ಮುರುಘಾ ಶರಣರ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್
ಬೆಂಗಳೂರು, ಆ.6: ಚಿತ್ರದುರ್ಗದ ಮುರುಘಾಮಠದ ಶಿವಮೂರ್ತಿ ಮುರುಘಾ ಶರಣರು ಹಾಗೂ ಮತ್ತಿತರರ ವಿರುದ್ಧ ಹೊಸದುರ್ಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿದ್ದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ಸೋಮವಾರ ರದ್ದುಪಡಿಸಿದೆ.
ಮಠ ನಡೆಸುತ್ತಿದ್ದ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದ ಪ್ರಶಾಂತ್ ಎಂಬುವರು ತಮ್ಮ ವಿರುದ್ಧ ಹೊಸದುರ್ಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ದಾಖಲಿಸಿದ್ದ ಕ್ರಿಮಿನಲ್ ಪ್ರಕರಣ ರದ್ದುಪಡಿಸುವಂತೆ ಕೋರಿ ಮುರುಘಾ ಶರಣರು ಹಾಗೂ ಮತ್ತಿತರರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್.ಬಿ.ಬೂದಿಹಾಳ್ ಅವರಿದ್ದ ನ್ಯಾಯಪೀಠ, ಈ ಆದೇಶ ಮಾಡಿತು.
ಅರ್ಜಿದಾರರ ವಿರುದ್ಧದ ದೂರಿನಲ್ಲಿ ಯಾವುದೇ ಸತ್ಯಾಂಶವಿಲ್ಲ. ಆರೋಪಗಳನ್ನು ಸಾಬೀತುಪಡಿಸುವಂತಹ ಯಾವುದೇ ಅಂಶಗಳು ದೂರಿನಲ್ಲಿ ಕಂಡು ಬರುತ್ತಿಲ್ಲ. ಹೀಗಾಗಿ, ಅರ್ಜಿದಾರರ ವಿರುದ್ಧದ ದೂರನ್ನು ರದ್ದುಪಡಿಸಲಾಗಿದೆ ಎಂದು ಆದೇಶದಲ್ಲಿ ನ್ಯಾಯಪೀಠ ತಿಳಿಸಿದೆ.
ಮಠ ನಡೆಸುತ್ತಿರುವ ವಿದ್ಯಾಪೀಠ ಶಾಲೆಯಲ್ಲಿ ಕೆಲವು ವರ್ಷಗಳ ಕಾಲ ಕೆಲಸ ಮಾಡಿದ್ದ ನನ್ನನ್ನು ಮತ್ತೊಂದು ಶಾಲೆಗೆ ವರ್ಗಾವಣೆ ಮಾಡಿ, ನಂತರ ಉದ್ಯೋಗದಲ್ಲಿ ಮುಂದುವರಿಸದೆ ವಂಚಿಸಲಾಗಿದೆ ಎಂದು ಆರೋಪಿಸಿ ಪ್ರಶಾಂತ್ ದೂರು ದಾಖಲಿಸಿದ್ದರು.