ಮಳೆ ಹಾನಿಯ ಪರಿಹಾರಕ್ಕಾಗಿ ಕೇಂದ್ರಕ್ಕೆ ಮನವಿ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ

Update: 2018-08-27 14:46 GMT

ಬೆಂಗಳೂರು, ಆ.27: ಕೊಡಗು ಜಿಲ್ಲೆಯೂ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದ ಮೂರು ತಿಂಗಳಿನಿಂದ ಬಿದ್ದ ಭಾರಿ ಮಳೆಯಿಂದ ಉಂಟಾಗಿರುವ ನಷ್ಟಕ್ಕೆ ಪರಿಹಾರ ಕೋರಿ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ನಿರ್ಧರಿಸಲಾಗಿದೆ.

ಸೋಮವಾರ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಕೊಡಗು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಉತ್ತರ ಕನ್ನಡ, ಬೆಳಗಾವಿ, ಮೈಸೂರು ಹಾಗೂ ಇತರೆ ಜಿಲ್ಲೆಗಳಲ್ಲಿ ಆಗಿರುವ ಹಾನಿಯ ಬಗ್ಗೆ ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಲಾಯಿತು. ಕೊಡಗು ಜಿಲ್ಲೆಯಲ್ಲಿ ಸುಮಾರು 800 ಮನೆಗಳು ಭಾಗಶಃ ಹಾನಿಗೊಳಗಾಗಿವೆ. ಇತರೆ ಜಿಲ್ಲೆಗಳಲ್ಲೂ ಹಲವಾರು ಮನೆಗಳು ಹಾನಿಯಾಗಿವೆ ಎಂಬ ವಿಷಯವನ್ನು ಅಧಿಕಾರಿಗಳು ಸಭೆಯ ಗಮನಕ್ಕೆ ತಂದರು. ಪ್ರಾಥಮಿಕ ಅಧ್ಯಯನದ ಪ್ರಕಾರ ಒಟ್ಟಾರೆ 2225 ಕಿ.ಮೀ ಉದ್ದದ ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ರಸ್ತೆಗಳು ಹಾನಿಗೊಳಗಾಗಿವೆ.

240 ಸೇತುವೆಗಳು ಕುಸಿದಿವೆ, 65 ಸರಕಾರಿ ಕಟ್ಟಡಗಳು ಹಾನಿಗೊಳಗಾಗಿವೆ. ರಸ್ತೆ ಮತ್ತು ಸೇತುವೆ ಹಾಗೂ ಸರಕಾರಿ ಕಟ್ಟಡಗಳ ದುರಸ್ತಿಗೆ ಸುಮಾರು 3 ಸಾವಿರ ಕೋಟಿ ರೂ.ಗಳ ಅಗತ್ಯವಿರುವುದನ್ನು ಅಧಿಕಾರಿಗಳು ಸಭೆಯ ಗಮನಕ್ಕೆ ತಂದರು.

ಪ್ರಮುಖ ರಾಷ್ಟ್ರೀಯ ಹೆದ್ದಾರಿಗಳು ಸಂಪರ್ಕ ಕಳೆದುಕೊಂಡಿವೆ. ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಮಡಿಕೇರಿ ಮತ್ತು ಸುಳ್ಯ ನಡುವೆ, ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಕಲೇಶಪುರ ಮತ್ತು ಗುಂಡ್ಯ ನಡುವೆ, ರಾಷ್ಟ್ರೀಯ ಹೆದ್ದಾರಿ-234 ರಲ್ಲಿ ಕೊಟ್ಟಿಗೆಹಾರ ಮತ್ತು ಚಾರ್ಮಾಡಿ ನಡುವೆ ಭೂಕುಸಿತದಿಂದಾಗಿ ರಸ್ತೆ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದು ಸಭೆಯ ಗಮನಕ್ಕೆ ತರಲಾಯಿತು.

ಕೊಡಗು ಜಿಲ್ಲೆಯಲ್ಲಿ ಒಟ್ಟಾರೆ 4500 ಜನರನ್ನು ಜಲಾವೃತ ಪ್ರದೇಶದಿಂದ ರಕ್ಷಿಸಲಾಗಿದೆ. 53 ಪುನರ್ವಸತಿ ಕೇಂದ್ರಗಳಲ್ಲಿ 7500 ಸಂತ್ರಸ್ತರಿಗೆ ಆಶ್ರಯ ನೀಡಲಾಗಿದೆ. ಪ್ರತಿದಿನ 50 ಸಾವಿರ ಆಹಾರದ ಪೊಟ್ಟಣಗಳನ್ನು ವಿತರಿಸಲಾಗುತ್ತಿದ್ದು, ಹಾನಿಗೊಳಗಾಗಿರುವ ಕುಟುಂಬಗಳಿಗೆ ದವಸಧಾನ್ಯಗಳನ್ನು ವಿತರಿಸಲಾಗುತ್ತಿದೆ ಎಂದು ಸಭೆಗೆ ವಿವರಿಸಲಾಯಿತು.

ಮುಖ್ಯಮಂತ್ರಿ ಸೂಚನೆ: ರಸ್ತೆ, ಸೇತುವೆ, ಸರಕಾರಿ ಕಟ್ಟಡಗಳ ಹಾನಿಯ ಬಗ್ಗೆ ವಿವರವಾದ ಪ್ರಸ್ತಾವನೆಯನ್ನು ಸಿದ್ಧಪಡಿಸಬೇಕು. ಖಾಸಗಿ ಕಟ್ಟಡಗಳಿಗೆ ಹಾಗೂ ಮನೆಗಳಿಗೆ ಆಗಿರುವ ಹಾನಿಯ ಅಂದಾಜು ವಿವರವನ್ನು ಸಂಗ್ರಹಿಸಬೇಕು. ಕಾಫಿ, ಅಡಿಕೆ, ಮೆಣಸು, ಭತ್ತ ಮುಂತಾದ ಬೆಳೆಗಳ ಹಾನಿಯ ಬಗ್ಗೆ ಪ್ರತ್ಯೇಕ ಪ್ರಸ್ತಾವನೆಯನ್ನು ಸಿದ್ಧಪಡಿಸಬೇಕು.

ಮನೆಗಳನ್ನು ಕಳೆದುಕೊಂಡಿರುವ ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸುವ ಬಗ್ಗೆ ಜನಾಭಿಪ್ರಾಯ ಸಂಗ್ರಹಿಸಬೇಕು. ಅವರ ಅಭಿಪ್ರಾಯಕ್ಕೆ ಅನುಗುಣವಾಗಿ ಮನೆ ನಿರ್ಮಾಣದ ಪ್ರಸ್ತಾವನೆಯನ್ನು ಸಲ್ಲಿಸಬೇಕು. ಈ ಪ್ರಾಕೃತಿಕ ವಿಕೋಪದಲ್ಲಿ ಮಡಿದವರ ಹಾಗೂ ಗಾಯಗೊಂಡವರ ಕುಟುಂಬಗಳಿಗೆ ನೀಡಲಾಗಿರುವ ಪರಿಹಾರದ ವಿವರಗಳನ್ನು ಪ್ರಸ್ತಾವನೆಯಲ್ಲಿ ಲಗತ್ತಿಸಬೇಕು. ಹಾನಿಗೊಳಗಾದ ಗ್ರಾಮಗಳನ್ನು ಮಾದರಿ ಗ್ರಾಮಗಳನ್ನಾಗಿ ಅಭಿವೃದ್ಧಿಪಡಿಸಲು ನೀಲನಕ್ಷೆ ಸಿದ್ಧಪಡಿಸಬೇಕು. ಶುದ್ಧೀಕರಿಸಿದ ಕುಡಿಯುವ ನೀರನ್ನು ಮಾತ್ರ ಪೂರೈಸಬೇಕು. ಆದಷ್ಟು ಕುದಿಸಿದ ನೀರನ್ನೇ ಕುಡಿಯುವಂತೆ ಜನರಲ್ಲಿ ಜಾಗೃತಿ ಮೂಡಿಸಬೇಕು. ಪಡಿತರ ವಿತರಣಾ ಕೇಂದ್ರಗಳ ಮೂಲಕ ಆಹಾರವನ್ನು ವಿತರಿಸಬೇಕು. ಸಾಂಕ್ರಾಮಿಕ ರೋಗಗಳು ಹರಡದಂತೆ ನಿಗಾವಹಿಸಬೇಕು.

ವಿದ್ಯುತ್ ಹಾಗೂ ದೂರವಾಣಿ ಸಂಪರ್ಕವನ್ನು ಸುಸ್ಥಿತಿಗೆ ತರಲಾಗಿದ್ದರೂ ಕುಗ್ರಾಮಗಳಲ್ಲಿ ಈ ಸಂಪರ್ಕಗಳು ಇನ್ನೂ ಲಭ್ಯವಾಗಿಲ್ಲ ಎಂಬ ದೂರುಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಸಂಪರ್ಕ ಕಳೆದುಕೊಂಡಿರುವ ಗ್ರಾಮೀಣ ರಸ್ತೆಗಳನ್ನು ಆದ್ಯತೆಯ ಮೇಲೆ ದುರಸ್ತಿಗೊಳಿಸಬೇಕು. ಕೇಂದ್ರ ಸರಕಾರದ ನೆರವಿಗಾಗಿ ವಿವರವಾದ ಪ್ರಸ್ತಾವನೆಯನ್ನು ಎರಡು ದಿನಗಳೊಳಗಾಗಿ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚಿಸಿದರು.

ಸಭೆಯಲ್ಲಿ ಸಚಿವರಾದ ಕೃಷ್ಣಭೈರೇಗೌಡ, ಡಿ.ಕೆ.ಶಿವಕುಮಾರ್, ಯು.ಟಿ. ಖಾದರ್, ಸಾ.ರಾ.ಮಹೇಶ್, ರಾಜ್ಯ ಸರಕಾರದ ಮುಖ್ಯಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News