ಕರಾವಳಿ, ಮಲೆನಾಡಿನಲ್ಲಿ ಮಳೆ ಅವಾಂತರ: ಪರಿಹಾರ ಕಾರ್ಯದ ಮಾಹಿತಿ ಕಲೆ ಹಾಕಿದ ಸಿಎಂ
ಬೆಂಗಳೂರು, ಆ.17: ಭಾರೀ ಮಳೆಯಿಂದ ತತ್ತರಿಸಿರುವ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ತಲೆದೋರಿರುವ ಪ್ರವಾಹ ಹಾಗೂ ಮಣ್ಣಿನ ಕುಸಿತದಿಂದ ಸಿಲುಕಿಕೊಂಡ ಜನರ ರಕ್ಷಣೆ ಮತ್ತು ಇತರ ಪರಿಹಾರ ಕಾರ್ಯಾಚರಣೆಗಳ ಕುರಿತು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಇಂದು ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಅವರಿಂದ ಮಾಹಿತಿ ಪಡೆದರು.
ಕೊಡಗು ಜಿಲ್ಲೆಯಲ್ಲಿ ಪ್ರವಾಹ ಹಾಗೂ ಗುಡ್ಡ ಕುಸಿತದಿಂದ ಸಿಲುಕಿಕೊಂಡಿರುವ ಜನರನ್ನು ರಕ್ಷಿಸಲು ಸೇನೆಯು ನೆರವಿಗೆ ಬಂದಿದ್ದು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, ಅಗ್ನಿ ಶಾಮಕ ದಳ, ಕ್ವಿಕ್ ರೆಸ್ಪಾನ್ಸ್ ಟೀಮ್ ಮೊದಲಾದ ತಂಡಗಳು ಜನರ ರಕ್ಷಣೆ ಮಾಡುತ್ತಿವೆ.
ಮುಖ್ಯಮಂತ್ರಿಯವರು ಜಿಲ್ಲಾ ಉಸ್ತುವಾರಿ ಸಚಿವರುಗಳೊಂದಿಗೆ ನಿಕಟ ಸಂಪರ್ಕದಲ್ಲಿದ್ದು, ಪರಿಹಾರ ಕಾರ್ಯಗಳ ಮಾಹಿತಿ ಪಡೆಯುತ್ತಿದ್ದಾರೆ. ಜಿಲ್ಲಾ ಉಸ್ತುವಾರಿ ಪ್ರಧಾನ ಕಾರ್ಯದರ್ಶಿಗಳೂ ಸಹ ಆಯಾ ಜಿಲ್ಲೆಗಳಲ್ಲಿ ಪರಿಹಾರ ಕಾರ್ಯಾಚರಣೆಗಳ ಉಸ್ತುವಾರಿ ನಿರ್ವಹಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟನೆ ತಿಳಿಸಿದೆ.