ಮೈಸೂರು: ವಾಹನ ಅಪಘಾತಕ್ಕೆ ವ್ಯಕ್ತಿ ಬಲಿ
Update: 2018-08-24 23:04 IST
ಮೈಸೂರು,ಆ.24: ವಾಹನಕ್ಕೆ ಅಡ್ಡ ಬಂದ ಶ್ವಾನಕ್ಕೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ನಿಯಂತ್ರಣ ಕಳೆದ ಕಾರು ರಸ್ತೆ ವಿಭಜಕಕ್ಕೆ ಮತ್ತು ವಿದ್ಯುತ್ ಕಂಬಕ್ಕೆ ಢಿಕ್ಕಿಯಾದ ಪರಿಣಾಮ ಚಾಲಕ ಮೃತಪಟ್ಟ ಘಟನೆ ಹಿನಕಲ್ ರಿಂಗ್ ರಸ್ತೆಯಲ್ಲಿ ನಡೆದಿದೆ.
ಮೃತರನ್ನು ಪ್ರಕಾಶ್(33)ಎಂದು ಹೇಳಲಾಗಿದ್ದು, ಕಾರಿನಲ್ಲಿದ್ದ ಅವರ ಸಹೋದರ ರಾಜೇಂದ್ರ ಅವರಿಗೆ ಗಂಭೀರ ಗಾಯಗಳಾಗಿವೆ.
ಬುಧವಾರ ಸಂಜೆ ಹಿನಕಲ್ ರಿಂಗ್ ರಸ್ತೆಯಲ್ಲಿ ಬೋಗಾದಿ ಕಡೆಯಿಂದ ಕಾರಿನಲ್ಲಿ ಹೋಗುತ್ತಿರುವಾಗ ರಸ್ತೆಗಡ್ಡವಾಗಿ ಬಂದ ಶ್ವಾನವನ್ನು ರಕ್ಷಿಸಲು ಹೋಗಿ ಕಾರು ಚಾಲಕನ ನಿಯಂತ್ರಣ ಕಳೆದು ರಸ್ತೆ ವಿಭಜಕಕ್ಕೆ ಮತ್ತು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಮಗುಚಿ ಬಿದ್ದಿದೆ. ಕಾರಿನಲ್ಲಿದ್ದವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಪ್ರಕಾಶ್ ಸಾವನ್ನಪ್ಪಿದ್ದಾರೆ. ಈ ಸಂಬಂಧ ವಿ.ವಿ.ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.