ಆ.6 ರಂದು ದಲಿತ ಹಕ್ಕುಗಳ ರಕ್ಷಣಾ ಮಹಾ ರ‍್ಯಾಲಿ

Update: 2018-08-01 16:03 GMT

ಬೆಂಗಳೂರು, ಆ.1: ಕರ್ನಾಟಕ ವತಿಯಿಂದ ದಲಿತ ಹಕ್ಕುಗಳ ರಕ್ಷಣೆ ಮಾಡಬೇಕು ಎಂದು ಆಗ್ರಹಿಸಿ ಆ.6 ರಂದು ದಲಿತ ಹಕ್ಕುಗಳ ರಕ್ಷಣಾ ಮಹಾರ್ಯಾಲಿಯನ್ನು ಹಮ್ಮಿಕೊಳ್ಳಲಾಗಿದೆ.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿ ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್, ಅಂದು ನಗರದ ಪುರಭವನದಿಂದ ಸ್ವಾತಂತ್ರ ಉದ್ಯಾನವನದವರೆಗೂ ನೂರಾರು ಸಂಖ್ಯೆಯಲ್ಲಿ ಬೃಹತ್ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಈ ಸಂದರ್ಭದಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಗಳನ್ನು ದಲಿತರ ಹಕ್ಕುಗಳನ್ನು ಸಂರಕ್ಷಣೆ ಮಾಡಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗುತ್ತದೆ ಎಂದರು.

ದಲತರ ರಕ್ಷಣೆಗಾಗಿ ರೂಪಿಸಿದ್ದ ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯನ್ನ ಸುಪ್ರೀಂಕೋರ್ಟ್ ತೀರ್ಪು ನೀಡುವ ಮೂಲಕ ದುರ್ಬಲಗೊಳಿಸಲು ಮುಂದಾಗಿದೆ. ಕೇಂದ್ರ ಸರಕಾರ ಹಲವಾರು ವಿಷಯಗಳಿಗೆ ಸಂಬಂಧಿಸಿದಂತೆ ಸುಗ್ರೀವಾಜ್ಞೆ ಹೊರಡಿಸಿ ಕಾನೂನು ತಿದ್ದುಪಡಿ ಮಾಡಿದೆ. ಆದರೆ, ದಲಿತರ ಮೇಲಿನ ದೌರ್ಜನ್ಯ ತಡೆಗೆ ಇರುವ ಕಾನೂನಿಗೆ ತಿದ್ದುಪಡಿ ಮಾಡಲು ಮುಂದಾಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪರಿಶಿಷ್ಟ ಜಾತಿಗಳ ನೌಕರರ ಭಡ್ತಿ ವಿಚಾರಕ್ಕೆ ಸಂಬಂಧಿಸಿದಂತೆ ರಾಷ್ಟ್ರಪತಿ ಅಂಕಿತ ಹಾಕಿರುವ ಕಾಯ್ದೆಯನ್ನು ಜಾರಿ ಮಾಡಲು ಕರ್ನಾಟಕ ಸರಕಾರ ಮೀನಾಮೇಷ ಎಣಿಸುತ್ತಿದೆ. ಸುಪ್ರೀಂಕೋರ್ಟ್‌ನಲ್ಲಿ ಪ್ರಕರಣ ನಡೆಯುತ್ತಿರುವುದನ್ನು ನೆಪವಾಗಿಸಿಕೊಂಡು ಹಿಂಭಡ್ತಿ ಸಮರ್ಥಿಸಿಕೊಳ್ಳಲು ಮುಂದಾಗಿರುವ ಕ್ರಮ ಖಂಡನೀಯ ಎಂದು ಹೇಳಿದರು.

ಭಡ್ತಿ ಮೀಸಲಾತಿಗೆ ಸಂಬಂಧಿಸಿದಂತೆ ಸಂವಿಧಾನದ 177 ನೆ ತಿದ್ದುಪಡಿ ಮಸೂದೆ ರಾಜ್ಯಸಭೆಯಲ್ಲಿ ಅಂಗೀಕಾರಗೊಂಡಿದೆ. ಅದನ್ನು ಲೋಕಸಭೆಯಲ್ಲಿ ಮಂಡಿಸಿ, ಅನುಮೋದನೆ ನೀಡಬೇಕು ಎಂದ ಅವರು, ದಲಿತರಿಗೆ, ದಮನಿತರಿಗೆ, ಶೋಷಿತರಿಗೆ ಸಿಗಬೇಕಾದ ಸೌಲಭ್ಯಗಳನ್ನು ನ್ಯಾಯಾಲಯಗಳ ಮೂಲಕ ಪಡೆಯಬೇಕಾದ ಸ್ಥಿತಿ ನಿರ್ಮಾಣವಾಗಿರುವುದು ಶೋಚನೀಯ ಎಂದು ಅವರು ತಿಳಿಸಿದರು.

ರಾಷ್ಟ್ರಮಟ್ಟದಲ್ಲಿ ಕೇಂದ್ರ ಸರಕಾರ ಎಸ್ಸಿ-ಎಸ್ಟಿ, ಅರಣ್ಯವಾಸಿಗಳ ವಿಶೇಷ ಘಟಕ ಯೋಜನೆ ಕಾಯ್ದೆ ರೂಪಿಸಿ, ಜನಸಂಖ್ಯೆಗೆ ಅನುಗುಣವಾಗಿ ಹಣ ಕಾಯ್ದಿರಿಸಬೇಕು. ಕರ್ನಾಟಕ ಶಾಶ್ವತ ಹಿಂದುಳಿದ ಜಾತಿಗಳ ಆಯೋಗದ ಸಮೀಕ್ಷೆ ವರದಿಯನ್ನು ಸರಕಾರ ಅಂಗೀಕರಿಸಿ, ಜಾರಿ ಮಾಡಬೇಕು. ನಿವೇಶನ ರಹಿತ ಬಡವರಿಗೆ ಮನೆ ಹಾಗೂ ಮೂಲಭೂತ ಸೌಲಭ್ಯಗಳನ್ನು ನೀಡಬೇಕು. ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಪ್ರಮಾಣವನ್ನು ನಿಗದಿಗೊಳಿಸಬೇಕು. ಗುತ್ತಿಗೆ ಪದ್ಧತಿಯನ್ನು ರದ್ದು ಮಾಡಿ, ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು. ಸರಕಾರದ ಎಲ್ಲ ಇಲಾಖೆಗಳಲ್ಲಿ ಹೊರಗುತ್ತಿಗೆ ನಿಷೇಧಿಸಬೇಕು ಅಥವಾ ರೋಸ್ಟರ್ ಪದ್ಧತಿ ಅಳವಡಿಸಬೇಕು. ಉನ್ನತ ಶಿಕ್ಷಣ ಖಾಸಗೀಕರಣ ನಿಲ್ಲಿಸಬೇಕು. ಎಲ್ಲ ಹಂತದಲ್ಲಿ ಉಚಿತ ಶಿಕ್ಷಣ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಅವರು ಆಗ್ರಹಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News