×
Ad

ಶಕ್ತಿ ಶಿಕ್ಷಣ ಸಂಸ್ಥೆ: ವೆಬ್‌ಸೈಟ್ ಶುಭಾರಂಭ

Update: 2018-08-23 20:14 IST

ಮಂಗಳೂರು, ಆ.23: ಶಕ್ತಿನಗರದಲ್ಲಿರುವ ಗೋಪಾಲಕೃಷ್ಣ ಪೂರ್ವ ಪ್ರಾಥಮಿಕ ಶಾಲೆ, ಶಕ್ತಿ ವಸತಿ ಶಾಲೆ ಹಾಗೂ ಶಕ್ತಿ ಪಪೂ ಕಾಲೇಜಿನ ವೆಬ್‌ಸೈಟ್  www.shakthi.net.in ನ್ನು ಮಂಗಳೂರು ವಿಶ್ವವಿದ್ಯಾನಿಲಯದ ಉಪ ಕುಲಪತಿ ಡಾ.ಕಿಶೋರ್‌ಕುಮಾರ್ ಗುರುವಾರ ಅನಾವರಣಗೊಳಿಸಿದರು

ನಂತರ ಸಭೆಯನ್ನುದೇಶಿಸಿ ಮಾತನಾಡಿದ ಉಪಕುಲಪತಿ ಡಾ.ಕಿಶೋರ್‌ಕುಮಾರ್, ಇಂದಿನ ಕಾಲಘಟದಲ್ಲಿ ಶಿಕ್ಷಣ ಸಂಸ್ಥೆಗಳು ತಮ್ಮ ಸಂಸ್ಥೆಯ ವೆಬ್‌ಸೈಟ್ ಹೊಂದುವ ಅಗತ್ಯತೆ ಇದೆ. ಇದರಿಂದ ಶಾಲೆ-ಕಾಲೇಜಿನಲ್ಲಿ ನಡೆಯುವ ಪ್ರತಿಯೊಂದು ವಿಚಾರ, ಚಟುವಟಿಕೆಗಳ ಬಗ್ಗೆ ಮಕ್ಕಳಿಗೆ, ಹೆತ್ತವರಿಗೆ ತಿಳಿಯಬಹುದಾಗಿದೆ ಎಂದರು.

ವೆಬ್‌ಸೈಟ್‌ನಲ್ಲಿ ಶಿಕ್ಷಣ ಸಂಸ್ಥೆಯ ಸಂಪೂರ್ಣ ಮಾಹಿತಿ ಲಭ್ಯವಿರುವುದರಿಂದ ಹೆತ್ತವರು ತಮ್ಮ ಆಯ್ಕೆಯ ಶಿಕ್ಷಣ ಸಂಸ್ಥೆಗಳಿಗೆ ಮಕ್ಕಳನ್ನು ಸೇರಿಸಲು ಸಹಾಯಕವಾಗುತ್ತದೆ. ಶಿಕ್ಷಣ ಸಂಸ್ಥೆಗಳು ತಮ್ಮ ವೆಬ್‌ಸೈಟ್‌ನ್ನು ಸರಿಯಾದ ರೀತಿಯಲ್ಲಿ ರೂಪುಗೊಳಿಸಿ ತಮ್ಮ ಶಿಕ್ಷಣ ಸಂಸ್ಥೆಯ ಪರಿಪೂರ್ಣ ಮಾಹಿತಿ ನೀಡಬೇಕು ಎಂದರು.

ಮುಖ್ಯಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್, ಶಕ್ತಿ ವಸತಿ ಶಾಲೆ ಹಾಗೂ ಶಕ್ತಿ ಪದವು ಪೂರ್ವ ಕಾಲೇಜು ಮೌಲ್ಯಯುತವಾದ ಶಿಕ್ಷಣವನ್ನು ಸಮಾಜಕ್ಕೆ ಕೊಡುವುದರ ಮೂಲಕ ಸಾಮಾಜಿಕ ಬದಲಾವಣೆಯನ್ನು ತರಬೇಕು. ಈ ಮೂಲಕ ಅಂತಾರಾಷ್ಟ್ರೀಯ ಗುಣಮಟ್ಟದಲ್ಲಿ ಶಿಕ್ಷಣವನ್ನು ನೀಡುವಂತಾಗಲಿ ಎಂದು ಹಾರೈಸಿದರು.

ಮುಖ್ಯ ಅತಿಥಿ ಜಿಲ್ಲಾ ಪ.ಪೂ. ಕಾಲೇಜು ಪ್ರಾಂಶುಪಾಲರ ಎಸೋಸಿಯೇಶನ್‌ನ ಅಧ್ಯಕ್ಷೆ ಎಲ್ವಿರಾ ಫಿಲೋಮಿನಾ ಮಾತನಾಡಿ, ಶಿಕ್ಷಣ ಸಂಸ್ಥೆಗಳು ತಮ್ಮದೇ ಆದ ವೆಬ್‌ಸೈಟ್‌ನ್ನು ಹೊಂದುವುದರಿಂದ ಪೋಷಕರಿಗೆ ಶಾಲೆಯಲ್ಲಿ ನಡೆಯುವ ಚಟುವಟಿಕೆಗಳು ಹಾಗೂ ಮಕ್ಕಳ ಮೇಲೆ ನಿಗಾಯಿರಿಸಲು ಅನುಕೂಲವಾಗುತ್ತದೆ. ವಿಶ್ವದ ಪ್ರತಿಯೊಬ್ಬರು ಶಿಕ್ಷಣ ಸಂಸ್ಥೆಯ ಸಮಗ್ರ ಮಾಹಿತಿ ಪಡೆಯಲು ಸಹಾಯಕವಾಗುತ್ತದೆ. ಈ ನಿಟ್ಟಿನಲ್ಲಿ ಶಕ್ತಿ ಶಿಕ್ಷಣ ಸಂಸ್ಥೆ ಉತ್ತಮ ಕಾರ್ಯ ಮಾಡಿದ್ದು ಶಿಕ್ಷಣ ಕ್ಷೇತ್ರದಲ್ಲಿ ಅಭಿವೃದ್ಧಿಯಾಗಲಿ ಎಂದು ಶುಭ ಹಾರೈಸಿದರು.

ಶಾಸಕ ಡಾ.ವೈ.ಭರತ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮೊಕ್ತೇಸರ ಕೆ.ಸಿ.ನಾಯಕ್ ವಹಿಸಿದ್ದರು. ಶಕ್ತಿ ಶಿಕ್ಷಣ ಸಂಸ್ಥೆಯ ಆಡಳಿತ ಸದಸ್ಯೆ ಸಗುಣ ಸಿ. ನಾಯಕ್ ಅತಿಥಿಗಳಿಗೆ ನೆನಪಿನ ಕಾಣಿಕೆ ನೀಡಿದರು. ಸಂಸ್ಥೆಯ ಅಭಿವೃದ್ಧಿ ಅಧಿಕಾರಿ ನಸೀಮಾ ಬಾನು ಶಕ್ತಿ ಶಿಕ್ಷಣ ಸಂಸ್ಥೆಯ ವೆಬ್‌ಸೈಟ್ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಶಕ್ತಿ ಶಿಕ್ಷಣ ಸಂಸ್ಥೆಯ ಟ್ರಸ್ಟಿ ಮುರಳೀಧರ್ ನಾಯ್ಕಿ, ಮಂಗಳೂರು ದಕ್ಷಿಣ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್, ಪ್ಲಾಮಾ ಡೆವಲಪರ್ಸ್‌ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಪಿ.ಎಂ.ಎ.ರಝಾಕ್, ರಾಮಕೃಷ್ಣ ಕಾಲೇಜಿನ ಪ್ರಾಂಶುಪಾಲ ಕಿಶೋರ್ ಕುಮಾರ್ ರೈ ಶೇಣಿ, ಕಿಟ್ಟಲ್ ಕಾಲೇಜಿನ ಪ್ರಾಂಶುಪಾಲ ವಿಠಲ್, ಗ್ಲೋಬಲ್ ಟ್ರಾವೆಲ್ಸ್‌ನ ವ್ಯವಸ್ಥಾಪಕ ನಿರ್ದೇಶಕ ವಿಲಿಯಂ ಡಿಸೋಜ, ರೋಹನ್ ಕಾರ್ಪೊರೇಶನ್‌ನ ವ್ಯವಸ್ಥಾಪಕ ನಿರ್ದೇಶಕ ರೋಹನ್ ಮೊಂತೆರೊ, ಅಕ್ಷರೋದ್ಯಮ ಸಂಸ್ಥೆಯ ಸಿಇಒ ಸುನೀಲ್ ಕುಲಕರ್ಣಿ, ಶ್ರೀರಾಮುಲು ನಾಯ್ಡು, ಖ್ಯಾತ ಲೆಕ್ಕ ಪರಿಶೋಧಕರು, ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲೆ ಮಧುಲಿಕಾ ರಾವ್, ಗೋಪಾಲಕೃಷ್ಣ ಪೂರ್ವ ಪ್ರಾಥಮಿಕ ಶಾಲೆಯ ಸಂಚಾಲಕಿ ನೀಮಾ ಸಕ್ಸೇನಾ, ಶಕ್ತಿ ಎಜುಕೇಶನ್ ಟ್ರಸ್ಟ್‌ನ ಪ್ರಧಾನ ಸಲಹೆಗಾರ ರಮೇಶ್ ಕೆ. ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

ಶಕ್ತಿ ಎಜುಕೇಶನ್ ಟ್ರಸ್ಟ್‌ನ ಆಡಳಿತಾಧಿಕಾರಿ ಬೈಕಾಡಿ ಜನಾರ್ದನ ಆಚಾರ್ ಸ್ವಾಗತಿಸಿದರು. ಶಕ್ತಿ ಪ.ಪೂ.ನ ಪ್ರಾಂಶುಪಾಲ ಪ್ರಭಾಕರ ಜಿ.ಎಸ್. ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News