×
Ad

ಹೊಟೇಲ್ ಉದ್ಯಮದ ಮೂಲಕ ಪ್ರವಾಸೋದ್ಯಮ ಅಭಿವೃದ್ಧಿಗೆ ಮುಖ್ಯಮಂತ್ರಿ ಸೂಚನೆ

Update: 2018-08-02 20:09 IST

ಬೆಂಗಳೂರು, ಆ.2: ಹೊಟೇಲ್ ಉದ್ಯಮದ ಮೂಲಕ ಪ್ರವಾಸೋದ್ಯಮ ಅಭಿವೃದ್ಧಿಪಡಿಸಲು ಅಗತ್ಯವಿರುವ ಎಲ್ಲ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೂಚನೆ ನೀಡಿದರು.

ಗುರುವಾರ ಗೃಹ ಕಚೇರಿ ಕೃಷ್ಣಾದಲ್ಲಿ ಕರ್ನಾಟಕ ಪ್ರದೇಶ ಹೊಟೇಲ್ ಮತ್ತು ಉಪಾಹಾರ ಮಂದಿರಗಳ ಸಂಘದ ಪದಾಧಿಕಾರಿಗಳೊಂದಿಗೆ ನಡೆಸಿದ ಚರ್ಚೆ ವೇಳೆ ಈ ಸೂಚನೆ ನೀಡಿದರು.

ರಾಜ್ಯದಲ್ಲಿ ಹೊಟೇಲ್ ಉದ್ಯಮದ ಜೊತೆಗೆ ಪ್ರವಾಸೋದ್ಯಮಕ್ಕೂ ವಿಫುಲ ಅವಕಾಶಗಳಿವೆ. ಸಾಂಸ್ಕೃತಿಕ ರಾಜಧಾನಿ ಎನಿಸಿರುವ ಮೈಸೂರು, ವಾಣಿಜ್ಯ ಕೇಂದ್ರವೆನಿಸಿದ ಹುಬ್ಬಳ್ಳಿ, ಕರಾವಳಿಯ ಮಂಗಳೂರು-ಉಡುಪಿ, ಮಲೆನಾಡಿನ ಶಿವಮೊಗ್ಗ, ಘಟ್ಟ ಪ್ರದೇಶವಾದ ಕೊಡಗು ಸೇರಿದಂತೆ, ಉತ್ತರ ಕರ್ನಾಟಕದ ಬೆಳಗಾವಿ, ಬೀದರ್, ಗುಲ್ಬರ್ಗ ಮತ್ತಿತರ ಜಿಲ್ಲೆಗಳಲ್ಲೂ ಅನೇಕ ಪ್ರವಾಸಿ, ಐತಿಹಾಸಿಕ ಮತ್ತು ಧಾರ್ಮಿಕ ಪ್ರೇಕ್ಷಣೀಯ ಸ್ಥಳಗಳಿವೆ. ಇವುಗಳ ಅಭಿವೃದ್ಧಿಯನ್ನು ಆದ್ಯತೆ ಮೇರೆಗೆ ಕೈಗೊಳ್ಳಲು ಅವರು ಸೂಚಿಸಿದರು.

ಶಿವಮೊಗ್ಗವನ್ನು ಕೇಂದ್ರವಾಗಿಟ್ಟುಕೊಂಡು ಸುತ್ತಲಿನ ಉತ್ತರಕನ್ನಡ, ಉಡುಪಿ ಜಿಲ್ಲೆಗಳ ಪ್ರವಾಸಿ ತಾಣಗಳಲ್ಲಿ ಉತ್ತಮ ರಸ್ತೆ, ಪ್ರಯಾಣ ಮತ್ತು ವಸತಿಗೆ ಉತ್ತಮ ವ್ಯವಸ್ಥೆ, ಮಾರ್ಗದರ್ಶಕರ(ಗೈಡ್‌ಗಳ) ನೇಮಕ ಮುಂತಾದ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಮತ್ತು ಸೂಕ್ತ ಮಾಹಿತಿಯನ್ನು ಪ್ರವಾಸಿಗರಿಗೆ ನೀಡುವ ಕಾರ್ಯಕ್ಕೆ ಹೆಚ್ಚಿನ ಒತ್ತು ನೀಡುವಂತೆಯೂ ಮುಖ್ಯಮಂತ್ರಿ ತಿಳಿಸಿದರು.

ಹೊಟೇಲ್‌ಗಳ ಪರವಾನಿಗೆ ನವೀಕರಣ ಹಾಗೂ ಬೆಂಗಳೂರು ನಗರದ ವಸತಿ ಬಡಾವಣೆಗಳ ಹೊಟೇಲ್‌ಗಳ ಪರವಾನಿಗೆ ನವೀಕರಣ ಸರಳೀಕರಿಸುವ ಬಗ್ಗೆ ಪರಿಶೀಲಿಸುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದರು. ಸಭೆಯಲ್ಲಿ ಮುಖ್ಯಮಂತ್ರಿಯ ಆರ್ಥಿಕ ಸಲಹೆಗಾರ ಸುಬ್ರಮಣ್ಯಂ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News