ಬೆಂಗಳೂರು: ಲಕ್ಷಾಂತರ ರೂ.ಮೌಲ್ಯದ ಚಿನ್ನಾಭರಣ ಕಳವು

Update: 2018-08-17 15:39 GMT

ಬೆಂಗಳೂರು, ಆ.17: ಮನೆಯೊಂದರ ಬೀಗ ಒಡೆದು ಒಳನುಗ್ಗಿದ ದುಷ್ಕರ್ಮಿಗಳು, 22 ಸಾವಿರ ರೂ. ನಗದು ಸೇರಿದಂತೆ 6 ಲಕ್ಷ ರೂ. ವೌಲ್ಯದ ಚಿನ್ನಾಭರಣ ಕಳವು ಮಾಡಿರುವ ಘಟನೆ ಇಲ್ಲಿನ ಹನುಮಂತನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ನಗರದ ಬನಶಂಕರಿ 1ನೇ ಹಂತ ನಿವಾಸಿ ಭದ್ರಿ ಲಲಿತ್ ಮುಖಾರಾಮ್ ಎಂಬುವರ ಮನೆಯಲ್ಲಿ ಕಳ್ಳತನ ನಡೆದಿದೆ ಎಂದು ತಿಳಿದುಬಂದಿದೆ.

ಆ.14ರಂದು ಮನೆ ಮಾಲಕ ಊರಿಗೆ ತೆರಳಿದ್ದರು. ಈ ವೇಳೆ ದುಷ್ಕರ್ಮಿಗಳು ಇವರ ಮನೆಯ ಬೀಗ ಒಡೆದು ಒಳನುಗ್ಗಿ ಬೀರುವನ್ನು ಮೀಟಿ ಅದರಲ್ಲಿದ್ದ ವಸ್ತುಗಳನ್ನೆಲ್ಲಾ ಚೆಲ್ಲಾಪಿಲ್ಲಿ ಮಾಡಿ ಕೈಗೆ ಸಿಕ್ಕ 22 ಸಾವಿರ ರೂ., 6 ಲಕ್ಷ ಬೆಲೆಯ ಆಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಗುರುವಾರ ಬೆಳಗ್ಗೆ ಭದ್ರಿ ಲಲಿತ್ ಮುಖಾರಾಮ್ ಅವರು ಮನೆಗೆ ವಾಪಸಾದಾಗಲೇ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಹನುಮಂತನಗರ ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News