ಬೈಕಂಪಾಡಿ ಟ್ರಕ್ ಟರ್ಮಿನಲ್‌ಗೆ ಶೀಘ್ರ ಚಾಲನೆ: ಸಚಿವ ಖಾದರ್

Update: 2018-08-01 15:05 GMT

ಮಂಗಳೂರು, ಆ.1: ಬೈಕಂಪಾಡಿಯಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಪ್ರಸ್ತಾವಿತ ಟ್ರಕ್ ಟರ್ಮಿನಲ್ ಕಾಮಗಾರಿಗೆ ರಾಜ್ಯ ಸರಕಾರ ಶೀಘ್ರವೇ ಮಂಜೂರಾತಿ ನೀಡಲಿದೆ ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಕೆನರಾ ಸಣ್ಣ ಕೈಗಾರಿಕಾ ಒಕ್ಕೂಟದ ವತಿಯಿಂದ ಬುಧವಾರ ನಡೆದ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಪಣಂಬೂರು ಎನ್‌ಎಂಪಿಟಿ, ಬೈಕಂಪಾಡಿ ಮತ್ತು ಸುರತ್ಕಲ್ ಸುತ್ತಮುತ್ತಲ ಪ್ರದೇಶಗಳಲ್ಲಿ ಸಾಕಷ್ಟು ಸಣ್ಣ ಹಾಗೂ ಬೃಹತ್ ಕೈಗಾರಿಕೆಗಳು ಕಾರ್ಯಾಚರಿ ಸುತ್ತಿವೆ. ಇದರಿಂದಾಗಿ ಈ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಲಾರಿ, ಟ್ಯಾಂಕರ್ ಸಹಿತ ಘನ ವಾಹನಗಳು ಸಂಚರಿಸುತ್ತಿವೆ. ಆದರೆ ಇವುಗಳಿಗೆ ನಿಲ್ಲಲು ಟ್ರಕ್ ಟರ್ಮಿಲ್ ಇಲ್ಲದಿರುವುದರಿಂದ ಎಲ್ಲೆಂದೆರಲ್ಲಿ ಲಾರಿಗಳು ನಿಂತು ಸಾರ್ವಜನಿಕರ ಸುಗಮ ಸಂಚಾರಕ್ಕೆ ತೊಂದರೆಯಾಗುತ್ತಿರುವ ಬಗ್ಗೆ ರಾಜ್ಯ ಸರಕಾರದ ಗಮನಕ್ಕೆ ಬಂದಿದೆ. ಹಿಂದಿನ ಸರಕಾರದ ಅವಧಿಯಲ್ಲೇ ಬೈಕಂಪಾಡಿ ಸಮೀಪ ಟ್ರಕ್ ಟರ್ಮಿನಲ್ ಸ್ಥಾಪನೆಗೆ ಪ್ರಸ್ತಾವನೆ ರಾಜ್ಯ ಸರಕಾರಕ್ಕೆ ಬಂದಿದೆ ಎಂದು ಸಚಿವ ಯು.ಟಿ.ಖಾದರ್ ತಿಳಿಸಿದರು.

ಈಗಾಗಲೇ ಅಧಿಕಾರಿಗಳು ಭೇಟಿ ನೀಡಿ ಟ್ರಕ್ ಟರ್ಮಿನಲ್ ಸ್ಥಾಪನೆಗೆ ಜಾಗ ಗುರುತಿಸಿದ್ದು, ಈ ಸಂಬಂಧ ಕಡತ ಹಣಕಾಸು ಇಲಾಖೆಯಲ್ಲಿದೆ. ಶೀಘ್ರವೇ ಇದಕ್ಕೆ ಅನಮೋದನೆ ನೀಡಿ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಸಚಿವ ಖಾದರ್ ಹೇಳಿದರು.

ಕೈಗಾರಿಕಾ ಪ್ರದೇಶದಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ಸಮೀಪದಲ್ಲೇ ಕಡಿಮೆ ವೆಚ್ಚದಲ್ಲಿ ಮನೆ ನಿರ್ಮಿಸಿ ಒದಗಿಸುವ ಯೋಜನೆ ರಾಜ್ಯ ಸರಕಾರಕ್ಕಿದೆ. ಶೀಘ್ರವೇ ಇದನ್ನು ಜಾರಿಗೆ ತರಲಾಗುವುದು ಎಂದ ಸಚಿವ ಖಾದರ್, ಜಿಲ್ಲೆಯ ಬೃಹತ್ ಹಾಗೂ ಸಣ್ಣ ಕೈಗಾರಿಕೆಗಳ ಅಭಿವೃದ್ಧಿಗೆ ಉತ್ತೇಜನ ನೀಡಿ, ದೂರದೃಷ್ಟಿತ್ವದ ಯೋಜನೆ ಜಾರಿಗೆ ತರಲು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಉನ್ನತ ಮಟ್ಟದ ಸಭೆ ನಡೆಸಲಾಗುವುದು. ಕೈಗಾರಿಕೆಗಳ ಅಭಿವೃದ್ಧಿಯೊಂದಿಗೆ ಪರಿಸರ ಸಂರಕ್ಷಣೆಗೂ ಒತ್ತು ನೀಡಲಾಗುವುದು ಎಂದು ಸಚಿವ ಖಾದರ್ ತಿಳಿಸಿದರು.

ಬೈಕಂಪಾಡಿ ಕೈಗಾರಿಕಾ ಪ್ರದೇಶದ ಕಾರ್ಮಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಇಲ್ಲಿ ಇಂದಿರಾ ಕ್ಯಾಂಟೀನ್ ಸ್ಥಾಪಿಸುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಸಚಿವ ಯು.ಟಿ. ಖಾದರ್ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಕೆನರಾ ಸಣ್ಣ ಕೈಗಾರಿಕಾ ಸಂಘದಿಂದ ಬೈಕಂಪಾಡಿ ಕೈಗಾರಿಕಾ ಟೌನ್‌ಶಿಪ್ ಪ್ರಾಧಿಕಾರ ಸ್ಥಾಪನೆ ಸೇರಿದಂತೆ ವಿವಿಧ ಬೇಡಿಕೆಗಳ ಬಗ್ಗೆ ಸಚಿವರಿಗೆ ಮನವಿ ಸಲ್ಲಿಸಲಾಯಿತು. ಸ್ಥಳೀಯ ಕಾರ್ಪೋರೇಟರ್ ಪುರುಷೋತ್ತಮ ಚಿತ್ರಾಪುರ, ಕೆನರಾ ಸಣ್ಣ ಕೈಗಾರಿಕಾ ಸಂಘದ ಗೌರವ್ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News