ಮಂಗಳೂರು: ಸಾಲಮನ್ನಾ, ಬೆಂಬಲ ಬೆಲೆಗಾಗಿ ರೈತ ಕಾರ್ಮಿಕರ ಪ್ರತಿಭಟನೆ

Update: 2018-08-09 17:39 GMT

ಮಂಗಳೂರು, ಆ.9: ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರಕಾರವು ಕೇಂದ್ರದಲ್ಲಿ ಆಡಳಿತಕ್ಕೆ ಬಂದ ಮೇಲೆ ರೈತರ, ಕಾರ್ಮಿಕರ ಪರಿಸ್ಥಿತಿ ಅತ್ಯಂತ ದುಃಸ್ಥಿತಿಗಿಳಿದಿದ್ದು, ರೈತರು ಸಾಲ ತೀರಿಸಲಾರದೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಕೇರಳ ರಾಜ್ಯ ಸರಕಾರವು ಜಾರಿಗೆ ತಂದಿರುವ ಋಣಮುಕ್ತ ಕಾಯ್ದೆ ರೀತಿಯಲ್ಲಿ ರೈತರ ಸಾಲ ಮನ್ನಾ ಮಾಡಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘ(ಎಐಕೆಎಸ್)ದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯಾದವ ಶೆಟ್ಟಿ ಆಗ್ರಹಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಎದುರು ರೈತ ಕಾರ್ಮಿಕರು ಅಖಿಲ ಭಾರತ ಕಿಸಾನ್ ಸಭಾ ಹಾಗೂ ಸಿಐಟಿಯುಗಳ ನೇತೃತ್ವದಲ್ಲಿ ಅಖಿಲ ಭಾರತ ಮಟ್ಟದಲ್ಲಿ ಮೋದಿ ಆಡಳಿತ ನೀತಿಗಳನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು.

ಹಿಂದಿನ ಯುಪಿಎ 2ನೇ ಸರಕಾರವು ರೈತ ಕಾರ್ಮಿಕರ ತೀವ್ರ ವಿರೋಧವನ್ನು ಮನಗಂಡು, 1893ರ ಬ್ರಿಟಿಷರ ಭೂಸ್ವಾಧೀನ ಕಾಯ್ದೆಯನ್ನು ತಿದ್ದುಪಡಿ ಮಾಡಿ, ಶ್ರೀಮಂತರು ಸಲೀಸಾಗಿ ಭೂಮಿಯನ್ನು ರೈತರಿಂದ ಕೊಳ್ಳಲಾಗದಂತಹ ಕಾನೂನನ್ನು ಅನುಷ್ಟಾನಕ್ಕೆ ತಂದಿದ್ದರು. ಆದರೆ ನರೇಂದ್ರ ಮೋದಿ ಸರಕಾರವು ಅಧಿಕಾರಕ್ಕೆ ಬಂದ ಹೊಸದರಲ್ಲೇ ಅದನ್ನು ಉದ್ಯಮಪತಿಗಳು ಸುಲಭವಾಗಿ ಖರೀದಿಸಬಹುದಾದ ತಿದ್ದುಪಡಿಗಳನ್ನು ತರಲು ಪ್ರಯತ್ನಿಸಿದರು ಎಂದು ದೂರಿದರು.

ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್‌ಕುಮಾರ್ ಬಜಾಲ್ ಮಾತನಾಡಿ, ರೈತ ಕಾರ್ಮಿಕರಿಗೆ ಮಾಸಿಕ ಕನಿಷ್ಠ 18,000 ರೂ. ವೇತನ ಸಿಗಬೇಕೆಂದು ಸಿಐಟಿಯು ಸೇರಿದಂತೆ ಕಾರ್ಮಿಕ ಸಂಘಗಳು ಹೋರಾಡುತ್ತಿವೆ. ನೂರು ವರ್ಷಗಳಿಂದ ಕಾರ್ಮಿಕರು ಹೋರಾಟ ಮಾಡಿದ ಪರಿಣಾಮವಾಗಿ ಕಾರ್ಮಿಕರಿಗೆ ಹಲವಾರು ಸವಲತ್ತುಗಳು ದೊರಕಿವೆ ಎಂದರು.

ನರೇಂದ್ರ ಮೋದಿ ಸರಕಾರದ ಅವಧಿಯಲ್ಲಿ ವಿವಿಧ ಕಾರ್ಮಿಕ ಕಾಯ್ದೆಗಳನ್ನು ತಿದ್ದುಪಡಿಗಳ ಮೂಲಕ ದುರ್ಬಲಗೊಳಿಸಲಾಗುತ್ತಿದೆ. ಕಾರ್ಮಿಕರು ಹೋರಾಟಗಳಿಂದ ಗಳಿಸಿದ ಸವಲತ್ತುಗಳನ್ನು ಕಿತ್ತುಕೊಳ್ಳಲಾಗುತ್ತಿದೆ ಎಂದು ದೂರಿದರು.

ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಕೃಷ್ಣಪ್ಪ ಸಾಲ್ಯಾನ್ ಮಾತನಾಡಿ, ಎಂ.ಎಸ್.ಸ್ವಾಮಿನಾಥನ್ ಆಯೋಗದಂತೆ ರೈತರು ಬೆಳೆದ ಫಸಲಿಗೆ ಸಮಗ್ರ ವೆಚ್ಚದ ಅಂದಾಜು ಮಾಡಿ, ಆ ವೆಚ್ಚದ ಒಂದೂವರೆ ಪಟ್ಟು ಬೆಲೆಯನ್ನು ಕನಿಷ್ಠ ಬೆಂಬಲ ಬೆಲೆಯಾಗಿ ನೀಡಬೇಕು ಎಂದರು.

ಪ್ರತಿಭಟನೆಗೂ ಮೊದಲು ಮಂಗಳೂರಿನ ಮಿನಿ ವಿಧಾನಸೌಧದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಸಿಐಟಿಯು ಜಿಲ್ಲಾ ಸಮಿತಿ ಮುಖಂಡರು ಭಾಗವಹಿಸಿದ್ದರು. ಸುನಿಲ್‌ಕುಮಾರ್ ಬಜಾಲ್ ಸ್ವಾಗತಿಸಿದರು. ಪ್ರಾಂತ ರೈತ ಸಂಘದ ಕೋಶಾಧಿಕಾರಿ ವಾಸುದೇವ ಉಚ್ಚಿಲ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News