಜಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ನಗರದ ಕೆಇಬಿ ಎಂಜಿನಿಯರ್ಸ್‌ ಸಂಘದ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕರ್ತರ ಸ್ಫೂರ್ತಿ ಸಮಾವೇಶದಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಸುವರ್ಣಸೌಧ ಕೇವಲ ಅಧಿವೇಶನಕ್ಕೆ ಮಾತ್ರ ಬಳಕೆಯಾಗುತ್ತಿತ್ತು. ಮುಂದಿನ ದಿನಗಳಲ್ಲಿ ಉತ್ತರ ಕರ್ನಾಟಕದ ಭಾಗದ ಜನತೆ ಹಾಗೂ ಸರಕಾರದ ನಡುವೆ ಸಂಪರ್ಕ ಕಲ್ಪಿಸುವ, ಸೌಲಭ್ಯಗಳು ಸುಲಭವಾಗಿ ಎಟಕುವಂತೆ ಮಾಡಲು ಸುವರ್ಣ ಸೌಧವನ್ನು ಬಳಸಿಕೊಳ್ಳಲಾಗುವುದು ಎಂದು ಅವರು ಹೇಳಿದರು.

ರಾಜ್ಯದಲ್ಲಿ ಸಕ್ಕರೆ ಕಾರ್ಖಾನೆ, ನೀರಾವರಿ ಪ್ರದೇಶಗಳು ಉತ್ತರ ಕರ್ನಾಟಕ ಭಾಗದಲ್ಲಿದೆ. ಹೀಗಾಗಿ ಉ.ಕರ್ನಾಟಕವನ್ನು ನಿರ್ಲಕ್ಷಿಸುವ ಪ್ರಶ್ನೆಯೆ ಇಲ್ಲ. ಹೀಗಾಗಲೆ ಉತ್ತರ ಕರ್ನಾಟಕದ ಜನತೆ ವಲಸೆಯನ್ನು ತಪ್ಪಿಸುವ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News