ಶ್ರೀನಗರ: ಎನ್‌ಕೌಂಟರ್‌ನಲ್ಲಿ ಓರ್ವ ಉಗ್ರ ಸಾವು

Update: 2018-08-24 16:40 GMT

ಶ್ರೀನಗರ, ಆ. 24: ಜಮ್ಮು ಹಾಗೂ ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯಲ್ಲಿ ಶುಕ್ರವಾರ ಭದ್ರತಾ ಪಡೆ ನಡೆಸಿದ ಎನ್‌ಕೌಂಟರ್‌ನಲ್ಲಿ ಜೈಶೆ ಮುಹಮ್ಮದ್ ಸಂಘಟನೆಯ ಪಾಕಿಸ್ತಾನ ಮೂಲದ ಉಗ್ರನೋರ್ವ ಹತನಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ದಕ್ಷಿಣ ಕಾಶ್ಮೀರದ ಕೊಕೇರ್‌ನಾಗ್‌ನ ವೈಲೂ ಪ್ರದೇಶದಲ್ಲಿ ಭದ್ರತಾ ಪಡೆ ಶುಕ್ರವಾರ ಬೆಳಗ್ಗೆ ಶೋಧ ಕಾರ್ಯಾಚರಣೆ ಆರಂಭಿಸಿತ್ತು.

ಈ ಸಂದರ್ಭ ಯೋಧರು ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆಯಿತು. ಇದರಲ್ಲಿ ಓರ್ವ ಉಗ್ರ ಹತನಾದ ಎಂದು ಅವರು ತಿಳಿಸಿದ್ದಾರೆ. ಎನ್‌ಕೌಂಟರ್ ನಡೆದ ಸ್ಥಳದಲ್ಲಿ ದೊಡ್ಡ ಪ್ರಮಾಣದ ಸ್ಪೋಟಕಗಳು ಹಾಗೂ ಇತರ ಕೆಲವು ವಸ್ತುಗಳು ಪತ್ತೆಯಾಗಿವೆ. ಮೃತಪಟ್ಟ ಉಗ್ರನ ಗುರುತನ್ನು ಇದುವರೆಗೆ ಪತ್ತೆ ಹಚ್ಚಲಾಗಿಲ್ಲ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News