ಡಿ.ಕೆ.ಶಿವಕುಮಾರ್ ರ 'ಆಪರೇಷನ್ ಕಮಲ' ಹೇಳಿಕೆಯಲ್ಲಿ ಹುರುಳಿಲ್ಲ: ಯಡಿಯೂರಪ್ಪ
ಬೆಂಗಳೂರು, ಆ. 8: ‘ನಾವು ಯಾವುದೇ ಆಪರೇಷನ್ ಕಮಲ ಮಾಡುತ್ತಿಲ್ಲ. ಅದರ ಅಗತ್ಯವೂ ನಮಗಿಲ್ಲ. ಈ ಬಗ್ಗೆ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಹೇಳಿಕೆಯಲ್ಲಿ ಯಾವುದೇ ಹುರುಳಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ.
ಬುಧವಾರ ಇಲ್ಲಿನ ಡಾಲರ್ಸ್ ಕಾಲನಿಯಲ್ಲಿನ ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಮಂಗಳವಾರ ತುರ್ತು ಸಭೆಯ ಹಿನ್ನೆಲೆಯಲ್ಲಿ ಹೊಸದಿಲ್ಲಿಗೆ ಪ್ರಯಾಣ ಬೆಳಸಿದ್ದೆ. ಪ್ರಧಾನಿ ಮೋದಿ ಹಾಗೂ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಭೇಟಿಗೆ ಸಮಯ ನೀಡಿದ್ದರು. ಹೀಗಾಗಿ ಅವರನ್ನು ಭೇಟಿ ಮಾಡಿ ಬಂದಿದ್ದೇನೆ. ಪ್ರಸಕ್ತ ರಾಜ್ಯ ರಾಜಕಾರಣ ಹಾಗೂ ಲೋಕಸಭೆ ಚುನಾವಣೆ ಸಿದ್ದತೆಯ ಬಗ್ಗೆ ಚರ್ಚೆ ನಡೆಸಿದ್ದೇನೆ. ನಾವು ವಿಪಕ್ಷದ ಸ್ಥಾನದಲ್ಲಿಯೇ ಕುಳಿತು ಆಡಳಿತ ಪಕ್ಷದ ವಿರುದ್ಧ ನಮ್ಮ ಹೋರಾಟವನ್ನು ಮುಂದುವರೆಸುತ್ತೇವೆ ಎಂದ ಅವರು, ರಾಜ್ಯಕ್ಕೆ ಆಗಬೇಕಿರುವ ಕೆಲಸಗಳ ಬಗ್ಗೆ ಕೇಂದ್ರ ಸಚಿವರ ಬಳಿ ಮಾತಾಡಿದ್ದೇನೆ ಎಂದರು.
ಮುಂದಿನ ದಿನಗಳಲ್ಲಿ ನಾವು ಇಡಬೇಕಾದ ಹೆಜ್ಜೆಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ಹೀಗಾಗಿ ಗುರುವಾರದಿಂದ ಬೀದರ್ ಜಿಲ್ಲೆಯಿಂದ ಪ್ರವಾಸ ಆರಂಭಿಸುತ್ತಿದ್ದೇನೆ. ಅಲ್ಲದೆ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ನಾವು ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕಿದೆ. ಕೆಲವು ಜಿಲ್ಲೆಗಳಲ್ಲಿ ಬರದ ಪರಿಸ್ಥಿತಿ ಇದೆ. ಪ್ರವಾಸದ ವೇಳೆ ಇದೆಲ್ಲವನ್ನೂ ಅವಲೋಕಿಸುತ್ತೇವೆ ಎಂದು ಅವರು ಹೇಳಿದರು.
ಸಂತಾಪ: ಕರುಣಾನಿಧಿ ಸಿಎಂ ಆಗಿದ್ದ ವೇಳೆ ನನ್ನ ವಿಶೇಷ ಪ್ರಯತ್ನದಿಂದ ತಮಿಳುನಾಡಿನಲ್ಲಿ ಸರ್ವಜ್ಞ ಪ್ರತಿಮೆ ಸ್ಥಾಪನೆ ಆಯಿತು. ಅದಕ್ಕೆ ಅವರು ವಿಶೇಷ ಸಹಕಾರ ನೀಡಿದ್ದರು ಎಂದು ಸ್ಮರಿಸಿದ ಬಿಎಸ್ವೈ, ತಿರುವಳ್ಳುವರ್ ಪ್ರತಿಮೆ ವಿಧಾನಸೌಧಕ್ಕೆ ಕಳುಹಿಸಿಕೊಟ್ಟಿದ್ದರು. ರಾಜ್ಯದಲ್ಲಿ ತಿರುವಳ್ಳುವರ್ ಪ್ರತಿಮೆ ಸ್ಥಾಪನೆ ಮಾಡಲಾಯಿತು ಎಂದರು.
ಹಿರಿಯ ರಾಜಕಾರಣಿ, ತಮಿಳುನಾಡಿನ ಮಾಜಿ ಸಿಎಂ ಕರುಣಾನಿಧಿ ನಿಧನ ಮನಸ್ಸಿಗೆ ಅತೀವ ನೋವು ತಂದಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ, ಕುಟುಂಬ ಹಾಗೂ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ದೊರೆಯಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದರು.
ಕರುಣಾನಿಧಿಯವರು ನನ್ನೊಂದಿಗೆ ಮಾತನಾಡಿದ ರೀತಿ ಯಾವುದನ್ನೂ ನಾನು ಮರೆಯುವಂತಿಲ್ಲ. ಐದು ಬಾರಿ ಮುಖ್ಯಮಂತ್ರಿ ಆಗಿದ್ದವರು ಕರುಣಾನಿಧಿಯವರು, ಇದೀಗ ದೈವಾಧೀನರಾಗಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಬಿಎಸ್ವೈ ಸಂತಾಪ ಸೂಚಿಸಿದರು.