×
Ad

ಕೇಂದ್ರ ರಕ್ಷಣಾ ಸಚಿವರಿಗೆ ಅನಾನುಕೂಲ : ಮುಖ್ಯಮಂತ್ರಿ ಕುಮಾರಸ್ವಾಮಿ ವಿಷಾದ

Update: 2018-08-26 19:31 IST

ಬೆಂಗಳೂರು, ಆ.26: ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್, ಅತಿವೃಷ್ಟಿ ಪೀಡಿತ ಕೊಡಗು ಜಿಲ್ಲೆಗೆ ಪರಿಶೀಲನೆಗಾಗಿ ಆಗಮಿಸಿದ ಸಂದರ್ಭದಲ್ಲಿ ಅವರಿಗೆ ಅನಾನುಕೂಲವಾಗಿದ್ದಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಷಾದ ವ್ಯಕ್ತಪಡಿಸಿದ್ದಾರೆ.

ನಮ್ಮ ಸರಕಾರವು ಕೇಂದ್ರ ಹಾಗೂ ರಾಜ್ಯ ಸರಕಾರದ ವಿವಿಧ ಇಲಾಖೆಗಳು, ವಿಪತ್ತು ನಿರ್ವಹಣಾ ಸಂಸ್ಥೆಗಳು ಹಾಗೂ ಸ್ವಯಂ ಸೇವಕರ ನೆರವಿನೊಂದಿಗೆ ದಿನದ 24 ಗಂಟೆಯೂ ಕೊಡಗಿನಲ್ಲಿ ಪ್ರವಾಹ, ಭೂಕುಸಿತದಲ್ಲಿ ಸಿಲುಕಿಕೊಂಡ ನಾಗರಿಕರ ರಕ್ಷಣೆ, ಪರಿಹಾರ ಹಾಗೂ ಪುನರ್ವಸತಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದೆ. ಕೇಂದ್ರ ಸರಕಾರವೂ ನಮ್ಮ ಬೆಂಬಲಕ್ಕೆ ನಿಂತಿದೆ ಎಂದು ಅವರು ಹೇಳಿದ್ದಾರೆ.

ಪ್ರವಾಸೋದ್ಯಮ ಮತ್ತು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್, ಅನಾಹುತ ಸಂಭವಿಸಿದ ಮೊದಲ ದಿನದಿಂದಲೆ ಕೊಡಗು ಜಿಲ್ಲೆಯಲ್ಲಿಯೆ ಮೊಕ್ಕಾಂ ಹೂಡಿ ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆ ಉಸ್ತುವಾರಿ ವಹಿಸಿ ನಿರಂತರವಾಗಿ ಕಾರ್ಯ ನಿರ್ವಹಿಸಿದ್ದಾರೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಅಂತೆಯೇ ರಕ್ಷಣಾ ಸಚಿವರು ನಮ್ಮ ಮನವಿಗೆ ಸ್ಪಂದಿಸಿ ರಕ್ಷಣಾ ಕಾರ್ಯಾಚರಣೆಗೆ ಎಲ್ಲ ರೀತಿಯಲ್ಲೂ ಬೆಂಬಲ ನೀಡಿದ್ದಾರೆ. ಅಲ್ಲದೆ ಕೊಡಗಿನ ಜನರ ಯಾತನೆಯ ವಸ್ತುಸ್ಥಿತಿ ಅರಿಯಲು ಕೊಡಗು ಜಿಲ್ಲೆಗೆ ಭೇಟಿ ನೀಡಿದ್ದರು ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ರಾಜ್ಯ ಸರಕಾರ ಹಾಗೂ ಜಿಲ್ಲಾಡಳಿತ ಈ ಸಂಕಷ್ಟದ ಪರಿಸ್ಥಿತಿಯಲ್ಲೂ ಸಚಿವರ ಆಗಮನದ ಸಂದರ್ಭದಲ್ಲಿ ಶಿಷ್ಟಾಚಾರ ಪಾಲನೆಗೆ ಅಗತ್ಯ ಕ್ರಮ ವಹಿಸಿದ್ದರೂ ಅವರಿಗೆ ಕೆಲವು ಅನಾನುಕೂಲ ಆಗಿರುವುದು ದುರದೃಷ್ಟಕರ ಹಾಗೂ ಇದಕ್ಕಾಗಿ ವಿಷಾದ ವ್ಯಕ್ತಪಡಿಸುವೆ. ಈ ವಿಷಯದ ಕುರಿತಾಗಿ ನಾನು ದೂರವಾಣಿ ಮೂಲಕ ಅವರೊಂದಿಗೆ ಮಾತನಾಡಿದ್ದೇನೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ನಾವೆಲ್ಲರೂ ಈಗ ಭಿನ್ನಾಭಿಪ್ರಾಯ ಮರೆತು ಅತಿವೃಷ್ಟಿಯಿಂದ ತೊಂದರೆ ಗೊಳಗಾಗಿರುವ ಕೊಡಗಿನ ಜನರ ಪುನರ್ವಸತಿಗೆ ಆದ್ಯತೆ ನೀಡುವುದು ಇಂದಿನ ತುರ್ತು ಅಗತ್ಯವಾಗಿದೆ. ನಾವು ಈ ಘಟನೆಗೆ ಯಾವುದೇ ಬಣ್ಣ ಬಳಿದು ನಮ್ಮ ಗುರಿಯ ಹಾದಿಯಿಂದ ವಿಚಲಿತರಾಗುವುದು ಬೇಡ. ಕೇಂದ್ರ ಸರಕಾರ ಅದರಲ್ಲೂ ವಿಶೇಷವಾಗಿ ರಕ್ಷಣಾ ಸಚಿವರ ಬೆಂಬಲ ಹೀಗೆಯೇ ಮುಂದುವರಿಯಲಿದೆ ಎಂಬುದು ನನ್ನ ನಂಬಿಕೆ ಎಂದು ಮುಖ್ಯಮಂತ್ರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News