ಸಹಕಾರಿ ಸಂಘಗಳಲ್ಲಿನ 9,448 ಕೋಟಿ ರೂ. ಚಾಲ್ತಿ ಸಾಲ ಮನ್ನಾ: ಸಿಎಂ ಕುಮಾರಸ್ವಾಮಿ

Update: 2018-08-09 16:16 GMT

ಬೆಂಗಳೂರು, ಆ.9: ಸಹಕಾರಿ ಸಂಘಗಳಲ್ಲಿನ ಪ್ರಸಕ್ತ ಸಾಲಿನ ಜು.10 ವರೆಗಿನ ರೈತರ ಒಂದು ಲಕ್ಷ ರೂ.ವರೆಗಿನ ಚಾಲ್ತಿ ಸಾಲ ಸಂಪೂರ್ಣ ಮನ್ನಾ ಮಾಡಲು ಇಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು. 

ಗುರುವಾರ ವಿಧಾನಸೌಧದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಜಂಟಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸಹಕಾರ ಸಂಘಗಳಲ್ಲಿನ ಒಟ್ಟು 10,734 ಕೋಟಿ ರೂ.ಸಾಲದಲ್ಲಿ 9448 ಕೋಟಿ ರೂ. ಸಾಲ ಮನ್ನಾ ಆಗಲಿದೆ. ಇದರಿಂದ ಸಹಕಾರಿ ಸಂಘಗಳಲ್ಲಿ ಸದಸ್ಯರಾಗಿರುವ 20.38 ಲಕ್ಷ ರೈತರಿಗೆ ಅನುಕೂಲವಾಗಲಿದೆ ಎಂದರು.

ರೈತರ ಸಾಲ ಮನ್ನಾ ಮಾಡಲು ಹಣದ ಕೊರತೆಯಿಲ್ಲ. ಸಾಲ ನವೀಕರಣ ಸಂದರ್ಭದಲ್ಲಿ ಸಹಕಾರ ಇಲಾಖೆ ಪ್ರತಿ ತಿಂಗಳು ಸಲ್ಲಿಸುವ ಬೇಡಿಕೆಗೆ ಅನುಗುಣವಾಗಿ ಹಣಕಾಸು ಇಲಾಖೆ ಅನುದಾನ ಬಿಡುಗಡೆ ಮಾಡಲಿದೆ ಎಂದು ಮುಖ್ಯಮಂತ್ರಿ ತಿಳಿಸಿದರು. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಎರಡನೇ ಹಂತವಾಗಿ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ 6500 ಕೋಟಿ ರೂ. ಗಳ ಸಾಲಮನ್ನಾ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ತೀರ್ಮಾನ ಕೈಗೊಳ್ಳಲಾಗುವುದು. ಈ ಕುರಿತು ಈಗಾಗಲೇ ಅಗತ್ಯ ಪ್ರಕ್ರಿಯೆಗಳು ಪ್ರಾರಂಭವಾಗಿದ್ದು, ಬ್ಯಾಂಕರುಗಳ ಜೊತೆ ಚರ್ಚಿಸಲಾಗುತ್ತಿದೆ ಎಂದು ಕುಮಾರಸ್ವಾಮಿ ಹೇಳಿದರು.

ಬಹುಶಃ ಸಾಲಮನ್ನಾದ ಪ್ರಕ್ರಿಯೆ 4 ಹಂತಗಳ ಬದಲಾಗಿ ಮುಂದಿನ ವರ್ಷವೇ ಪೂಣಗೊಳ್ಳಬಹುದು ಎಂಬ ಆಶಾಭಾವನೆ ವ್ಯಕ್ತಪಡಿಸಿದ ಮುಖ್ಯಮಂತ್ರಿ, ಸಾಲ ಮನ್ನಾ ಕುರಿತ ಮಾರ್ಗಸೂಚಿಗಳ ಬಗ್ಗೆಯೂ ಸಂಪುಟ ಸಭೆಯಲ್ಲಿ ಚರ್ಚೆಯಾಗಿದ್ದು, ಒಂದು ಕುಟುಂಬಕ್ಕೆ ಒಂದು ಲಕ್ಷರೂ.ವರೆಗಿನ ಸಾಲಮನ್ನಾ ಎಂಬ ಅಂಶವನ್ನು ಕೈಬಿಡಲಾಗಿದೆ ಎಂದು ತಿಳಿಸಿದರು.

ರೈತರನ್ನು ಆರ್ಥಿಕವಾಗಿ ಸದೃಢಗೊಳಿಸಲು ಸರಕಾರ ಬದ್ಧವಾಗಿದೆ. ನಿಮ್ಮನ್ನು ಉಳಿಸಿಕೊಳ್ಳುವುದು ನಮ್ಮ ಆದ್ಯತೆ. ಆತ್ಮಹತ್ಯೆ ಮಾಡಿಕೊಂಡು ನಿಮ್ಮ ಕುಟುಂಬವನ್ನು ಬೀದಿ ಪಾಲು ಮಾಡಬೇಡಿ ಎಂದು ಮುಖ್ಯಮಂತ್ರಿ ಮನವಿ ಮಾಡಿದರು.

ಪತ್ರಿಕೆಯೊಂದರಲ್ಲಿ ಶಾದಿಭಾಗ್ಯ ಯೋಜನೆಗೆ ಅನುದಾನ ಕಡಿತ, ಮಾತೃಪೂರ್ಣ ಯೋಜನೆ ಕೈ ಬಿಟ್ಟಿರುವುದಾಗಿ ವರದಿ ಪ್ರಕಟವಾಗಿದೆ. ಸಿದ್ದರಾಮಯ್ಯ ಸರಕಾರದ ಅವಧಿಯಲ್ಲಿ ಪ್ರಸಕ್ತ ಸಾಲಿನ ಫೆಬ್ರವರಿಯಲ್ಲಿ ಮಂಡಿಸಿದ ಬಜೆಟ್‌ನಲ್ಲಿ ಜು.31ರವರೆಗೆ ಒಪ್ಪಿಗೆ ಲೇಖಾನುದಾನದಲ್ಲಿ ಯಾವುದೆ ಯೋಜನೆಗಳನ್ನು ಕೈ ಬಿಟ್ಟಿಲ್ಲ. ಇನ್ನು ಹೆಚ್ಚುವರಿಯಾಗಿ ಕಾರ್ಯಕ್ರಮಗಳನ್ನು ಸೇರಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

ಮೇಕೆದಾಟು ಯೋಜನೆ: ಮೇಕೆದಾಟು ಯೋಜನೆ ಜಾರಿ ಕುರಿತು ನಿನ್ನೆ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, ಹೊಸದಿಲ್ಲಿಯಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿಯನ್ನು ಭೇಟಿ ಮಾಡಿ ಸಂಬಂಧಪಟ್ಟ ರಾಜ್ಯಗಳ ಸಭೆ ಕರೆಯುವಂತೆ ಮನವಿ ಮಾಡಿದ್ದಾರೆ. ಈ ಯೋಜನೆಯಿಂದ ತಮಿಳುನಾಡಿನ ರೈತರಿಗೇ ಅನುಕೂಲ ಹೆಚ್ಚು. ಈ ಸಂಬಂಧ ತಮಿಳುನಾಡಿನ ಮುಖ್ಯಮಂತ್ರಿ, ಪ್ರಮುಖ ರಾಜಕೀಯ ನಾಯಕರು ಹಾಗೂ ರೈತರನ್ನು ಮನವೊಲಿಸಲಾಗುವುದು ಎಂದು ಅವರು ಹೇಳಿದರು.

ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ್ ಮಾತನಾಡಿ, ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (2018-19) ವತಿಯಿಂದ ನಡೆಸುತ್ತಿರುವ ವಸತಿ ಶಾಲೆ/ಕಾಲೇಜುಗಳ ವಿದ್ಯಾರ್ಥಿಗಳಿಗೆ ಶೂ, ಸಾಕ್ಸ್, ಟೈ ಮತ್ತು ಬೆಲ್ಟ್‌ಗಳನ್ನು ಅಂದಾಜು 10.36 ಕೋಟಿ ರೂ.ಗಳ ಮೊತ್ತದಲ್ಲಿ ಖರೀದಿಸಲು ಅನುಮೋದನೆ ನೀಡಲಾಗಿದೆ ಎಂದರು.

ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಯಲ್ಲಿ ಅಪರಾಧ ಪ್ರಕರಣಗಳನ್ನು ಹಿಂಪಡೆಯುವ ಕುರಿತು ಪರಿಶೀಲಿಸಿ ಸಚಿವ ಸಂಪುಟಕ್ಕೆ ಸೂಕ್ತ ಶಿಫಾರಸು ಮಾಡಲು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ನೇತೃತ್ವದಲ್ಲಿ ಸಚಿವ ಸಂಪುಟದ ಉಪಸಮಿತಿಯನ್ನು ರಚಿಸಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು.

ಹೊಳೆನರಸೀಪುರ-ಮಾವಿನ ಕೆರೆ ವ್ಯಾಪ್ತಿಯಲ್ಲಿ ರೈಲ್ವೆ ಮೇಲು ಸೇತುವೆ ಮತ್ತು ಕೂಡು ರಸ್ತೆ ನಿರ್ಮಾಣ ಕಾಮಗಾರಿಯನ್ನು ಕೇಂದ್ರ ಸರಕಾರದ ಸಹಯೋಗದೊಂದಿಗೆ 39.93 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಕೈಗೆತ್ತಿಕೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಬಂಡೆಪ್ಪ ಕಾಶೆಂಪೂರ್ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಉಪಸ್ಥಿತರಿದ್ದರು.

ಸನ್ನಡತೆ ಆಧಾರದಲ್ಲಿ ಕೈದಿಗಳ ಬಿಡುಗಡೆ
ಸ್ವಾತಂತ್ರ ದಿನಾಚರಣೆ ಅಂಗವಾಗಿ ರಾಜ್ಯದ ವಿವಿಧ ಕಾರಾಗೃಹಗಳಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವವರ ಪೈಕಿ 93 ಕೈದಿಗಳನ್ನು ಸನ್ನಡತೆ ಆಧಾರದಲ್ಲಿ ಬಿಡುಗಡೆ ಮಾಡಲು ರಾಜ್ಯಪಾಲರಿಗೆ ಶಿಫಾರಸ್ಸು ಮಾಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
-ಬಂಡೆಪ್ಪ ಕಾಶೆಂಪೂರ್, ಸಹಕಾರ ಸಚಿವ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News